20 ಸಾವಿರ ಯುವಜನತೆಯನ್ನು ಮತದಾರರ ಪಟ್ಟಿಗೆ ಸೇರಿಸುವ ಗುರಿ: ಡಿಸಿ ಜಗದೀಶ್

Update: 2021-01-25 16:17 GMT

ಉಡುಪಿ, ಜ.25: ಉಡುಪಿ ಜಿಲ್ಲೆಯಲ್ಲಿ 10,16,660 ಮತದಾರರಿದ್ದು, ಈ ವರ್ಷ 20,000 ಯುವ ಜನತೆಯನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸೋಮ ವಾರ ಉಡುಪಿಯ ಪುರವನದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೊರೋನದಿಂದ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳದ ಹಿನ್ನಲೆಯಲ್ಲಿ 9,702 ಮಂದಿ ಯುವ ಮತದಾರರ ಸೇರ್ಪಡೆಯಾ ಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಅರ್ಹರಾಗಿದ್ದಾರೆ. ಜಿಲ್ಲೆಯ ಎಲ್ಲಾ ಕಾಲೇಜು ಗಳಿಗೆ ಕೂಡಲೇ ಮತದಾರರ ಪಟ್ಟಿ ಸೇರ್ಪಡೆ ಕುರಿತು ಅರ್ಜಿ ಫಾರಂಗಳನ್ನು ಕಳುಹಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎನ್. ಸುಬ್ರಹ್ಮಣ್ಯ, ಚುನಾವಣಾ ಸಂದರ್ಭದಲ್ಲಿ ಮತದಾರರು, ಅಭ್ಯರ್ಥಿಗಳು ಒಡ್ಡುವ ಯಾವುದೇ ಆಮಿಷಗಳಿಗೆ ಬಲಿಯಾಗದೆ, ಪ್ರಾಮಾಣಿಕವಾಗಿ ಮತ್ತು ನ್ಯಾಯ ಸಮ್ಮತವಾಗಿ ಮತ ಚಲಾಯಿಸಿ, ಚುನಾವಣೆಯ ಘತೆಯನ್ನು ಎತ್ತಿ ಹಿಡಿಯ ಬೇಕು ಎಂದು ಚುನಾವಣೆಯಲ್ಲಿ ಹಣ ಹಂಚುವುದನ್ನು ತಡೆಯುವ ನಿಟ್ಟಿನಲ್ಲಿ, ಚುನಾವಣೆ ಗಿಂತ ಕನಿಷ್ಠ 2 ವರ್ಷಗಳ ಮೊದಲೇ ಹಣ ಸಂಗ್ರಹ ಮಾಡುವವರ ಕುರಿತು ನಿಗಾವಹಿಸಬೇಕಾಗಿದೆ. ಇದರಿಂದ ಮತದಾರರಿಗೆ ಅಕ್ರಮ ಹಣ ವಿತರಣೆ ಮಾಡುವುದನ್ನು ತಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಚಲಾಯಿಸಿ. ಪ್ರಜಾಪ್ರುತ್ವದ ಯಶಸ್ಸಿಗೆ ಚುನಾವಣೆ ಅಗತ್ಯವಾಗಿದ್ದು, ಮತದಾನದಿಂದ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿದಲ್ಲಿ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಯುವ ಮತದಾರರಿಗೆ ಎಪಿಕ್ ಕಾರ್ಡ್ ವಿತರಣೆ ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಜಿಪಂ ಸಿಇಓ ಡಾ.ನವೀನ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣು ವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಉಡುಪಿ ತಹ ಶೀಲ್ದಾರ್ ಪ್ರದೀಪ್ ಕುರ್ಡೆಕರ್, ಡಿಡಿಪಿಐ ಎನ್.ಎಚ್.ನಾಗೂರ, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News