ಜಾಲತಾಣಗಳಲ್ಲಿ ಪಕ್ಷದ ಧ್ವನಿ ಮೊಳಗಿಸಲು ಜ್ಞಾನ ಅಗತ್ಯ: ಡಾ.ಅಶ್ವತ್ಥ ನಾರಾಯಣ

Update: 2021-02-07 12:17 GMT

ಬೆಂಗಳೂರು, ಫೆ. 7: ಸರಕಾರ ರೂಪಿಸುವ ಜನಪರ ಯೋಜನೆಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರ, ಸರಳವಾಗಿ ದಾಟಿಸಬಹುದು. ಈ ಕಾರ್ಯಗಳನ್ನು ಸಮರ್ಥವಾಗಿ ಮಾಡುವ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಲಹೆ ಮಾಡಿದ್ದಾರೆ.

ರವಿವಾರ ನಗರದಲ್ಲಿ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ಇವತ್ತು ಪರಿಣಾಮಕಾರಿಯಾಗಿ ಬೆಳೆದಿವೆ. ಇವುಗಳನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕು ಹಾಗೂ ಆ ಬಗ್ಗೆ ನಿಪುಣತೆಯನ್ನು ಸಾಧಿಸಿಕೊಳ್ಳಬೇಕು ಎಂದು ಹೇಳಿದರು.

ಮಾಧ್ಯಮ ಕ್ಷೇತ್ರ ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿದೆ. ಸಾಂಪ್ರದಾಯಿಕ ಮಾಧ್ಯಮ ಒಂದೆಡೆಯಾದರೆ, ಸಾಮಾಜಿಕ ಜಾಲತಾಣಗಳ ರೂಪದಲ್ಲಿ ನವ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಇಂಥ ಸಂದರ್ಭದಲ್ಲಿ ಜಾಲತಾಣಗಳಲ್ಲಿ ಪಕ್ಷದ ಧ್ವನಿ ಮೊಳಗಿಸಬೇಕಾದರೆ ಅದಕ್ಕೆ ಅಗತ್ಯವಾದ ಜ್ಞಾನ, ಅಧ್ಯಯನ, ಪೂರ್ವಸಿದ್ಧತೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಅವರು ಒತ್ತಿ ಹೇಳಿದರು.

ಸರಕಾರ ಯಾವ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ? ಆ ಕಾರ್ಯಕ್ರಮಗಳು ಯಾರಿಗಾಗಿ? ಅವುಗಳ ಉದ್ದೇಶವೇನು? ಎಂಬ ಅಂಶಗಳ ಬಗ್ಗೆ ಅರಿವು ಹೊಂದಿರಬೇಕು. ಅದೇ ರೀತಿ ಜನಪರವಾಗಿ ಪಕ್ಷ ಯಾವ ದಿಕ್ಕಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬ ತಿಳಿವಳಿಕೆಯೂ ಇರಬೇಕು ಎಂದು ಅವರು ವಿವರಿಸಿದರು.

ಸಂಸದ ಪಿ.ಸಿ.ಮೋಹನ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಾಲತಾಣ ವಿಭಾಗದ ಸಂಚಾಲಕ ವಿನೋದ್ ಕೃಷ್ಣಮೂರ್ತಿ, ಸಹ ಸಂಚಾಲಕ ಪ್ರಶಾಂತ್ ಜಾಧವ್ ಉಪಸ್ಥಿತರಿದ್ದರು. ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಪ್ರಕೋಷ್ಠದಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News