ದಿಲ್ಲಿ ರೈತರ ಹೋರಾಟ ಬೆಂಬಲಿಸಿ ಮಾ.20ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 'ರೈತ ಸಮಾವೇಶ'
ಬೆಂಗಳೂರು, ಫೆ.19: ಕೇಂದ್ರ ಸರಕಾರ ಜಾರಿ ಮಾಡಿರುವ ನೂತನ ಕೃಷಿ ಕಾಯ್ದೆಗಳ ವಿರುದ್ಧ ಹೊಸದಿಲ್ಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಮಾ.20ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದೆಂದು ರೈತ ಸಂಘದ ನಾಯಕಿ ಚುಕ್ಕಿ ನಂಜುಂಡಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.20ರಂದು ಶಿವಮೊಗ್ಗದಲ್ಲಿ ಮೊದಲ ಸಮಾವೇಶ ನಡೆಯಲಿದೆ. 21ರಂದು ಹಾವೇರಿ, 22ರಂದು ಬೆಳಗಾವಿಯಲ್ಲಿ ನಡೆಯಲಿದೆ. ಸಮಾವೇಶಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ನ ವಕ್ತಾರ ರಾಕೇಶ್ ಟಿಕಾಯತ್ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಯುದ್ಧವೀರ್ ಸಿಂಗ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳ ವಿರುದ್ದ ಎಲ್ಲರನ್ನೂ ಒಗ್ಗೂಡಿಸುವ ಸಮಯ ಬಂದಿದೆ. ಎಲ್ಲ ಅಡೆತಡೆಗಳನ್ನು ಮೀರಿ ರೈತರು ಹಾಗೂ ರೈತ ಮಹಿಳೆಯರು ಹೊಸದಿಲ್ಲಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಅವರಿಗೆ ರೈತರ ಪ್ರತೀಕವಾದ ಹಸಿರು ಶಾಲುಗಳನ್ನು ರಾಜ್ಯದಿಂದ ರವಾನಿಸಲಾಗುವುದು. ಈ ಮೂಲಕ ರೈತರು ಒಬ್ಬಂಟಿಯಲ್ಲ ಎಂಬ ಸಂದೇಶದೊಂದಿಗೆ ಅವರ ಪರ ನಿಲ್ಲಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಆಕೆಯ ಹಾಗೂ ಕುಟುಂಬದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ರಾಜ್ಯದ ಹೆಮ್ಮೆಯ ಪುತ್ರಿಯನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ಸರಿಯಲ್ಲವೆಂದು ರೈತ ಮುಖಂಡ ಕೆ.ಟಿ.ಗಂಗಾಧರ ತಿಳಿಸಿದ್ದಾರೆ.
ಪರಿಸರ ಕಾರ್ಯಕರ್ತೆ ದಿಶಾ ರವಿ ಹೊಸದಿಲ್ಲಿ ಪೊಲೀಸರು ರಾಜ್ಯ ಪೊಲೀಸ್ ಇಲಾಖೆಗೆ ಯಾವುದೇ ಸೂಚನೆ ನೀಡದೆ, ಮನೆಗೆ ನುಗ್ಗಿ ದಾಖಲೆಗಳನ್ನು ಕೇಳಿದ್ದಾರೆ. ಒತ್ತಾಯದಿಂದ ದಿಶಾರ ಸಹಿ ಪಡೆದು ಬಂಧಿಸಿದ್ದಾರೆ. ಆದರೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರು ಕಾನೂನು ಪಾಲಿಸಿದ್ದಾಗಿ ಸಮರ್ಥಿಸಿಕೊಂಡಿರುವುದು ಸರಿಯಲ್ಲ.
-ಕೆ.ಟಿ.ಗಂಗಾಧರ, ರೈತ ಮುಖಂಡ
ರೈತ ಟೋಪಿ ತೊಟ್ಟು ಚಳುವಳಿ
ಹೊಸದಿಲ್ಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ, ರೈತ ವಿರೋಧಿ ಕಾಯ್ದೆಗಳನ್ನು ಸರಕಾರ ಹಿಂಪಡೆಯುವವರೆಗೆ ಅಥವಾ ರೈತರು ತಮ್ಮ ಹೋರಾಟ ನಿಲ್ಲಿಸುವವರೆಗೆ ನಿರಂತರವಾಗಿ, ರೈತರ ಸಂಕೇತವಾಗಿರುವ ಹಸಿರು ಬಿಳಿ ಟೋಪಿಯನ್ನು ಧರಿಸಲು ನಿರ್ಧರಿಸಿದ್ದೇನೆ. ಫೆ.20 ರಂದು ನಿವೃತ್ತ ನ್ಯಾ.ನಾಗಮೋಹನ್ ದಾಸ್ ಕೈಯಿಂದ ಟೋಪಿ ಧಾರಣೆ ಮಾಡಿ, ಚಳುವಳಿಯನ್ನು ಪ್ರಾರಂಭಿಸುತ್ತಿದ್ದೇನೆ.
-ಅನೀಸ್ ಪಾಶ, ವಕೀಲ