ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯ: ಕೃಷಿ ಸಚಿವ ಬಿ.ಸಿ.ಪಾಟೀಲ್

Update: 2021-02-11 17:36 GMT

ಬೆಂಗಳೂರು, ಫೆ.11: ಗುಜರಾತ್ ಹಾಗೂ ಛತ್ತಿಸ್‍ಗಢ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಿಂತನೆ ನಡೆಸಿದ್ದಾರೆ.

ಗುರುವಾರ ವಿಕಾಸಸೌಧದ ಕಚೇರಿಯಲ್ಲಿ ‘ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ’ ನಡೆಸಿದ ಅವರು, ಆರೋಗ್ಯದ ದೃಷ್ಟಿಯಿಂದ ಸಾವಯವದತ್ತ ಜನರು ಹೆಚ್ಚು ವಾಲುತ್ತಿರುವುದರಿಂದ ಸಾವಯವ ಪದಾರ್ಥಗಳಿಗೆ ಹೆಚ್ಚು ಮಹತ್ವ ದೊರೆಯುತ್ತಿದೆ. ಹೀಗಾಗಿ ಸಾವಯವ ಕೃಷಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದರು.

ಗುಜರಾತ್ ಹಾಗೂ ಛತ್ತಿಸಗಢ್ ರಾಜ್ಯಗಳಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯಗಳಿವೆ. ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಬಗ್ಗೆ ಸಾವಯವ ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಕುರಿತು ಚಿಂತನೆ ನಡೆಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಅವರು ಹೇಳಿದರು.

ಕೃಷಿ ಚಟುವಟಿಕೆಗಳಿಗೆ ಕೃಷಿ ಭೂಮಿಗೆ ಹೆಚ್ಚಿನ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕರ ಉತ್ಪನ್ನಗಳನ್ನು ಪಡೆಯಲು ಸಾಧ್ಯವಿಲ್ಲ. ರಾಸಾಯನಿಕ ಬಳಕೆ ಹೆಚ್ಚಿದಷ್ಟು ಭೂಮಿಯ ಪೋಷಕಾಂಶ ಕುಗ್ಗುವುದರ ಜೊತೆಗೆ ರಾಸಾಯನಿಕಗಳನ್ನು ಹೆಚ್ಚಾಗಿ ಬಳಸುವ ರೈತನ ಆರೋಗ್ಯದ ಮೇಲೂ ಸಹ ದುಷ್ಪರಿಣಾಮ ಬೀರುವುದು ಹೆಚ್ಚಾಗಿದೆ. ಹೀಗಾಗಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಭೂಮಿಗೆ ವಿಷಹಾಕಬಾರದೆಂದು ಸಂಕಲ್ಪ ತೊಟ್ಟು ಸಾವಯವದತ್ತ ಮುಖ ಮಾಡಬೇಕು. ಒಂದು ಜಿಲ್ಲೆ ಒಂದು ಉತ್ಪನ್ನದಡಿ ಸಿರಿಧಾನ್ಯ ಹಾಗೂ ಸಾವಯವ ಪದಾರ್ಥಗಳ ಸಂಸ್ಕರಣೆ ಮಾರುಕಟ್ಟೆ ವಿಸ್ತರಣೆಗೆ ಹೆಚ್ಚು ಒತ್ತು ನೀಡಬೇಕು. ಸ್ಥಳೀಯ ಧಾನ್ಯಗಳನ್ನು ಸಾವಯವ ಪಟ್ಟಿಗೆ ಸೇರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದ ಅವರು, ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಸಾವಯನ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕೆಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಸಾವಯವ ಕೃಷಿಗಾಗಿ ಸಂಪನ್ಮೂಲ ವ್ಯಕ್ತಿಗಳನ್ನು ಹೆಚ್ಚಿಸಬೇಕು. ಮಾದರಿ ಸಂಪನ್ಮೂಲ ವ್ಯಕ್ತಿಗಳು ಕೃಷಿಕರಿಗೆ ಸಾವಯವ ಕುರಿತು ಇನ್ನಷ್ಟು ಮಾಹಿತಿ ನೀಡಬೇಕು. ಸಾವಯವ ಗೊಬ್ಬರವನ್ನು ಸರಕಾರದ ಸಂಸ್ಥೆಗಳೆ ಪ್ರಮಾಣಿಕರಿಸುವಂತಾಗಬೇಕು. ಗುಣಮಟ್ಟದ ಪ್ರಮಾಣೀಕೃತ ಸಾವಯವ ಗೊಬ್ಬರ ತಯಾರಿಕೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷ ಆನಂದ್ ಉಪ್ಪಳ್ಳಿ, ಕೃಷಿ ನಿರ್ದೇಶಕ ಶ್ರೀನಿವಾಸ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವರಾಜ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News