ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುತ್ತಿಲ್ಲ, ರಾಜಕಾರಣ ಸಲ್ಲ: ಸಚಿವ ಡಾ.ಸುಧಾಕರ್

Update: 2021-02-24 16:51 GMT

ಬೆಂಗಳೂರು, ಫೆ. 24: ‘ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸರಕಾರಕ್ಕೆ ಇಲ್ಲ. ಕ್ವಾರಿ ಮಾಲಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ' ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸ್ಫೋಟ ಪ್ರಕರಣ ಸಂಬಂಧ ಕೆಲವರು ಘಟನೆಗೆ ರಾಜಕೀಯ ಲೇಪ ಹಚ್ಚುವ, ವೈಯಕ್ತಿಕ ಆರೋಪ ಮಾಡುವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಉರಿಯುವ ಮನೆಯಲ್ಲಿ ಗಳ ಇರಿಯುವ ಇಂತಹ ವರ್ತನೆ ಸಾರ್ವಜನಿಕ ಜೀವನದಲ್ಲಿ ಶೋಭೆ ತರುವುದಿಲ್ಲ' ಎಂದು ತಿರುಗೇಟು ನೀಡಿದರು.

‘ಶಿವಮೊಗ್ಗ ಸ್ಫೋಟದ ಬಳಿಕ ಜಿಲ್ಲಾಡಳಿತದ ಜತೆ ಮೂರು ಸಭೆ ನಡೆಸಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಸ್ಫೋಟಕಗಳ ಸರಬರಾಜು, ದಾಸ್ತಾನು ಮತ್ತು ಬಳಕೆ ಮೇಲೆ ಕಟ್ಟುನಿಟ್ಟು ಕ್ರಮ ತೆಗೆದುಕೊಳ್ಳುವಂತೆ ಹಾಗೂ ನಿಯಮಿತವಾಗಿ ಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದ್ದೆ. ಆ ಹಿನ್ನಲೆಯಲ್ಲೇ ಅಧಿಕಾರಿಗಳು ಎಲ್ಲ ಕ್ವಾರಿಗಳಿಗೂ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದರು.

‘ಘಟನೆಗೆ ಕಾರಣವಾದ ಬ್ರಮರವರ್ಷಿಣಿ ಕ್ರಷರ್ ಗೆ ಏಳರಂದು ಎಸ್ಪಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅದು ಸಕ್ರಮವಾಗಿ ನಡೆಯುತ್ತಿರುವ ಗಣಿ. ಆದರೆ ಸ್ಫೋಟಕಗಳ ದಾಸ್ತಾನು ಮತ್ತು ಬಳಕೆಯಲ್ಲಿ ಕಾನೂನು ಪಾಲನೆ ಮಾಡುತ್ತಿರಲಿಲ್ಲ. ಆ ಕಾರಣಕ್ಕೆ ಅದೇ ದಿನ ಕ್ವಾರಿಯನ್ನು ಸ್ಥಗಿತಗೊಳಿಸಲು ಆದೇಶಿಸಿ ದೂರು ದಾಖಲು ಮಾಡಲಾಗಿದೆ. ಮಾತ್ರವಲ್ಲ, ಮತ್ತೆ ಪರಿಶೀಲನೆಗಾಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾದ ಮಾಲಕ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಫೋಟಕಗಳನ್ನು ಸಮೀಪದ ಕುರುಚಲು ಕಾಡಿನಲ್ಲಿ ವಿಲೇವಾರಿ ಮಾಡಲು ಕೆಲಸಗಾರರಿಗೆ ಸೂಚನೆ ನೀಡಿದ್ದನಂತೆ, ಇದರಿಂದಾಗಿಯೇ ಅನಾಹುತ ಸಂಭವಿಸಿದೆ ಎಂದು ವಿವರಿಸಿದರು.

ಬೇರೆಡೆ ದಾಸ್ತಾನು ಮಾಡಲಾಗಿತ್ತು: ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕಗಳನ್ನು ಕ್ವಾರಿಯಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿರುವ ಕೊಠಡಿಯೊಂದರಲ್ಲಿ ಇರಿಸಿದ್ದ ಅಂಶ ಗೊತ್ತಾಗಿದೆ. ಪೊಲೀಸರ ದಾಳಿ ಬಳಿಕ ಹೆದರಿದ ಮಾಲಕರು ಅದನ್ನು ಸಮೀಪದ ಕಾಡಿನಲ್ಲಿ ಬಿಸಾಡುವಂತೆ ಹೇಳಿದ್ದರಿಂದ ಸಿಬ್ಬಂದಿಗಳು ಅದನ್ನು ತೆಗೆದುಕೊಂಡು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ.

