ದಿಲ್ಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರಕಾರ ವಿಫಲ: ಶರದ್ ಪವಾರ್
Update: 2021-01-26 13:15 GMT
ಮುಂಬೈ: ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರಪ್ರದೇಶದ ರೈತರುಗಳು ಶಿಸ್ತಿನಿಂದ ಪ್ರತಿಭಟನೆ ನಡೆಸುತ್ತಿದ್ದರು.ಆದರೆ, ಸರಕಾರ ಅವರನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಹೀಗಾಗಿ ಅವರು ಸಂಯಮ ಕಳೆದುಕೊಂಡು ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಿದ್ದರು. ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವುದು ಕೇಂದ್ರ ಸರಕಾರದ ಜವಾಬ್ದಾರಿ. ಆ ನಿಟ್ಟಿನಲ್ಲಿ ಅದು ವಿಫಲವಾಗಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಇಂದು ದಿಲ್ಲಿಯಲ್ಲಿ ನಡೆದಿರುವ ಘಟನೆಯನ್ನು ಯಾರೂ ಬೆಂಬಲಿಸುವುದಿಲ್ಲ. ಆದರೆ ಇದನ್ನು ನಿರ್ಲಕ್ಷಿಸುವ ಹಾಗಿಲ್ಲ. ಕೇಂದ್ರ ಸರಕಾರ ತನ್ನ ಹೊಣೆಗಾರಿಕೆ ನಿಭಾಯಿಸದ ಕಾರಣ ಶಾಂತರೀತಿಯಲ್ಲಿ ಪ್ರತಿಭಟನೆಯಲ್ಲಿ ಕುಳಿತವರು ಸಿಟ್ಟಿಗೆದ್ದಿದ್ದಾರೆ. ಸರಕಾರವು ಪ್ರಬುದ್ದತೆಯಿಂದ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಪವಾರ್ ಹೇಳಿದ್ದಾರೆ.