ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಸಂಸದರಿಂದ ಇಂಜಿನಿಯರ್‌ಗಳ ವರ್ಗಾವಣೆ ಎಚ್ಚರಿಕೆ

Update: 2021-02-22 12:07 GMT

ಮಂಗಳೂರು, ಫೆ. 24: ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗುತ್ತಿರುವ ಕುರಿತಂತೆ ವ್ಯಕ್ತವಾದ ಆಕ್ಷೇಪದ ಹಿನ್ನೆಲೆಯಲ್ಲಿ ನಿರ್ಲಕ್ಷಕ್ಕೆ ಕಾರಣವಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ಇಂಜಿನಿಯರ್‌ಗಳನ್ನು ವರ್ಗಾಯಿಸುವ ಎಚ್ಚರಿಯನ್ನು ಸಂಸದ ನಳಿನ್ ಕುಮಾರ್ ನೀಡಿದ್ದಾರೆ.

ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ)ಯಲ್ಲಿ ಈ ಎಚ್ಚರಿಕೆ ನೀಡಿದ ಅವರು, ಪ್ರಸ್ತುತ ಹೈಕೋರ್ಟ್‌ನ ಆದೇಶದಿಂದಾಗಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಆದರೆ ಈ ಹಿಂದೆಯೇ ಆಗಬೇಕಾಗಿದ್ದಂತಹ ಕಾಮಗಾರಿಗಳನ್ನು ಪೂರೈಸುವಲ್ಲಿ ಅಧಿಕಾರಿಗಳು ನಿರ್ಲಕ್ಷ ತೋರಿದ್ದಾರೆ. ಇದೀಗ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳದೆ ಯೋಜನೆ ಅನುದಾನ ಹಿಂದಕ್ಕೆ ಹೋದರೆ ಜನರಿಗೆ ಉತ್ತರಿಸುವುದಾದರೂ ಹೇಗೆ ಎಂದು ಅವರು ಅಧಿಕಾರಿಗಳನ್ನು ತರಾಟಗೈದರು.

ಸ್ಮಾರ್ಟ್ ಸಿಟಿ ಕಾಮಗಾರಿಗೆ ಸದ್ಯ ಹೈಕೋರ್ಟ್‌ನಿಂದ ತಡೆಯಾಜ್ಞೆ ಇದೆ. ಆದರೆ ಎಂಟು ತಿಂಗಳ ಹಿಂದೆಯೇ ಬಂದರು ಪ್ರದೇಶದಲ್ಲಿನ ಒಳಚರಂಡಿ ಕಾಮಗಾರಿ ಕುರಿತಂತೆ ಎಸಿಪಿ ಜತೆ ಪರಿಶೀಲನೆ ನಡೆಸಿ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೆ. ಇದೀಗ ತಡೆಯಾಜ್ಞೆ ತೆರವುಗೊಂಡರೂ ಇನ್ನು ಕಾಮಗಾರಿ ನಡೆಸಲು ಸಿಗುವುದು ಎರಡು ತಿಂಗಳು ಮತ್ತೆ ಮಳೆಗಾಲದಿಂದಾಗಿ ಸುಮಾರು ಆರು ತಿಂಗಳು ಯಾವುದೇ ಕಾಮಗಾರಿ ನಡೆಸಲು ಸಾಧ್ಯವಾಗುದಿಲ್ಲ. ಅಧಿಕಾರಿಗಳ ನಿರ್ಲಕ್ಷದಿಂದ ಜನಸಾಮಾನ್ಯರು ಸಮಸ್ಯೆ ಎದುರಿಸಬೇಕಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಾರ್ಟ್ ಸಿಟಿ ಯೋಜನೆಗಳ ಅಡಿಯಲ್ಲಿ ಪ್ರಾರಂಭಿಸಲಾದ ಕಾಮಗಾರಿಗಳ ಸ್ಥಗಿತವನ್ನು ಹೈಕೋರ್ಟ್ ಶೀಘ್ರವೇ ತೆರವುಗೊಳಿಸುವ ನಿರೀಕ್ಷೆ ಇದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸಭೆಗೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯಿಸಿ, ಹೈಕೋರ್ಟ್ ಅನುಮತಿ ನೀಡಿದಾಕ್ಷಣದಿಂದ ಕಾಮಗಾರಿ ಶೀಘ್ರ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಯೋಜನೆ ಸಿದ್ಧತೆ ಮಾಡುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಅಮೃತ್ ಯೋಜನೆ ಕಾಮಗಾರಿ ವಿಳಂಬ: ಅಧಿಕಾರಿಗಳ ತರಾಟೆ
ಅಮೃತ್ ಯೋಜನೆಯಡಿ ಪ್ರಾರಂಭಿಸಲಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಳಂಬವಾದ ಕಾರಣ ಸಂಸದರು ಕೆಯುಐಡಿಎಫ್‌ಸಿಯಿಂದ ಅಧಿಕಾರಿಗಳನ್ನು ತರಾಟೆಗೈದರು.

ಗುತ್ತಿಗೆದಾರ ಸಂಸ್ಥೆ ಮೆಸರ್ಸ್ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಾಮಗಾರಿಯನ್ನು ತ್ವರಿತಗೊಳಿಸುವಲ್ಲಿ ನಿರ್ಲಕ್ಷ ವಹಿಸಿದೆ. ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಗುತ್ತಿಗೆದಾರ ಸಂಸ್ಥೆ ನಗರದ 12 ಸ್ಥಳಗಳಲ್ಲಿ ಕಾಮಗಾರಿಗಳನ್ನು ಬಾಕಿ ಇರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅಸಮಾಧಾನ ವ್ಯಕ್ತಪಡಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, ಫೆಬ್ರವರಿ 24 ರಂದು ನಡೆಯುವ ಸಭೆಯಲ್ಲಿ ಸಂಸ್ಥೆಯ ಎಂಡಿ ಪಾಲ್ಗೊಳ್ಳುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ಎಫ್‌ಐಆರ್ ದಾಖಲಿಸುವುದು ಹಾಗೂ ಸಂಸ್ಥೆಯ ಎಂಡಿ ಭಾಗವಹಿಸಲು ವಿಫಲರಾದರೆ ಇಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಂಸದರು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News