'ಆರೋಗ್ಯ ಸೇತು' ಮಾಹಿತಿ ಹಂಚಿಕೆ ಮಾಡಿಕೊಳ್ಳದಂತೆ ಕೇಂದ್ರ ಸರಕಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಬೆಂಗಳೂರು, ಜ.26: ಕೋವಿಡ್-19 ಸಂಬಂಧ ಕೇಂದ್ರ ಸರಕಾರ ಬಿಡುಗಡೆಗೊಳಿಸಿದ್ದ ಆರೋಗ್ಯ ಸೇತು ಆ್ಯಪ್ ಮೂಲಕ ಸಂಗ್ರಹಿಸಿದ ದತ್ತಾಂಶ ಹಂಚಿಕೆ ಮಾಡಿಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ತಡೆ ನೀಡಿದೆ.
ಆರೋಗ್ಯ ಸೇತು ಆ್ಯಪ್ ಮೂಲಕ ಸಂಗ್ರಹಿಸಿದ ದತ್ತಾಂಶ ಇತರೆ ಸರಕಾರಿ ಅಧಿಕಾರಿಗಳು ಮತ್ತು ಏಜೆನ್ಸಿಗಳೊಂದಿಗೆ ಹಂಚಿಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರಕಾರ ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು (ಎನ್ಐಸಿ) ತಡೆಹಿಡಿದಿದೆ ಎಂದು ವರದಿಯಾಗಿದೆ.
ಇತ್ತೀಚಿಗೆ ನಗರದ ಸಾಫ್ಟ್ ವೇರ್ ಇಂಜಿನಿಯರ್ ಅರ್ಜಿದಾರ ಅನಿವರ್ ಎ.ಅರವಿಂದ್ ಅವರು ಸಲ್ಲಿಸಿದ್ದ ಅರ್ಜಿಯ ಕುರಿತು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ.
ಆರೋಗ್ಯ ಸೇತು ಅಪ್ಲಿಕೇಶನ್ಗೆ ಅಥವಾ ಅದರ ಮೂಲಕ ಡೇಟಾದ ಸಂಗ್ರಹ, ಬಳಕೆಯನ್ನು ತಡೆಯಲು ಪೀಠವು ನಿರಾಕರಿಸಿದ್ದು, ಬಳಕೆದಾರರ ತಿಳುವಳಿಕೆಯುಳ್ಳ ಒಪ್ಪಿಗೆ ಬಳಿಕವೇ ಆ್ಯಪ್ ಮೂಲಕ ದತ್ತಾಂಶ ಸಂಗ್ರಹಿಸಲಾಗುತ್ತಿದೆ ಎಂದು ಹೈಕೋರ್ಟ್ ಹೇಳಿದೆ.
ಆರೋಗ್ಯ ಸೇತು ಆ್ಯಪ್ ಮೂಲಕ ದತ್ತಾಂಶ ಸಂಗ್ರಹಣೆ ಮಾಡುತ್ತಿರುವ ಕೇಂದ್ರ ಸರಕಾರಕ್ಕೆ ತಡೆ ನೀಡಬೇಕು ಎಂದು ಕೋರಿ ಅರ್ಜಿದಾರರು ಸಹ ಮನವಿ ಸಲ್ಲಿಸಿದ್ದರು.