ಖಾತೆ ಹಂಚಿಕೆ: ಸಚಿವರ 'ಅಸಮಾಧಾನ'ದ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ
Update: 2021-01-21 14:06 GMT
ಬೆಂಗಳೂರು, ಜ.21: ಸಚಿವ ಸಂಪುಟವನ್ನು ವಿಸ್ತರಣೆ ಮಾಡುವುದು ಹಾಗೂ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವುದು ಸುಲಭದ ಕೆಲಸವಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನೂತನ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳ ಬಗ್ಗೆ ಕೇಳಿ ಬರುತ್ತಿರುವ ಅಪಸ್ವರದ ಕುರಿತು ಗುರುವಾರ ತಮ್ಮ ಸರಕಾರಿ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಯಾರಿಗೂ ಅಸಮಾಧಾನವಿಲ್ಲ. ಎಲ್ಲ ಸಚಿವರು ಸಮಾಧಾನವಾಗಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮಾಡುವುದು ಹಾಗೂ ಸಚಿವರಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಸುಲಭದ ಕೆಲಸವಲ್ಲ. ಮಾಧುಸ್ವಾಮಿ, ಗೋಪಾಲಯ್ಯ ಸಮಾಧಾನವಾಗಿದ್ದಾರೆ. ಒಂದು ವೇಳೆ ಅವರಿಗೆ ಈಗ ಹಂಚಿಕೆಯಾಗಿರುವ ಸಚಿವ ಸ್ಥಾನ ಇಷ್ಟವಾಗದಿದ್ದರೆ ಮುಂದೆ ನೋಡೋಣ ಎಂದು ಮುಖ್ಯಮಂತ್ರಿ ಹೇಳಿದರು.