ಕೃಷಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ರೈತರ ದಂಗೆ ನಿಶ್ಚಿತ: ಸಿದ್ದರಾಮಯ್ಯ ಎಚ್ಚರಿಕೆ

Update: 2021-01-20 15:23 GMT

ಬೆಂಗಳೂರು, ಜ. 20: ಕೃಷಿ ಕ್ಷೇತ್ರ ಹಾಗೂ ರೈತರಿಗೆ ಮಾರಕವಾದ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯದಿದ್ದರೆ ರೈತರು ದಂಗೆ ಏಳುವುದು ಖಚಿತ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ದಿಲ್ಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಿದ್ದ ಬೃಹತ್ ರ್‍ಯಾಲಿ ಹಾಗೂ ಫ್ರೀಡಂಪಾರ್ಕ್ ನಲ್ಲಿ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರೈತ ವಿರೋಧ ಕಾಯ್ದೆಗಳನ್ನು ಜಾರಿಗೆ ತಂದಿರುವ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಜನತೆ ಮುಂಬರುವ ಚುನಾವಣೆಯಲ್ಲಿ ಮನೆಗೆ ಕಳಹಿಸುವುದು ಖಚಿತ ಎಂದು ನುಡಿದರು.

ದೇಶದ ಜನತೆ ಎಂದೂ ಅನುಭವಿಸದ ಸಂಕಷ್ಟಗಳನ್ನು ಇದೀಗ ಅನುಭವಿಸುತ್ತಿದ್ದಾರೆ. ಕೇಂದ್ರ-ರಾಜ್ಯ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳು ನಮಗೆ ಬೇಡ. ಇವುಗಳಿಂದ ಅನುಕೂಲ ಇಲ್ಲ ಎಂದು ಜನತೆ ಒಕ್ಕೊರಲಿನಿಂದ ಹೇಳುತ್ತಿದ್ದಾರೆ. 58 ದಿನಗಳಿಂದ ರೈತರು ದಿಲ್ಲಿಯಲ್ಲಿ ಹಗಲು-ರಾತ್ರಿ ಎನ್ನದೆ, ಚಳಿ, ಗಾಳಿ, ಮಳೆ, ಬಿಸಿಲು ಲೆಕ್ಕಿಸದೆ ಚಳವಳಿ ನಡೆಸುತ್ತಿದ್ದಾರೆ ಎಂದರು.

ಹಠಮಾರಿ ಧೋರಣೆ ಸಲ್ಲ: ಪ್ರಧಾನಿ ಮೋದಿಗೆ ಮನುಷ್ಯತ್ವ ಇದ್ದಿದ್ದರೆ ಅವರ ಚಳವಳಿ ಹತ್ತಿಕ್ಕುವ ಪ್ರಯತ್ನ ಮಾಡಬಾರದಿತ್ತು. ಹತ್ತು ಬಾರಿ ರೈತರ ಜೊತೆ ಕೇಂದ್ರ ಮಾತುಕತೆ ನಡೆಸಿದೆ. ಆದರೆ, ಈವರೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿಲ್ಲ. ಕೇಂದ್ರದ ಹಠಮಾರಿ ಧೋರಣೆ ಇದಕ್ಕೆ ಕಾರಣ ಎಂದು ಸಿದ್ದರಾಮಯ್ಯ ದೂರಿದರು.

