ಗುಡಿ ಕಟ್ಟಿದರೆ, ಸಮಸ್ಯೆ ಪರಿಹಾರ ಆಗಲ್ಲ: ಕೋಡಿಹಳ್ಳಿ ಚಂದ್ರಶೇಖರ್
ಬಳ್ಳಾರಿ, ಜ.19: ಒಂದು ಮೂರ್ತಿ ಪ್ರತಿಷ್ಠಾಪಿಸಿ, ಗುಡಿ ಕಟ್ಟಿದರೆ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಲಕ್ಷಾಂತರ ರೈತರು ಹೋರಾಟ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಬಗೆಹರಿಸಲು ಕೇಂದ್ರ ಸರಕಾರ ಮುಂದಾಗಬೇಕು. ಆದರೆ, ಪ್ರಧಾನಿ ಮೋದಿ ಸರಕಾರ ರಾಮ ಮಂದಿರ ನಿರ್ಮಾಣದಲ್ಲಿ ತೊಡಗಿದೆ ಎಂದು ಆಕ್ಷೇಪಿಸಿದರು.
ರಾಮ ಮಂದಿರ ನಿರ್ಮಾಣ ಮಾಡಿ, ದೇಶದ ಜನರನ್ನು ಭಾವನಾತ್ಮಕ ವಿಚಾರಗಳಿಂದ ಗಮನ ಬೇರೆಡೆ ಸೆಳೆಯಲಾಗುತ್ತಿದೆ. ಅತ್ತ ರಾಷ್ಟ್ರ ರಾಜಧಾನಿಯಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿರುವ ರೈತರು, ದಿನನಿತ್ಯ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಮನ್ ಕೀ ಬಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಏಕೆ ಮಾತನಾಡುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.