ಮದುವೆ ಸಮಾರಂಭಗಳಲ್ಲಿ ‘ಮಾರ್ಷಲ್' ನಿಯೋಜನೆ: ಸಚಿವ ಡಾ.ಕೆ.ಸುಧಾಕರ್

Update: 2021-02-22 12:11 GMT

ಬೆಂಗಳೂರು, ಫೆ. 22: ಮದುವೆ ಸಮಾರಂಭಗಳಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ದೃಷ್ಟಿಯಿಂದ ಸುರಕ್ಷತಾ ಕ್ರಮ ಪಾಲಿಸಲು ‘ಮಾರ್ಷಲ್'ಗಳನ್ನು ನಿಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮದುವೆ ಸಮಾರಂಭಗಳಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುತ್ತಿಲ್ಲ. ನಾನೇ ಸಮಾರಂಭಕ್ಕೆ ಹೋದರೆ ಮಾಸ್ಕ್ ತೆಗೆಯಿರಿ ಎಂದು ಹೇಳುತ್ತಾರೆ. ಹೀಗಾಗಿ ಮದುವೆ ಸಮಾರಂಭಗಳಲ್ಲಿ ಒಬ್ಬ ಮಾರ್ಷಲ್ ನೇಮಿಸಲು ತೀರ್ಮಾನ ಕೈಗೊಳ್ಳಲಾಗಿದೆ' ಎಂದರು.

‘ಮದುವೆ ಸಮಾರಂಭಗಳಿಗೆ 500ಕ್ಕಿಂತ ಹೆಚ್ಚು ಜನರಿರಬಾರದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ನಿಯಮವನ್ನು ಪಾಲಿಸಲು ಕ್ರಮ ವಹಿಸಲಾಗುವುದು. ಆಹಾರ ಪೂರೈಕೆ ಮಾಡುವವರಿಗೂ ಪರೀಕ್ಷೆ ಮಾಡಿಸಲು ಸೂಚಿಸಲಾಗಿದೆ' ಎಂದ ಅವರು, ‘ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಸಭೆ, ಸಮಾರಂಭ, ಹೋರಾಟ ನಡೆಯುತ್ತಿದೆ. ಇದನ್ನು ಪಾಲಿಸದೇ ಕೋವಿಡ್ ಸೋಂಕು ಹೆಚ್ಚಾದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ' ಎಂದು ಎಚ್ಚರಿಕೆ ನೀಡಿದರು.

ಲಾಕ್‍ಡೌನ್ ಸ್ಥಿತಿ ತರಬೇಡಿ: ‘ಮಹಾರಾಷ್ಟ್ರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಲಾಕ್‍ಡೌನ್ ಆಗಿದ್ದು, ಆ ಪರಿಸ್ಥಿತಿ ರಾಜ್ಯಕ್ಕೆ ಬರಬೇಕೇ? ಎಂದು ಆಲೋಚಿಸಬೇಕು. ಕೇರಳ, ಮಹಾರಾಷ್ಟ್ರ ರಾಜ್ಯಗಳ ಜನರ ಪ್ರಯಾಣಕ್ಕೆ ನಿರ್ಬಂಧ ಹೇರಿಲ್ಲ. ಆದರೆ ಕರ್ನಾಟಕ ರಾಜ್ಯದೊಳಗೆ ಬರುವವರು ಕೋವಿಡ್-19 ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ' ಎಂದು ಸುಧಾಕರ್ ಸ್ಪಷ್ಟನೆ ನೀಡಿದರು.

ಈಗಾಗಲೇ ಎಸೆಸೆಲ್ಸಿ, ಪಿಯುಸಿ ಹಾಗೂ ಶಾಲೆಗಳನ್ನು ಹಂತ-ಹಂತವಾಗಿ ತೆರೆಯಲಾಗುತ್ತಿದೆ. ಆದರೆ, ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚಳದ ಸಮಸ್ಯೆಯಾಗಿಲ್ಲ ಎಂದ ಅವರು, ಕೋವಿಡ್ 2ನೆ ಅಲೆ ಬಾರದಂತೆ ಕ್ರಮ ವಹಿಸಲಾಗುತ್ತಿದೆ. ಮಾರ್ಚ್ ನಿಂದ ಸಾಮಾನ್ಯ ಜನರಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರ ಸರಕಾರ ಶೀಘ್ರವೇ ನಿರ್ಣಯ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯೆ ನೀಡಿದರು

