ಅಮಿತ್ ಶಾ ಮತ್ತೊಮ್ಮೆ ಹೋಂವರ್ಕ್ ಸರಿಯಾಗಿ ಮಾಡಿ ಬರಲಿ: ಲೆಕ್ಕ ಮುಂದಿಟ್ಟು ಚಾಟಿ ಬೀಸಿದ ಸಿದ್ದರಾಮಯ್ಯ

Update: 2021-01-18 13:23 GMT

ಬೆಂಗಳೂರು, ಜ.18: ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಯುಪಿಎ ಸರಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಯುಪಿಎಗಿಂತ ತಮ್ಮ ಸರಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿದೆ ಎಂದು ಒಂದಷ್ಟು ಸುಳ್ಳು ಅಂಕಿ-ಅಂಶಗಳನ್ನು ಮುಂದಿಟ್ಟು ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಗಾರಿದ್ದಾರೆ.

ವ್ಯಾಪಾರದಲ್ಲಿ ನುರಿತ ಗುಜರಾತಿಗಳು ಲೆಕ್ಕದಲ್ಲಿ ಪಕ್ಕಾ ಎನ್ನುವ ಅಭಿಪ್ರಾಯ ಇದೆ. ಆದರೆ ಆ ರಾಜ್ಯದವರಾದ ಪ್ರಧಾನಿ ಮತ್ತು ಗೃಹಸಚಿವರು ಬಾಯಿಬಿಟ್ಟರೆ ಸುಳ್ಳು ಲೆಕ್ಕಗಳೇ ಉದುರುತ್ತವೆ. ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿಹೋಗಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಕೇಳಬೇಕು ಮತ್ತು ತಾಳ್ಮೆಯಿಂದ ಉತ್ತರ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೊದಲನೆಯದಾಗಿ ಕೇಂದ್ರ ಸರಕಾರ ರಾಜ್ಯಕ್ಕೆ ನೀಡುವ ದುಡ್ಡು ಭಿಕ್ಷೆ ಅಲ್ಲ, ಅದು ನ್ಯಾಯಬದ್ಧವಾಗಿ ನಮಗೆ ಸಿಗಬೇಕಾಗಿರುವ ಪಾಲು. ಕರ್ನಾಟಕ ಪ್ರತಿವರ್ಷ ಅಂದಾಜು 2,20,000 ಕೋಟಿ ರೂಪಾಯಿಯಷ್ಟು ತೆರಿಗೆ-ಸುಂಕ ಮೂಲಕ ಕೇಂದ್ರ ಸರಕಾರಕ್ಕೆ ನೀಡುತ್ತದೆ. ಅದರಲ್ಲಿ ಹಣಕಾಸು ಆಯೋಗದ ಶಿಫಾರಸಿನ ಸೂತ್ರದಂತೆ ಆ ತೆರಿಗೆ ಹಣದಲ್ಲಿ ಶೇ.42ರಷ್ಟು ಹಣವನ್ನು ಕೇಂದ್ರ ಸರಕಾರ ನಮ್ಮ ರಾಜ್ಯಕ್ಕೆ ಹಿಂದಿರುಗಿ ಕೊಡಬೇಕು. ಆದರೆ ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಶೇ.42ರಷ್ಟು ಪಾಲು ಸಿಕ್ಕಿಲ್ಲ ಸಿದ್ದರಾಮಯ್ಯ ದೂರಿದ್ದಾರೆ.

ಯುಪಿಎ ಆಡಳಿತದ ಕಾಲದಲ್ಲಿ (2010/11-2013/14) ಹಣಕಾಸು ಆಯೋಗ ಕರ್ನಾಟಕಕ್ಕೆ ಕೇಂದ್ರ ತೆರಿಗೆಗಳ ಪಾಲು ನಿಗದಿಪಡಿಸಿದ್ದು 45,713 ಕೋಟಿ ರೂ., ನಾವು ಪಡೆದದ್ದು 47,036 ಕೋಟಿ ರೂ. ಇದು ನಿಗದಿಪಡಿಸಿದ್ದಕ್ಕಿಂತ 1,323 ಕೋಟಿ ರೂ.(ಶೇ.2.9ರಷ್ಟು) ಹೆಚ್ಚು ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಡಳಿತದ ಕಾಲದಲ್ಲಿ (2014-15 ರಿಂದ 2019-20) 13 ಮತ್ತು 14ನೆ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು 2,03,039 ಕೋಟಿ ರೂ., ಸಿಕ್ಕಿದ್ದು ಕೇವಲ 1,65,963 ಕೋಟಿ ರೂಪಾಯಿ ಮಾತ್ರ, ಅಂದರೆ 48,768 ಕೋಟಿ ರೂ.(ಶೇ.18.2ರಷ್ಟು) ಕಡಿಮೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

