ಕೊರೋನ ವಾರಿಯರ್ಸ್ ಗೆ ವಿಮೆ ಪರಿಹಾರ ವಿಳಂಬ: ಸರಕಾರಕ್ಕೆ ಲೋಕಾಯುಕ್ತದಿಂದ ನೋಟಿಸ್ ಜಾರಿ

Update: 2021-02-16 18:17 GMT

ಬೆಂಗಳೂರು, ಫೆ.16: ಕೊರೋನ ಸೋಂಕು ನಡುವೆ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೊರೋನ ವಾರಿಯರ್ಸ್‍ಗೆ ಘೋಷಿಸಿದ್ದ ವಿಮೆ ಪರಿಹಾರ ಪಾವತಿ ವಿಳಂಬಕ್ಕೆ ಸಂಬಂಧಿಸಿದಂತೆ ರಾಜ್ಯ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು, ಸರಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬಿಬಿಎಂಪಿ ಆಯುಕ್ತರು ಸೇರಿ 11 ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ್ದಾರೆ.

ಮೃತಪಟ್ಟ ಕೊರೋನ ವಾರಿಯರ್ಸ್ ಕುಟುಂಬ ಸದಸ್ಯರ ಅಹವಾಲುಗಳನ್ನು ಆಲಿಸಬೇಕು. ಕೂಡಲೇ ಸಮಸ್ಯೆ ಬಗೆಹರಿಸಬೇಕು. ಈ ಸಂಬಂಧ ಮೂರು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠವು ನಿರ್ದೇಶನ ನೀಡಿದೆ.

ಜತೆಗೆ ಆರೋಗ್ಯ ಕಾರ್ಯಕರ್ತರು, ಪೊಲೀಸ್, ನಗರ ಸ್ಥಳೀಯ ಸಂಸ್ಥೆಗಳ ನೌಕರರು, ಆಶಾ ಕಾರ್ಯಕರ್ತೆ ಸೇರಿ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಮೃತಪಟ್ಟವರು ಎಷ್ಟು ಎಂಬ ವಿವರ ಸಲ್ಲಿಸಬೇಕು. ಎಷ್ಟು ಕುಟುಂಬಗಳಿಗೆ 30 ಲಕ್ಷ ರೂ.ವಿಮಾ ಪರಿಹಾರ ನೀಡಲಾಗಿದೆ, ಇನ್ನೂ ಎಷ್ಟು ಮಂದಿಗೆ ಪರಿಹಾರ ನೀಡುವುದು ಬಾಕಿ ಇದೆ, ಪರಿಹಾರ ನೀಡಿಕೆ ವಿಳಂಬಕ್ಕೆ ಕಾರಣಗಳೇನು ಎಂಬುದರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದೆ.

ಮೃತರ ಕುಟುಂಬಕ್ಕೆ ಈಗಾಗಲೇ ಪಾವತಿಸಲಾಗಿರುವ ವಿಮಾ ಮೊತ್ತ ಮತ್ತು ರಾಜ್ಯವು ನಿರ್ದಿಷ್ಟಪಡಿಸಿದ ಇತರೆ ಪರಿಹಾರ ಮೊತ್ತಗಳು, ಪರಿಗಣನೆಗೆ ಬಾಕಿ ಇರುವ ಅರ್ಜಿಗಳ ಸಂಖ್ಯೆ, ತಿರಸ್ಕರಿಸಿದ ಅರ್ಜಿಗಳ ಸಂಖ್ಯೆ, ನಿರಾಕರಣೆಯ ಕಾರಣಗಳು ಮತ್ತು ವಿಳಂಬದ ಕಾರಣಗಳ ಬಗ್ಗೆ ವಿವರಗಳನ್ನು ಲೋಕಾಯುಕ್ತರು ಕೇಳಿದ್ದಾರೆ.

ಅರ್ಜಿಗಳ ವಿಲೇವಾರಿಯಲ್ಲಿ ಪರಿಹಾರವನ್ನು ವಿತರಿಸಲು ವಿಳಂಬಕ್ಕೆ ಕಾರಣವಾದ ಅಂಶಗಳು ಮತ್ತು ಅಧಿಕಾರಿಗಳ ವಿವರಗಳನ್ನೂ ಅವರು ಕೋರಿದ್ದಾರೆ. ಅಲ್ಲದೇ ಕೊರೋನ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಿ ಪ್ರಾಣ ಕಳೆದುಕೊಂಡವರ ಕುಟುಂಬದವರ ರಕ್ಷಣೆಯ ಜವಾಬ್ದಾರಿ ಸರಕಾರದ್ದೆ ಆಗಿದೆ. ಅವರು ಯಾವುದೇ ಕಾರಣಕ್ಕೂ ತೊಂದರೆಗೆ ಸಿಲುಕದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶವೂ ಇದೆ. ಮೃತಪಟ್ಟ ಕೊರೋನ ವಾರಿಯರ್ರ್ಸ್ ಕುಟುಂಬಗಳನ್ನು ಪರಿಹಾರಕ್ಕಾಗಿ ಅಲೆದಾಡಿಸದೆ ಕೂಡಲೇ ವಿಮಾ ಪರಿಹಾರ ಪಾವತಿಸಬೇಕು ಎಂದು ಅವರು ಆದೇಶದಲ್ಲಿ ಸೂಚನೆ ನೀಡಿದ್ದಾರೆ. ಮೂರು ವಾರದಲ್ಲಿ ಉತ್ತರಿಸಲು ಸರಕಾರಕ್ಕೆ ಅಂತಿಮ ಗಡುವು ನೀಡಿದ್ದು. ಮುಂದಿನ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News