ವಿಕಲಚೇತನ, ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ 500 ಕೋಟಿ ರೂ. ಅನುದಾನಕ್ಕೆ ಮನವಿ: ಶಶಿಕಲಾ ಜೊಲ್ಲೆ

Update: 2021-02-11 14:08 GMT

ಬೆಂಗಳೂರು, ಫೆ.11: ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಹಿಳೆಯರು, ಮಕ್ಕಳು ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ 2021-22ನೇ ಸಾಲಿನ ಆಯವ್ಯಯದಲ್ಲಿ ಸುಮಾರು 500 ಕೋಟಿ ರೂ.ಅನುದಾನಕ್ಕೆ ಮನವಿ ಮಾಡಿದ್ದೇನೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ದೊರೆತರೆ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಿಳಾ ಸಮುದಾಯದ ಸ್ವಾವಲಂಬಿ ಜೀವನಕ್ಕೆ ಅನುವಾಗುವಂತೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಸ್ತ್ರೀ ಶಕ್ತಿ ಸಂಘಗಳು ಮತ್ತು ಸ್ವಸಹಾಯ ಸಂಘಗಳು ಉತ್ಪಾದಿಸುವ ಉತ್ಪನ್ನಗಳಿಗೆ ಇ-ಮಾರುಕಟ್ಟೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಜೊತೆಗೆ ವಿಕಲಚೇತನರ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗುವುದೆಂದು ಅವರು ತಿಳಿಸಿದ್ದಾರೆ.

ವಿಲಚೇತನರ ಸಂಘ, ಸಂಸ್ಥೆಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿಕಲಚೇತನರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಇದರ ಜೊತೆಗೆ ತಂದೆ-ತಾಯಿಗಳನ್ನು ಚೆನ್ನಾಗಿ ನೋಡಿಕೊಳ್ಳುವ ಮಕ್ಕಳಿಗೂ ಪ್ರಶಸ್ತಿ ನೀಡುವ ಚಿಂತನೆಯಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News