2019-20ರ ವರ್ಷಕ್ಕೆ ಕರ್ನಾಟಕಕ್ಕೆ ಹಣಕಾಸು ಆಯೋಗ ನಿಗದಿಪಡಿಸಿದ್ದ ತೆರಿಗೆ ಪಾಲು 48,768 ಕೋಟಿ ರೂ., ನಮಗೆ ಸಿಕ್ಕಿರುವುದು 30,919 ಕೋಟಿ ರೂ.ಮಾತ್ರ. ಇದರ ಜೊತೆಗೆ ಹತ್ತು ವರ್ಷಗಳ ಹಿಂದಿನ ಮತ್ತು ಈ ಹಣಕಾಸು ವರ್ಷದ ಕೇಂದ್ರ ಸರಕಾರದ ಬಜೆಟ್ ಗಾತ್ರದಲ್ಲಿನ ಹೆಚ್ಚಳವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಬಜೆಟ್ ಪ್ರಕಾರ 2010-21ನೇ ಹಣಕಾಸು ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು 28,591 ಕೋಟಿ ರೂ., ನನ್ನ ಪ್ರಕಾರ ಪ್ರಸಕ್ತ ವರ್ಷ ಈ ಮೊತ್ತ 15,017 ಕೋಟಿ ರೂ.ಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರಲ್ಲಿ ನಿರೀಕ್ಷೆಗಿಂತ 33,751 ಕೋಟಿ ರೂ.ಇಲ್ಲವೇ ರಾಜ್ಯ ಬಜೆಟ್ ಅಂದಾಜಿಗಿಂತ 24,789 ಕೋಟಿ ರೂ.ಗಳಷ್ಟು ಕಡಿಮೆಯಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಎಸ್‍ಟಿ ಪರಿಹಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಜಿಎಸ್‍ಟಿ ಪರಿಹಾರದಲ್ಲಿ ಅಂದಾಜು 25 ರಿಂದ 27 ಸಾವಿರ ಕೋಟಿ ರೂ.ಖೋತಾ ಆಗಬಹುದು. ಕೇಂದ್ರ ಸರಕಾರ ಇತ್ತೀಚೆಗೆ 18-19,000 ಕೋಟಿ ರೂ.ಗಳಷ್ಟೆ ಪರಿಹಾರ ನೀಡುವುದಾಗಿ ಹೇಳಿತ್ತು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರ ರಾಜ್ಯಕ್ಕೆ ನೀಡಲಿರುವ ಅನುದಾನ 31,570 ಕೋಟಿ ರೂ.ಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು 17,372 ಕೋಟಿ ರೂ.ಗಳಷ್ಟಾಗಬಹುದು. ಇದರಿಂದ 14,198 ಕೋಟಿ ರೂ.ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿ ರೂ.ಯಷ್ಟು ಅನುದಾನ ಪಡೆಯಬಹುದು. ಇದನ್ನು ಆಧರಿಸಿ ಪ್ರಸಕ್ತ ಹಣಕಾಸು ವರ್ಷದ ಆದಾಯ 1,80,217 ಕೋಟಿ ರೂ.ಗಳಾಗಬಹುದೆಂದು ರಾಜ್ಯ ಬಜೆಟ್‍ನಲ್ಲಿ ನಿರೀಕ್ಷಿಸಲಾಗಿತ್ತು. ಕೇಂದ್ರ ಅನುದಾನದ ಕಡಿತದಿಂದಾಗಿ ಇದು 1,14,758 ಕೋಟಿ ರೂ.ಗೆ ಇಳಿಯುವ ನಿರೀಕ್ಷೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ದಶಕಗಳಿಂದ ನಮ್ಮ ಒಟ್ಟು ಸಾಲ ಸುಮಾರು 3.2 ಲಕ್ಷ ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ಆದರೆ ಈಗಿನ ಒಂದೇ ವರ್ಷದಲ್ಲಿ ಸುಮಾರು 90,000 ಕೋಟಿ ರೂ.ಸಾಲ ಪಡೆಯಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಮೂಲಕ ಬಿಜೆಪಿ ಸರಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದಿಂದ ಸಿಗಬೇಕಾಗಿರುವ ತೆರಿಗೆ ಪಾಲು ಮತ್ತು ಅನುದಾನದ ಖೋತಾದಿಂದಾಗಿ ಆರ್ಥಿಕ ನಷ್ಟಕ್ಕೀಡಾಗಿರುವ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ 5,495 ಕೋಟಿ ರೂ.ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಈ ಅನುದಾನದ ನೆರವಿಗೂ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಈ ರೀತಿ ತಿರುಚಿದ ಅಂಕಿ ಅಂಶಗಳನ್ನು ಮುಂದಿಟ್ಟುಕೊಂಡು ಆರೋಪಗಳನ್ನು ಮಾಡುವ ಮೊದಲು ಕೇಂದ್ರ ಹೋಮ್ ಮಿನಿಸ್ಟರ್ ಅಮಿತ್ ಶಾ ಅವರು ಮತ್ತೊಮ್ಮೆ ತಮ್ಮ ಹೋಂವರ್ಕ್ ಸರಿಯಾಗಿ ಮಾಡಿಕೊಂಡು ಬರಬೇಕೆಂದು ಅವರಿಗೆ ಸಲಹೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News