ಪಾರ್ಕಿಂಗ್ ಜಾಗ ಅತಿಕ್ರಮಣವಾಗಿದ್ದಲ್ಲಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಿ : ಡಿಸಿ ಜಗದೀಶ್ ಸೂಚನೆ
ಉಡುಪಿ, ಫೆ.11:ನಗರದ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವಾಗ ಪಾರ್ಕಿಂಗ್ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಪಾರ್ಕಿಂಗ್ಗೆ ಜಾಗ ಬಿಡದೇ ಆ ಸ್ಥಳವನ್ನು ಅತಿಕ್ರಮಿಸಿರುವವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಗುರುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಉಡುಪಿ ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಮತ್ತು ವಾಹನಗಳ ಪಾರ್ಕಿಂಗ್ಗೆ ತೀವ್ರ ಸಮಸ್ಯೆಯಾಗುತ್ತಿದೆ. ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಛಯಗಳನ್ನು ನಿರ್ಮಿಸುವಾಗ, ಪಾರ್ಕಿಂಗ್ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಆ ಸ್ಥಳವನ್ನು ಅತಿಕ್ರಮಿಸಿ, ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಿರುವ ಸಂಬಂದಪಟ್ಟ ಮಾಲಕರಿಗೆ 15 ದಿನದಲ್ಲಿ ತೆರವುಗೊಳಿಸುವ ಕುರಿತು ನೊಟೀಸ್ ನೀಡಿ. ಅತಿಕ್ರಮಣ ತೆರವು ಗೊಳಿಸದಿದ್ದಲ್ಲಿ ಸಂಬಂಧಪಟ್ಟ ವಾಣಿಜ್ಯ ಸಂಸ್ಥೆಯ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದು ಸೇರಿದಂತೆ ಅತಿಕ್ರಮಣ ಪ್ರದೇಶವನ್ನು ನಗರಸಭೆ ವತಿಯಿಂದ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.
ನಗರ ಪ್ರದೇಶದಲ್ಲಿನ ಪಾಟ್ಹೋಲ್ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಹಂಪ್ಸ್ಗಳನ್ನು ನಿರ್ಮಿಸಿ. ಹಂಪ್ಸ್ಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸುವಂತೆ ಅವರು ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ಸ್ಪಾಟ್ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಸೂಚನಾ ಫಲಕಗಳನ್ನು ಅಳವಡಿಸಿ. ಪಾಟ್ಹೋಲ್ಗಳನ್ನು ಮುಚ್ಚಲು ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಂಡು ಅಪಘಾತಗಳು ಸಂಭವಿಸದಂತೆ ಎಚ್ಚರವಹಿಸಿ. ಕೋಟ ಬಳಿಯ ಅಂಡರ್ಪಾಸ್ನ್ನು ಏಕಕಾಲದಲ್ಲಿ ಎರಡು ವಾಹನಗಳು ಸಂಚರಿಸಲು ಸಾಧ್ಯವಾಗುವಂತೆ ಅಗಲಗೊಳಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್ಗಳಿಗೆ ಸೂಚಿಸಿದರು.
ಪಾಲಕರಿಗೂ ಜೈಲು ಶಿಕ್ಷೆ: 18 ವರ್ಷಕ್ಕಿಂತ ಕೆಳಗಿನ ಮಕ್ಕಳು ರಸ್ತೆ ಸುರಕ್ಷತಾ ನಿಯಮಗಳನ್ನು ಮೀರಿ, ವಾಹನಗಳನ್ನು ಚಲಾಯಿಸಿ ಅಲ್ಲಲ್ಲಿ ಅಪಘಾತಗಳಿಗೆ ಕಾರಣವಾಗುತ್ತಿದ್ದಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ. ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದಲ್ಲಿ ಪೋಷಕರೂ ಸಹ ಜೈಲು ಶಿಕ್ಷೆಗೆ ಒಳಪಡುತ್ತಾರೆ ಎಂಬ ಬಗ್ಗೆ ಎಚ್ಚರ ಮೂಡಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಕಲ್ಸಂಕ ಬಳಿ ಕೃಷ್ಣಮಠಕ್ಕೆ ಪ್ರವೇಶಿಸುವ ಸ್ಥಳದಲ್ಲಿ ಸೇತುವೆಯನ್ನು ಅಗಲಗೊಳಿಸಿದಲ್ಲಿ ಅಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯ ವಾಗಲಿದೆ. ಜಿಲ್ಲೆಯಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ ಸಂಬಂಧಿಸಿದ ಇಲಾಖೆಗಳು ಕ್ರಿಯಾ ಯೋಜನೆಯ ಚಟುವಟಿಕೆಗಳು ಮತ್ತು ಅವುಗಳಿಗೆ ತಗಲುವ ಅಂದಾಜು ವೆಚ್ಚದ ವಿವರಗಳನ್ನು ಶೀಘ್ರದಲ್ಲಿ ಸಲ್ಲಿಸುವಂತೆ ಡಿಸಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರ, ಎಎಸ್ಪಿಕುಮಾರ್ಚಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಪೌರಾಯುಕ್ತ ಉದಯ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.