ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರುವಲ್ಲಿ ಎನ್‍ಜಿಒಗಳ ಪಾತ್ರ ಮುಖ್ಯ: ಅಬ್ದುಲ್ ಅಝೀಮ್

Update: 2021-02-25 12:54 GMT

ರಾಮನಗರ, ಫೆ.25: ಮುಸ್ಲಿಮ್ ಸಮುದಾಯದಲ್ಲಿ ಬಹಳಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗುತ್ತಾರೆ. ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸದಲ್ಲಿ ಸ್ವಯಂ ಸೇವಾ ಸಂಘಗಳ ಪತ್ರ ಬಹಳ ಮುಖ್ಯ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ  ಅಬ್ದುಲ್ ಅಝೀಮ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಗಳೊಂದಿಗೆ ನಡೆಸಿದ ಕುಂದುಕೊರತೆಗಳನ್ನು ಆಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಪೋಷಕರು ಸರಿಯಾದ ಮಾಹಿತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸುತ್ತಾರೆ. ಆದರೆ, ಸಾಮಾಜಿಕ ಕಾರ್ಯಕರ್ತ ದಸ್ತಗೀರ್ ಆಲಂ ಅವರು ಸರಿಯಾಗಿ ಸಮೀಕ್ಷೆ ನಡೆಯುತ್ತಿಲ್ಲ ಎಂದು ದೂರು ಸಲ್ಲಿಸಿದ್ದಾರೆ ಎಂದರು.

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸರಕಾರದಿಂದ ವಸತಿಶಾಲೆಗಳನ್ನು ನಡೆಸಲಾಗುತ್ತಿದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಇರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅಬ್ದುಲ್ ಅಝೀಮ್ ಹೇಳಿದರು.

ಮುಸ್ಲಿಮ್ ಗ್ರಾಜುಯೇಟ್ ಫೋರಂನಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತಿದ್ದು, ಕಟ್ಟಡ ನಿರ್ಮಾಣ ಮಾಡಲು ಅವಶ್ಯಕವಿರುವ ಸ್ಥಳವನ್ನು ಒದಗಿಸಿಕೊಡುವಂತೆ ನಯಾಝ್ ಅಹಮದ್ ಎಂಬವರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಅಝೀಮ್, ರಾಮನಗರ ಜಿಲ್ಲೆಯಲ್ಲಿ ಸಿ.ಎ ನಿವೇಶನಗಳು ಲಭ್ಯವಿಲ್ಲ. ರಾಮನಗರದ ಹೊರವಲಯದಲ್ಲಿ ಸ್ಥಳ ಗುರುತಿಸಿ ಅರ್ಜಿ ಸಲ್ಲಿಸಿದರೆ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿ ಜೊತೆ ಚರ್ಚಿಸಿ ಸ್ಥಳ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಫಾರೂಕಿಯಾ ಕಾಲೇಜಿನ ಉಪನ್ಯಾಸಕ ಫಕ್ರುದ್ದೀನ್ ದೇಶದ ಅಭಿವೃದ್ಧಿಗೆ ಶಿಕ್ಷಣ ಎಂಬುದು ಬಹಳ ಮುಖ್ಯ ಶಿಕ್ಷಣಕ್ಕಾಗಿ ನೀಡಲಾಗುವ ಅರಿವು ಶೈಕ್ಷಣಿಕ ಸಾಲವನ್ನು ತಡೆ ಹಿಡಿಯಲಾಗಿದೆ. ಈ ಅನುದಾನವನ್ನು ಮಕ್ಕಳಿಗೆ ಒದಗಿಸಿಕೊಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆಯಾಗಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಈ ಬಾರಿ ಆಯವ್ಯಯದಲ್ಲಿ ಅಲ್ಪಸಂಖ್ಯಾತರಿಗೆ ನೀಡಲಾಗುವ ಶೈಕ್ಷಣಿಕ ಸಾಲದ ವ್ಯವಸ್ಥೆ ಮಾಡಬೇಕಾಗಿ ಮನವಿ ಸಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ರಾಮನಗರ ನಗರಸಭೆ ಆಯುಕ್ತ ನಂದಕುಮಾರ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ನಿಸಾರ್ ಅಹಮದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಂದು ಕೊರತೆ ಸಭೆಗೂ ಮುನ್ನ ಅಬ್ದುಲ್ ಅಝೀಮ್, ರಾಮನಗರ ಜಿಲ್ಲಾ ಆಸ್ಪತ್ರೆ, ಟಿಪ್ಪುನಗರದ ಮಸೀದಿ, ರಾಮನಗರದ ಲೂರ್ದು ಮಾತೆಯರ ದೇವಾಲಯ ಮತ್ತು ಸರಕಾರಿ ಮುಸ್ಲಿಮ್ ವಸತಿ ಕಾಲೇಜು ಹಾಗೂ ಹಾಸ್ಟೇಲ್‍ಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಕುರಿತು ಪರಿಶೀಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News