ಕ್ಯಾಂಪ್‍ಫೈರ್ ಮಾದರಿಯಲ್ಲಿ ಬೆಂಕಿ ಹಚ್ಚಿಕೊಂಡು ಅಲ್ಲೇ ಎಲ್ಲರೂ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದಾರೆ. ಬಳಿಕ ಸ್ಫೋಟಕಗಳನ್ನು ಅದೇ ಬೆಂಕಿಗೆ ಎಸೆದಿದ್ದಾರೆ. ಅದರಿಂದ ಅನಾಹುತ ಸಂಭವಿಸಿತು ಎಂದು ಬದುಕುಳಿದಿರುವ ಚಾಲಕ ನೀಡಿರುವ ಹೇಳಿಕೆ ಮತ್ತು ಸ್ಥಳ ಪರಿಶೀಲನೆ ನಡೆಸಿದ ತಜ್ಞರು ನೀಡಿದ ಮಾಹಿತಿಯಿಂದ ಬೆಳಕಿಗೆ ಬಂದಿದೆ ಎಂದು ವಿವರಿಸಿದರು.

ಇದು ವಾಸ್ತವ ಸಂಗತಿ. ಆದರೂ ಕೆಲ ನಾಯಕರು ಘಟನೆಗೆ ರಾಜಕೀಯ ಬೆರೆಸುವ ಮತ್ತು ವೈಯಕ್ತಿಕ ಆರೋಪ ಮಾಡುವ ಕೀಳುಮಟ್ಟಕ್ಕೆ ಇಳಿದಿದ್ದು ದುರದೃಷ್ಟಕರ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಲ್ಲದೆ, ಗೃಹ, ಗಣಿ ಸಚಿವರು ಮತ್ತು ಸಿಎಂಗೆ ಮಾಹಿತಿ ನೀಡಿದ್ದೇನೆ. ಮೃತಪಟ್ಟ ಕುಟುಂಬದ ಸದಸ್ಯರ ಮನೆಗಳಿಗೂ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಸಿಎಂ ಸೂಚನೆ ಮೇರೆಗೆ ತಲಾ 5 ಲಕ್ಷ ರೂ.ಪರಿಹಾರವನ್ನೂ ಪ್ರಕಟಿಸಲಾಗಿದೆ. ಒಂದು ವೇಳೆ ಆರೋಪಿಗಳನ್ನು ರಕ್ಷಿಸುವಂತಿದ್ದರೆ ಘಟನೆಯ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸುವ ಔಚಿತ್ಯ ಏನಿತ್ತು ಎಂದು ಪ್ರಶ್ನಿಸಿದರು.

ಅವಕಾಶವಿಲ್ಲ: ಗಣಿಗಾರಿಕೆಗೆ ಮತ್ತು ನನಗೂ ತಳುಕು ಹಾಕಲು ಕೆಲವರು ಯತ್ನಿಸಿದ್ದಾರೆ. ಎಂದಿಗೂ ಆ ಪ್ರಯತ್ನ ಫಲ ನೀಡುವುದಿಲ್ಲ. ಕಾನೂನು ಬದ್ಧವಾಗಿ ನಡೆಯುವ ಗಣಿ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇದೆಯೇ ಹೊರತು, ಅಕ್ರಮಗಳಿಗೆ ಜಿಲ್ಲೆಯಲ್ಲಿ ಎಂದಿಗೂ ಅವಕಾಶ ನೀಡುವುದಿಲ್ಲ.

ಈಗಾಗಲೇ ಅನಾಹುತದ ಸಂಬಂಧ ಸರ್ಕಲ್ ಇನ್‍ಸ್ಪೆಕ್ಟರ್, ಸಬ್‍ಇನ್‍ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ. ಗಣಿ ಇಲಾಖೆ ಹಿರಿಯ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಸಚಿವ ಮುರುಗೇಶ್ ನಿರಾಣಿ ಅವರ ಜತೆ ಮಾತನಾಡಿರುವುದು ಎಂದು ಡಾ.ಸುಧಾಕರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News