ಆರ್ಥಿಕ ಸಂಕಷ್ಟದ ಕಾರಣ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಅನಿವಾರ್ಯ: ಸಚಿವ ಎಸ್.ಟಿ.ಸೋಮಶೇಖರ್

Update: 2021-02-13 07:58 GMT

ಮೈಸೂರು, ಫೆ.13: ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಕಾರಣ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಅನಿವಾರ್ಯ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಬಿಜೆಪಿ ಕರ್ನಾಟಕ ಮಾಧ್ಯಮ ವಿಭಾಗದ ವತಿಯಿಂದ ಕೇಂದ್ರ ಬಜೆಟ್ ಕುರಿತು ಮಾತನಾಡಿದ ಅವರು, ಕೋವಿಡ್-19 ಸಂಕಷ್ಟವು ದೇಶದ ಆರ್ಥಿಕ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರಿದೆ ಹಾಗಾಗಿ ಅನಿವಾರ್ಯವಾಗಿ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಬೇಕಿದೆ. ಇದರಿಂದ ಸ್ವಲ್ಪ ಸಾರ್ವಜನಿಕರಿಗೆ ತೊಂದರೆಯಾಗಿರಬಹುದು ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.

ದೇಶ ಮತ್ತು ರಾಜ್ಯದ ಜನರ ಹಿತ ನಮಗೆ ಮುಖ್ಯ, ಪೆಟ್ರೋಲ್, ಡೀಸೆಲ್ ಬೆಲೆ ಹಚ್ಚಳದಿಂದ  ದಿನಬಳಕೆ ವಸ್ತುಗಳ ಬೆಲೆಯೂ ಸ್ವಲ್ಪ ಹೆಚ್ಚಾಗಿದೆ. ನಮಗೆ ಸಾರ್ವ ಜನಿಕರ ಮೇಲೆ ಹೊರೆ ಹೇರಬೇಕು ಎಂಬ ಉದ್ದೇಶವಿಲ್ಲ. ಆದರೆ ಆರ್ಥಿಕ ಸಮಸ್ಯೆ ಸರಿದೂಗಿಸಲು ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಹೆಚ್ಚು ಅನುದಾನವನ್ನು ನೀಡಿದ್ದಾರೆ. 33 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಹೆಚ್ಚಿನ ಹೊತ್ತು ನೀಡಿದ್ದು, 1,197 ಕಿ.ಮೀ.ನಿರ್ಮಾಣಕ್ಕೆ 10,904 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸಮಗ್ರ ಆರೋಗ್ಯ ಯೋಗಕ್ಷೇಮಕ್ಕೆ ಹೆಚ್ಚಿನ ಹೊತ್ತು ನೀಡಲಾಗಿದೆ. ಶುದ್ಧ ನೀರು, ಮೂಲ ಸೌಕರ್ಯ, ರೈಲ್ವೆ ಅಭಿವೃದ್ಧಿ, ಅನಿಲ ಪೂರೈಕೆ, ಇಂಧನ ಕ್ಷೇತ್ರ, ಎಪಿಎಂಸಿಗಳು ಸೇರಿದಂತೆ ಹಲವಾರು ಅಭಿವೃದ್ಧಿಗೆ ಹೆಚ್ಚು ಹಣ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಇತ್ತೀಚೆಗೆ ನಿಧನರಾದ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಚ್.ವಿಶ್ವನಾಥ್ ನನ್ನನ್ನು  ಆಯ್ಕೆಮಾಡಬೇಕು  ಎಂದು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸೋಮಶೇಖರ್, ಧರ್ಮೇಗೌಡರು ಚಿಕ್ಕಮಗಳೂರು ಜಿಲ್ಲೆಯಿಂದ ಆಯ್ಕೆಯಾಗಿದ್ದವರು. ವಿಶ್ವನಾಥ್ ಅಲ್ಲಿಂದ ಹೇಗೆ ಆಯ್ಕೆಯಾಗಲು ಸಾಧ್ಯ, ಇದು ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದರು‌.

ಯಾರೂ ಅಹಿಂದ ಸಮಾವೇಶ ಮಾಡಲು ಹೊರಟಿದ್ದಾರೊ ಅವರು ಅಸ್ತಿತ್ವ ಕಳೆದುಕೊಂಡಿದ್ದಾರೆ. ಅದಕ್ಕೆ ಅಹಿಂದ ಹೆಸರಿನಲ್ಲಿ ಮುಂಚೂಣಿಗೆ ಬರಲು ಯತ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯರ ಹೆಸರು ಪ್ರಸ್ತಾಪಿಸದೆ ಟೀಕಿಸಿದರು.

ಚುನಾವಣೆಗೆ ಇನ್ನೂ ಎರಡು ವರ್ಷಗಳ ಕಾಲ ಇದೆ. ಇಂತಹ ಪರಿಸ್ಥಿತಿಯಲ್ಲಿ ಅಹಿಂದ ಅಗತ್ಯವಿಲ್ಲ, ತಮ್ಮ ಸ್ವಂತ ವ್ಯಕ್ತಿತ್ವ ಉಳಿಸಿಕೊಳ್ಳಲು ಮಾಡುತ್ತಿರುವ ಷಡ್ಯಂತ್ರ ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ರಾಜೇಂದ್ರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News