ಎರಡನೇ ಸ್ವಾತಂತ್ರ್ಯ ಹೋರಾಟ: ರೈತರು ತಮ್ಮ ಒತ್ತಾಯಕ್ಕೆ ಬದ್ಧರಾಗಿದ್ದಾರೆ. ಅವರ ಬೇಡಿಕೆ ನ್ಯಾಯಯುತವಾಗಿದೆ. ಹೀಗಾಗಿಯೇ ಸುಪ್ರೀಂಕೋರ್ಟ್ 3 ಕಾಯ್ದೆಗಳಿಗೆ ತಡೆ ಆದೇಶ ನೀಡಿದೆ. ಕಾಯ್ದೆಗಳು ಸಂವಿಧಾನಬದ್ಧವಾಗಿ ಇದ್ದಿದ್ದರೆ ಕೋರ್ಟ್ ತಡೆಯಾಜ್ಞೆ ನೀಡುತ್ತಿರಲಿಲ್ಲ. ರೈತರು ದಂಗೆ ಏಳಲು ಅವಕಾಶ ಮಾಡಿಕೊಡಬೇಡಿ ಎಂದು ನಾನು ಸೂಚ್ಯವಾಗಿ ಪ್ರಧಾನಿ ಮೋದಿಯವರಿಗೆ ಹೇಳಲು ಬಯಸುತ್ತೇನೆ. ಈಸ್ಟ್ ಇಂಡಿಯಾ ಕಂಪೆನಿ ವಿರುದ್ಧ ಈ ಹಿಂದೆ ದೇಶದ ಜನತೆ ದಂಗೆ ಎದ್ದಿದ್ದರು. ಇದೀಗ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಎರಡನೇ ಸ್ವಾತಂತ್ರ್ಯ ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರೈತರು ಅನ್ನದಾತರು. ಈ ಕಾನೂನುಗಳಿಂದ ಬೆಂಬಲ ಬೆಲೆ ನಿಂತು ಹೋಗಲಿದೆ. ಕೃಷಿ ಮಾರುಕಟ್ಟೆಗಳು ನಾಶವಾಗಲಿವೆ. ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳಿಗೆ ಮಣಿದು, ಅವರಿಗೆ ಗುಲಾಮರಾಗಿ ಕೇಂದ್ರ ಸರಕಾರ ಈ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಇದನ್ನು ವಿರೋಧಿಸಬೇಕಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಹೋರಾಟ ನಿರಂತರ-ಜೈಲಿಗೆ ಹೋಗಲು ಸಿದ್ದರಾಗಿ: ನಮ್ಮ ಹೋರಾಟ ಕೇವಲ ಭಾಷಣಕ್ಕೆ ಸೀಮಿತವಲ್ಲ. ಕಾಯ್ದೆಗಳನ್ನು ಹಿಂಪಡೆಯುವವರೆಗೆ ನಿರಂತರವಾಗಿ ಹೋರಾಟ ನಡೆಸುವ ಅಗತ್ಯವಿದೆ. ಪೊಲೀಸರು ನಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಅದಕ್ಕೂ ನಾವು ತಯಾರಾಗಿ ಇರಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಇದು ಹೋರಾಟದ ಆರಂಭ. ಇದು ಮುಂಬರುವ ವಿಧಾನಸಭೆ ಚುನಾವಣೆವರೆಗೆ ನಡೆಯಲಿದೆ. ರೈತರನ್ನು ಉಳಿಸಬೇಕಾದರೆ, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ಈ ಕಾಯ್ದೆಗಳನ್ನು ಹಿಂಪಡೆಯಲೇಬೇಕು. ರೈತರಿಗೆ ಮಾರುಕಟ್ಟೆ ಒದಗಿಸುತ್ತೇವೆ. ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಬೆಲೆ ನೀಡುತ್ತೇವೆಂದು ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಹೇಳಿತ್ತು. ಆದರೆ, ಈಗ ಅದಕ್ಕೆ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬೆಂಬಲ ಬೆಲೆ(ಎಂಎಸ್‍ಪಿ) ನಿಲ್ಲಿಸುವುದಿಲ್ಲ ಎಂದಾದರೆ ಕಾನೂನು ರೀತಿಯ ಭರವಸೆ ನೀಡಿ ಎಂದು ಚಳವಳಿ ನಿರತ ರೈತರು ಕೇಳುತ್ತಿದ್ದಾರೆ. ಅದರಂತೆ ಕಾನೂನು ಪ್ರಕಾರ ಭರವಸೆ ನೀಡಲು ಇರುವ ಅಡ್ಡಿಯಾದರೂ ಏನು? ಕೇಂದ್ರ ಸರಕಾರ ರೈತರ ಪರವಾಗಿದ್ದರೆ ಬೇಡಿಕೆ ಕೂಡಲೇ ಈಡೇರಿಸಬೇಕು. 3 ಕಾಯ್ದೆಗಳನ್ನು ಹಿಂಪಡೆಯದ ಹೊರತು ಉಂಟಾಗಿರುವ ಬಿಕ್ಕಟ್ಟಿಗೆ ಪರಿಹಾರ ಸಿಗುವುದಿಲ್ಲ. ಅಲ್ಲಿಯವರೆಗೆ ರೈತರು ಚಳವಳಿ ವಾಪಸ್ ಪಡೆಯುವುದಿಲ್ಲ. ಸ್ವಾಮಿನಾಥನ್ ವರದಿ ಜಾರಿಗೆ ತರುವುದಾಗಿಯೂ ಕೇಂದ್ರ ಭರವಸೆ ನೀಡಬೇಕು ಎಂದ ಸಿದ್ದರಾಮಯ್ಯ ಆಗ್ರಹಿಸಿದರು.

ತಿರುಗುಬಾಣವಾಗಲಿದೆ ಎಚ್ಚರ: ‘ರಾಜ್ಯದ ನಾನಾ ಜಿಲ್ಲೆಗಳಿಂದ ರೈತರು ಚಳವಳಿಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಹೊರಟಿದ್ದರು. ಆದರೆ, ಪೊಲೀಸರು ಅವಕಾಶ ಕೊಟ್ಟಿಲ್ಲ. ಕೊಟ್ಟಿದ್ದರೆ 25 ಸಾವಿರಕ್ಕೂ ಹೆಚ್ಚು ರೈತರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದರು. ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸರಕಾರದಿಂದ ನಡೆದಿದೆ. ಮುಂದಿನ ದಿನಗಳಲ್ಲಿ ಇದು ಬಿಜೆಪಿಗೇ ತಿರುಗುಬಾಣವಾಗಲಿದೆ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

‘ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಗೂಟ ಹೊಡೆದುಕೊಂಡಿರಲು ಸಾಧ್ಯವಿಲ್ಲ. ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದ ಸರಕಾರಗಳನ್ನು ಕಿತ್ತೊಗೆಲು ರೈತರು ಮತ್ತು ಜನತೆ ತೀರ್ಮಾನ ಮಾಡಿದ್ದು, ಚುನಾವಣೆಗಾಗಿ ಕಾಯುತ್ತಿದ್ದಾರೆ. ಅದಕ್ಕೆ ಮೊದಲು ಜನವಿರೋಧಿ ಕಾಯ್ದೆಗಳ ತಿದ್ದುಪಡಿಯನ್ನು ಹಿಂಪಡೆಯಿರಿ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News