ಗಾಂಧಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು, ಜ.30: ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಗಾಂಧೀಜಿ ಯಾರನ್ನೂ ಶತ್ರುಗಳು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯನ್ನು ಹತ್ಯೆ ಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದ ಎಂಬುದನ್ನು ನಾವು ಮರೆಯಬಾರದು ಎಂದು ಸಿದ್ದರಾಮಯ್ಯ ನುಡಿದರು.
ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ ಎಂದರು.
ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮ್ಮ ಆದರ್ಶಪ್ರಾಯವೋ, ಅದೇ ರೀತಿ ಅವರ ಸಾವು ಕೂಡಾ ನಮಗೆ ಪಾಠವಾಗಿದೆ. ಗಾಂಧೀಜಿ ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ. ಅವರು ಬಹುಮುಖ್ಯವಾದ ಕೋಮು ಸಾಮರಸ್ಯಕ್ಕಾಗಿ ಕೂಡಾ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು. ಈ ತನ್ನ ಹೋರಾಟಕ್ಕಾಗಿಯೇ ತನ್ನ ಪ್ರಾಣವನ್ನು ಕಳೆದುಕೊಂಡರು. ಆದರೆ ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ.
ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂದವರು ಖೇದ ವ್ಯಕ್ತಪಡಿಸಿದರು.
ಇಂದು ಕೃಷಿ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರಕಾರ ದೌರ್ಜನ್ಯ ನಡೆಸುತ್ತಿದೆ. ಇದು ಹಿಂಸೆಯನ್ನು ಕೂಡಾ ಅಹಿಂಸೆಯ ಮೂಲಕ ಹೋರಾಡಿ ಗೆದ್ದ ಮಹಾತ್ಮಗಾಂಧೀಜಿ ಅವರಿಗೆ ತೋರುವ ಅಗೌರವವಾಗಿದೆ. ಪ್ರಸನ್ನವದನ ಪ್ರದಾನಿ ರೈತರು ಎರಡು ತಿಂಗಳಿನಿಂದ ದಿಲ್ಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೂ ಪ್ರದಾನಿಯವರು ಏನೂ ನಡೆದಿಲ್ಲ ಎಂಬಂತೆ ಪ್ರಸನ್ನವದನರಾಗಿದ್ದಾರೆ. ಕಾಯ್ದೆಗಳು ರೈತರ ಪರ ಎಂದು ರಾಷ್ಟ್ರಪತಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರಕಾರ ರಾಷ್ಡ್ರಪತಿಯಿಂದ ಸುಳ್ಳು ಹೇಳಿಸಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.