ಲಸಿಕೆ ಗುರಿ ಸಾಧಿಸಲು ಸೂಚನೆ: ಸರಕಾರಿ ಇಲಾಖೆಗಳಲ್ಲಿ 2.90 ಲಕ್ಷ ಮಂದಿ ಇದ್ದು, ಆರೋಗ್ಯ ಇಲಾಖೆಯ 4,24,573 ಮಂದಿಗೆ ಮೊದಲ ಕೋವಿಡ್ ಲಸಿಕೆ(ಮೊದಲು ಡೋಸ್) ನೀಡಲಾಗಿದೆ. 1,20,176 ಮುಂಚೂಣಿ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರು ಎರಡು ಬಾರಿ ನೋಂದಣಿ ಮಾಡಿಸಿಕೊಂಡಿದ್ದು, ಅದನ್ನು ತೆಗೆದುಹಾಕಲಾಗುತ್ತಿದೆ. ಇದರಿಂದಾಗಿ ನಾವು ಮುಟ್ಟಿದ ಗುರಿ ಇನ್ನೂ ಹೆಚ್ಚಾಗಲಿದೆ. ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಸಿಬ್ಬಂದಿಯಲ್ಲಿ ಶೇ.80 ರಿಂದ ಶೇ.90 ಮಂದಿಗೆ ಫೆ.28 ರೊಳಗೆ ಲಸಿಕೆ ನೀಡಬೇಕು ಎಂದು ಸೂಚಿಸಲಾಗಿದೆ.

ಮುಂಚೂಣಿ ಸಿಬ್ಬಂದಿಗೆ ಫೆ.22, 23, 24ರಂದು ಲಸಿಕೆ ಅಭಿಯಾನ ಮಾಡಲಾಗುತ್ತಿದೆ. ಎಲ್ಲ ಅಧಿಕಾರಿಗಳಿಗೆ ಲಸಿಕೆ ಪಡೆಯಲು ತಾಕೀತು ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲಸಿಕೆ ಅಭಿಯಾನ ಕುರಿತು ಮಾಹಿತಿ ಪಡೆಯುತ್ತಿದ್ದು, ವಾರದೊಳಗೆ ಈ ಕುರಿತು ಎಲ್ಲ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ ಎಂದರು.

ಆರೋಗ್ಯ ಸಿಬ್ಬಂದಿಯ ಲಸಿಕೆ ಅಭಿಯಾನದಲ್ಲಿ ಬೆಂಗಳೂರು ಹಿಂದುಳಿದಿದೆ. ಬಾಗಲಕೋಟೆ, ದಾವಣಗೆರೆ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳು ಶೇ.50ಕ್ಕಿಂತ ಕಡಿಮೆ ಇದೆ. ಚಿಕ್ಕಬಳ್ಳಾಪುರ-ಶೇ.79, ತುಮಕೂರು-ಶೇ.78, ಉತ್ತರ ಕನ್ನಡ-ಶೇ.73, ಗದಗ-ಶೇ.71, ಚಿಕ್ಕಮಗಳೂರು-ಶೇ.70, ಚಾಮರಾಜನಗರ-ಶೇ.70, ಉಳಿದ ಜಿಲ್ಲೆಗಳಲ್ಲಿ ಶೇ.70ಕ್ಕಿಂತ ಹೆಚ್ಚು ಸಾಧನೆಯಾಗಿದೆ. ಮುಂಚೂಣಿ ಸಿಬ್ಬಂದಿಗೆ ಲಸಿಕೆ ನೀಡುವಲ್ಲಿ ಗದಗ ಶೇ.84, ತುಮಕೂರು-ಶೇ.71ರಷ್ಟಿದೆ. ಬಾಗಲಕೋಟೆ-ಶೇ.23, ಬೆಂಗಳೂರು ನಗರ ಶೇ.26, ಚಾಮರಾಜನಗರ ಶೇ.27ರಷ್ಟು ಹಿಂದುಳಿದಿದ್ದು, ಶೇ.80ರಷ್ಟು ಗುರಿ ಸಾಧಿಸಬೇಕು ಎಂದು ಸೂಚಿಸಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News