×
Ad

ಮಾ.24ರಿಂದ ‘13ನೇ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವ'

Update: 2021-02-19 21:37 IST

ಬೆಂಗಳೂರು, ಫೆ. 19: ಹದಿಮೂರನೇ ‘ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವ' ಲಾಂಛನವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದಿಲ್ಲಿ ಲೋಕಾರ್ಪಣೆ ಮಾಡಿದರು.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಲಾಂಛನ ಬಿಡುಗಡೆ ಮಾಡಿದ ಯಡಿಯೂರಪ್ಪ, ಇದೇ ಸಂದರ್ಭದಲ್ಲಿ ತನ್ನ ಅಧ್ಯಕ್ಷತೆಯಲ್ಲಿ 13ನೇ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯನ್ನು ನಡೆಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಂಘಟಿಸುತ್ತಿರುವ 13ನೆ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2021ರ ಮಾ.24ರಿಂದ 31ರವರೆಗೆ ಬೆಂಗಳೂರಿನಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಬಾರಿ ‘ಭಾರತೀಯ ಪ್ರದರ್ಶನ ಕಲೆಗಳ ಮಹತ್ವ' ವಿಷಯದ ಮೇಲೆ ಚಿತ್ರೋತ್ಸವವನ್ನು ಏರ್ಪಡಿಸಲು ನಿರ್ಣಯಿಸಲಾಯಿತು.

ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದ್ದು, ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದೆ. ಬೆಂಗಳೂರು ಅಂತರ್‌ರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತರ್‌ರಾಷ್ಟ್ರೀಯ FIAPF ಮಾನ್ಯತೆ ದೊರೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಕೋವಿಡ್ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳ ಅನುಸಾರವಾಗಿ ಈ ಚಿತ್ರೋತ್ಸವ ನಡೆಯಬೇಕೆಂದು ಅವರು ಸೂಚಿಸಿದರು.

ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್‍ನ ಪಿವಿಆರ್ ಚಿತ್ರಮಂದಿರದ 11 ಪರದೆಗಳಲ್ಲಿ ಒಟ್ಟಾರೆ 50ಕ್ಕೂ ಹೆಚ್ಚು ದೇಶಗಳ ಸುಮಾರು 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.

ಬೆಂಗಳೂರು ನಗರದಲ್ಲಿ ಏಳು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಏಷಿಯನ್ ಸಿನಿಮಾ, ಚಿತ್ರಭಾರತಿ (ಭಾರತೀಯ ಸಿನಿಮಾ) ಹಾಗೂ ಕನ್ನಡ ಸಿನಿಮಾಗಳ ಸ್ಪರ್ಧಾ ವಿಭಾಗವಿರುತ್ತದೆ. ಅಲ್ಲದೆ, ವಿಶ್ವಸಿನಿಮಾ, ಸಿಂಹಾವಲೋಕನ, ಗ್ರ್ಯಾಂಡ್ ಕ್ಲಾಸಿಕ್, ಕೆಲವು ದೇಶಗಳ ವಿಶೇಷ ಸಿನಿಮಾ, ಅಗಲಿದ ವಿಶ್ವದ, ಭಾರತದ ಮತ್ತು ಕನ್ನಡ ಚಿತ್ರರಂಗದ ಗಣ್ಯರ ಸಂಸ್ಮರಣೆ, ಚಲನಚಿತ್ರ ವಿಮರ್ಶಕರ ಅಂತರ್‌ರಾಷ್ಟ್ರೀಯ ಒಕ್ಕೂಟದ ಪ್ರಶಸ್ತಿ ವಿಭಾಗ, ನೆಟ್‍ಪ್ಯಾಕ್, ಜೀವನಚರಿತ್ರೆ ಆಧರಿಸಿದ ಚಿತ್ರಗಳ ವಿಭಾಗಗಳು ವಿವಿಧ ದೃಷ್ಟಿಕೋನವನ್ನು ಬಿಂಬಿಸಲಿವೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿವರಿಸಿದರು.

ಚಿತ್ರೋತ್ಸವದಲ್ಲಿ ಅತ್ಯುತ್ತಮ ಸಿನಿಮಾಗಳ ಪ್ರದರ್ಶನದ ಜೊತೆಗೆ ಚಲನಚಿತ್ರರಂಗದ ನುರಿತ ದೇಶ-ವಿದೇಶಗಳ ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗಿನ ಸಂವಾದ, ವಿಚಾರ ಸಂಕಿರಣ, ಚಿತ್ರಕಥೆ ರಚನೆ ಕಾರ್ಯಾಗಾರ, ಮಾಸ್ಟರ್ ಕ್ಲಾಸ್ ಮೊದಲಾದ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಚಿತ್ರೋದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಿನಿಮಾಸಕ್ತರಿಗೆ ಅನುಕೂಲವಾಗಲಿದೆ. ಕನ್ನಡ ಸಿನಿಮಾಗಳ ಸೃಜನಶೀಲ ಮುಖಗಳನ್ನು ವಿಶ್ವದ ನಾನಾ ದೇಶಗಳಿಗೆ ಪರಿಚಯಿಸುವ ಕೆಲಸವೂ ಈ ಮೂಲಕ ನಡೆಯುತ್ತಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ದೇಶಕ ಡಿ.ಆರ್. ಜೈರಾಜ್, ಹಿರಿಯ ಕಲಾವಿದರಾದ ಶ್ರುತಿ, ತಾರಾ ಅನುರಾಧಾ, ಚಲನಚಿತ್ರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ವಾರ್ತಾ ಇಲಾಖೆ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆಯುಕ್ತ ಪಿ.ಎಸ್.ಹರ್ಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News