ಪೊಲೀಸರ ಮೇಲೆಯೇ ಗುಂಡು ಹಾರಿಸಲು ಯತ್ನ: ಆರೋಪಿಗೆ ಗುಂಡಿಕ್ಕಿ ಬಂಧನ

Update: 2021-01-18 14:06 GMT

ಬೆಂಗಳೂರು, ಜ.18: ಕೊಲೆ ಪ್ರಕರಣವೊಂದರಲ್ಲಿ ಬಂಧಿಸಲು ಹೋದ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ ಆರೋಪದಡಿ ಓರ್ವನ ಮೇಲೆ ಇಲ್ಲಿನ ಪುಟ್ಟೇನಹಳ್ಳಿ ಠಾಣಾ ಪೊಲೀಸರು ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವ ಈ ಪೈಕಿ ಮೆಹರಾಝ್ ಎಂಬಾತ ಗುಂಡೇಟಿನಿಂದ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೋರ್ವ ಆರೋಪಿಯನ್ನು ಅಬ್ರಾಹಂ ಎಂದು ಪೊಲೀಸರು ಗುರುತಿಸಿದ್ದಾರೆ.

ಇಲ್ಲಿನ ಕೆಜಿ ಹಳ್ಳಿಯ ಠಾಣೆಯ ಸುಲ್ತಾನ್ ಎಂಬಾತನ ಕೊಲೆ ಪ್ರಕರಣದಲ್ಲಿ ಆರೋಪಿಗಳು ಪುಟ್ಟೇನಹಳ್ಳಿ ಅಪಾರ್ಟ್‍ಮೆಂಟ್‍ವೊಂದರಲ್ಲಿ ಅಡಗಿಕೊಂಡಿದ್ದರು ಎಂಬ ಮಾಹಿತಿ ಆಧರಿಸಿ ಪೊಲೀಸರ ತಂಡ ಬಂಧಿಸಲು ತೆರಳಿದೆ. ಈ ವೇಳೆ ಅಪಾರ್ಟ್‍ಮೆಂಟ್‍ನಲ್ಲಿಯೇ ಮೆಹೆರಾಝ್ ಪಿಸ್ತೂಲ್‍ನಿಂದ ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ವೇಳೆ ಆತ್ಮರಕ್ಷಣೆಗಾಗಿ ಎಎಸ್ಸೈ ದಿನೇಶ್ ನೇತೃತ್ವದ ತಂಡ ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮೆಹೆರಾಝ್ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News