ಎಸ್‌ಡಿಪಿಐ-ಪಿಎಫ್‌ಐ ಮಾತಿಗೆ ಮರುಳಾಗಬೇಡಿ: ಸಿದ್ದರಾಮಯ್ಯ

Update: 2021-02-22 14:34 GMT

ಮಂಗಳೂರು, ಫೆ.22: ಜಾತ್ಯತೀತ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿ ಬೆಳವಣಿಗೆಗೆ ಶಕ್ತಿ ತುಂಬುವ ಎಸ್‌ಡಿಪಿಐ ಪಕ್ಷ ಮತ್ತು ಪಿಎಫ್‌ಐ ಸಂಘಟನೆಯ ಮಾತಿಗೆ ಮರುಳಾಗಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಪುರಭವನದಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್‌ರ ಪದಗ್ರಹಣ ಸಮಾರಂಭ ಹಾಗೂ ಭಾವೈಕ್ಯತಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೋಮುವಾದಿಗಳು ಇರುವ ಕಡೆ ಎಂದೂ ಶಾಂತಿ ನೆಲೆಸದು. ಸ್ವಾರ್ಥಕ್ಕಾಗಿ ಜನರಿಗೆ ತಪ್ಪು ಮಾಹಿತಿ ನೀಡುವ ಮತ್ತು ಸಂವಿಧಾನದ ನಾಶಕ್ಕೆ ಪಣತೊಟ್ಟಿರುವ ಹಿಂದುತ್ವವಾದಿಗಳಂತೂ ಭಾರತೀಯನಾಗಲು ಸಾಧ್ಯವೇ ಇಲ್ಲ ಎಂದ ಸಿದ್ದರಾಮಯ್ಯ, ಈ ರಾಷ್ಟ್ರವನ್ನು ಎಂದಿಗೂ ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನಿರ್ಮಿತ ಸಂವಿಧಾನವು ಅವಕಾಶ ಮಾಡಿಕೊಡುವುದಿಲ್ಲ ಎಂದರು.

ಡಿಜೆ ಹಳ್ಳಿ, ಕೆಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಕೈವಾಡದ ಬಗ್ಗೆ ಸಾಕ್ಷ್ಯ ಇದೆ ಎಂದು ಹೇಳಿ ಬಿಜೆಪಿಗರು ಸುಮ್ಮನಿರುವ ಬದಲು ಕೇಂದ್ರದ ಮೇಲೆ ಒತ್ತಡ ಹೇರಿ ಪಿಎಫ್‌ಐಯನ್ನು ನಿಷೇಧಿಸಲಿ ಎಂದು ಸವಾಲು ಹಾಕಿದ ಸಿದ್ದರಾಮಯ್ಯ, ಬಿಜೆಪಿಗರು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವ ಮುನ್ನ ಗೋ ಮಾಂಸವನ್ನು ಆಮದು ಮತ್ತು ರಫ್ತು ಮಾಡುವುದನ್ನು ನಿಲ್ಲಿಸಲಿ ಎಂದರಲ್ಲದೆ, ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಜನರಿಗೆ ನೆಮ್ಮದಿಯೇ ಇರದು ಎಂದು ನುಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಯೀದ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭಾ ಸದಸ್ಯ ನಾಸಿರ್ ಹುಸೈನ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಮಾಜಿ ಶಾಸಕ ಜೆ.ಆರ್.ಲೋಬೋ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಯಿಶಾ ಫರ್ಝಾನಾ ಯುಟಿ ಸದ್ಭಾವನಾ ಭಾಷಣಗೈದರು.

ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ವಸಂತ ಬಂಗೇರಾ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವಾ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಪಕ್ಷದ ಮುಖಂಡರಾದ ಜಿ.ಎ. ಬಾವಾ, ಇಬ್ರಾಹೀಂ ಕೋಡಿಜಾಲ್, ಮಿಥುನ್ ರೈ, ಡಾ. ಸಿ. ರಘು, ಬಿಎಚ್.ಖಾದರ್, ಟಿಎಂ ಶಹೀದ್ ಸುಳ್ಯ, ಯುಬಿ ಸಲೀಂ, ನೂರುದ್ದೀನ್ ಸಾಲ್ಮರ, ಎಂಎಸ್.ಮುಹಮ್ಮದ್, ಎನ್.ಎಸ್.ಕರೀಂ, ಮನಪಾ ವಿಪಕ್ಷ ನಾಯಕ ಅಬ್ದುರ್ರವೂಫ್ ಬಜಾಲ್, ಮಾಜಿ ಮೇಯರ್ ಕವಿತಾ ಸನಿಲ್, ಹೇಮನಾಥ ಶೆಟ್ಟಿ ಕಾವು, ಮಮತಾ ಗಟ್ಟಿ, ಎ.ಸಿ.ವಿನಯರಾಜ್, ದ.ಕ.ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ದ.ಕ.ಜಿಲ್ಲಾ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷ ಸವಾದ್ ಸುಳ್ಯ, ದ.ಕ.ಜಿಲ್ಲಾ ಸೇವಾದಳದ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯ ಆಹಾರ ಆಯೋಗದ ಮಾಜಿ ಸದಸ್ಯ ಬಿ.ಎ. ಮುಹಮ್ಮದಲಿ ಕಮ್ಮರಡಿ ಕಾರ್ಯಕ್ರಮ ನಿರೂಪಿಸಿದರು.

ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಾಣತ್ಯಾಗಗೈದ 135 ರೈತರಿಗಾಗಿ ಕಾರ್ಯಕ್ರಮದಲ್ಲಿ ಸಂತಾಪ ಸೂಚಿಸಲಾಯಿತು.

'ಎಸ್‌ಡಿಪಿಐ ಮತ್ತು ಪಿಎಫ್‌ಐ ‘ಬಿಜೆಪಿ’ಯ ಬಿ ಟೀಂ'
ಎಸ್‌ಡಿಪಿಐ ಮತ್ತು ಪಿಎಫ್‌ಐ ‘ಬಿಜೆಪಿ’ಯ ಬಿ ಟೀಂ ಆಗಿದೆ. ಪಿಎಫ್‌ಐಯ ರ್ಯಾಲಿಗೆ ಬಿಜೆಪಿ ಸರಕಾರವೇ ಅನುಮತಿ ಕೊಟ್ಟಿರುವುದು ಅದಕ್ಕೆ ಸಾಕ್ಷಿಯಾಗಿದೆ. ಎಸ್‌ಡಿಪಿಐ-ಪಿಎಫ್‌ಐ ನಿಷೇಧಿಸಲು ಸಾಕಷ್ಟು ಸಾಕ್ಷಗಳಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವೇ ಇದೆ. ಅದನ್ನು ನಿಷೇಧಿಸಲು ಹಿಂದೇಟು ಯಾಕೆ? ಎಸ್‌ಡಿಪಿಐ, ಪಿಎಫ್‌ಐಯನ್ನು ಬಿಜೆಪಿಗರೇ ಬೆಳೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದ.ಕ.ಮತ್ತು ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News