ಸ್ಫೋಟಕ ಸಾಮಗ್ರಿಗಳ ಬಳಕೆಗೆ ಅನುಮತಿ ಕಡ್ಡಾಯ ಕಾನೂನು ಜಾರಿ: ಸಚಿವ ಮುರುಗೇಶ್ ನಿರಾಣಿ

Update: 2021-02-23 12:34 GMT

ಹೊಸದಿಲ್ಲಿ, ಫೆ.23: ಇನ್ನು ಮುಂದೆ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಸಲು ಸರಕಾರದಿಂದ ಅನುಮತಿ ಪಡೆದವರು ಮಾತ್ರ ಬಳಕೆ ಮಾಡಲು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತವೆ. ಇದನ್ನು ತಡೆಯಲು ಸದ್ಯದಲ್ಲೆ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದರು.

ಸರಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ವಸ್ತುಗಳನ್ನು ಬಳಸುವ ಕಾನೂನು  ಜಾರಿ ಮಾಡಲಾಗುವುದು. ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ಎಚ್ಚರಿಸಿದರು.

ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲಿಟಿನ್ ಕಡ್ಡಿಗಳು ಸ್ಫೋಟಕಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ ಎಂದು ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಜೊತೆಗೆ ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಮತ್ತು ಅಕ್ರಮಗಳಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನೇ ಸರಕಾರ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪುನಃ ಮರುಕಳಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಸಚಿವರಾದ ಬಸವರಾಜ ಬೊಮ್ಮಾಯಿ, ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ನಮ್ಮ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ವಸ್ತುಸ್ಥಿತಿ ಪರಿಶೀಲಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಶಿವಮೊಗ್ಗ ಸ್ಫೋಟಕ್ಕೆ ಮುಂಚಿತವಾಗಿ ಸ್ಫೋಟಕಗಳನ್ನು ಸಂಗ್ರಹಿಸಲಾಗಿದೆ ಎಂದು ನಾನು ಅಧಿಕಾರಿಗಳಿಂದ ತಿಳಿದುಕೊಂಡಿದ್ದೇನೆ. ಕೆಲವು ವೈಯಕ್ತಿಕ ಕೆಲಸಗಳಿಂದಾಗಿ ನಾನು ದಿಲ್ಲಿಯಲ್ಲಿದ್ದೇನೆ. ಇಲ್ಲಿಂದ ಬೆಂಗಳೂರಿಗೆ ಹೋದ ಬಳಿಕ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಮಾಹಿತಿ ನೀಡಲಾಗಿದೆ. ಗಾಯಾಳುಗಳಿಗೆ ಸರಕಾರದ ವತಿಯಿಂದ ಸೂಕ್ತವಾದ ಚಿಕಿತ್ಸೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದ ಅವರು, ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣವೇ ಅವರನ್ನು ಬಂಧಿಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News