ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್: ಮಹತ್ವದ ಒಪ್ಪಂದಕ್ಕೆ ಸಹಿ

Update: 2021-02-26 13:00 GMT

ಬೆಂಗಳೂರು, ಫೆ. 26: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯ’ದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್ ಗಳನ್ನು ನೀಡುವ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಯಿತು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಉಪಸ್ಥಿತಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಇದರಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ(ಡಿಸಿಟಿಇ), ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾ ಪ್ರೈ.ಲಿ. ಮತ್ತು ರೋಟರಿ ಸಹಿ ಬಿದ್ದಿದೆ.

ಬಳಿಕ ಮಾತನಾಡಿದ ಡಾ.ಅಶ್ವತ್ಥ ನಾರಾಯಣ, ‘ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಮತ್ತು ವಿದ್ಯಾರ್ಥಿಗಳ ಕಲಿಕೆಯಲ್ಲಿ ವ್ಯತ್ಯಾಸವನ್ನುಂಟು ಮಾಡುವ ಪ್ರಮುಖ ಉದ್ದೇಶವನ್ನು ಹೊಂದಿದೆ. ಅವರಲ್ಲಿ ಹೆಚ್ಚಿನವರು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ' ಎಂದರು.

ಮಹತ್ವದ ಬದಲಾವಣೆ: ‘ಶಿಕ್ಷಣಕ್ಕೆ ಸಹಾಯ' ಮಾಡುವ ಈ ಕಾರ್ಯಕ್ರಮದ ಅಡಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಕಾರ್ಪೋರೇಟ್ ಕಂಪೆನಿಗಳು ಮತ್ತು ದಾನಿಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಕಲಿಕೆ ಬಗ್ಗೆ ತರಬೇತಿ ನೀಡಲಾಗುವುದು. ಬೋಧಕ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮಗಳು, ಡಿಜಿಟಲ್ ಬೋಧನೆಯ ಮೂಲಕ ಆಧುನಿಕ ವಿಧಾನದಲ್ಲಿ ಪ್ರಾಧ್ಯಾಪಕರು ಅಪ್‍ಗ್ರೇಡ್ ಆಗಲು ಇದರಿಂದ ಸಾಧ್ಯವಿದೆ. ಜತೆಗೆ, ಡಿಜಿಟಲ್ ಕಲಿಕೆ ವ್ಯವಸ್ಥೆ ಅಳವಡಿಸಿಕೊಳ್ಳಲು ಸರಕಾರಿ ಕಾಲೇಜುಗಳನ್ನು ಸಜ್ಜುಗೊಳಿಸುವ ಅಂಶವೂ ಇದರಲ್ಲಿ ಸೇರಿದೆ' ಎಂದು ಅವರು ತಿಳಿಸಿದರು.

30 ಸಾವಿರ ಕಂಪ್ಯೂಟರ್ ಗಳ ಅಗತ್ಯ: ಸರಕಾರಿ ಕಾಲೇಜುಗಳಿಗೆ ಸುಮಾರು 30 ಸಾವಿರ ಕಂಪ್ಯೂಟರ್ ಗಳು ಅಗತ್ಯವಿದ್ದು, ಆ ಪೈಕಿ ಈಗ 12,500 ಕಂಪ್ಯೂಟರ್ ಗಳನ್ನು ಒದಗಿಸಲಾಗಿದೆ. ಸುಮಾರು 50 ಕೋಟಿ ರೂ.ಯೋಜನೆ ಇದಾಗಿದ್ದು, ವಿದ್ಯಾರ್ಥಿಗಳನ್ನು ಆಧುನಿಕ ಕಲಿಕೆಯತ್ತ ಕರೆದೊಯ್ಯಲು, ಡಿಜಿಟಲ್ ತಾರತಮ್ಯವನ್ನು ನಿವಾರಿಸುವ ಈ ಉದಾತ್ತ ಉದ್ದೇಶಕ್ಕೆ ಖಾಸಗಿ ಸಂಘ ಸಂಸ್ಥೆಗಳು ಸರಕಾರದ ಜತೆ ಕೈಜೋಡಿಸುತ್ತಿರುವುದು ಸಂತೋಷ. ಇನ್ನೂ ಅನೇಕ ದಾನಿಗಳು ಶಿಕ್ಷಣಕ್ಕೆ ಸಹಾಯ ಮಾಡಲು ಮುಂದೆ ಬಂದಿದ್ದಾರೆಂದು ಹೇಳಿದರು.

ಈ ಕಾರ್ಯಕ್ರಮದ ಅಡಿಯಲ್ಲಿ ಕಾಗ್ನಿಜೆಂಟ್ ಇಂಡಿಯಾ ಪ್ರೈ.ಲಿ. ಇಲಾಖೆಗೆ 12,500 ಡಿ-ಬಾಂಡೆಡ್, ಡೆಸ್ಕ್ ಟಾಪ್ ಕಂಪ್ಯೂಟರ್ ಗಳನ್ನು ಒದಗಿಸಲು ಸ್ವಯಂಪ್ರೇರಿತವಾಗಿ ಮುಂದೆ ಬಂದಿದೆ. ಇದರೊಂದಿಗೆ ವಿದ್ಯಾರ್ಥಿಗಳ ಬಳಕೆಗಾಗಿ ಎಲ್ಲ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಂಪ್ಯೂಟರ್ ಲ್ಯಾಬ್‍ಗಳನ್ನು ಸ್ಥಾಪಿಸಲಾಗುವುದು. ಇನ್ನೂ ರೋಟರಿ ಕ್ಲಬ್ ವಿಂಡೋಸ್ ಓಎಸ್ ಒದಗಿಸಲಿದ್ದಾರೆ. ನಂತರ ಕಂಪ್ಯೂಟರ್ ಗಳನ್ನು ನಿಗದಿತ ಕಾಲೇಜುಗಳಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆಂದು ಅವರು ವಿವರ ನೀಡಿದರು

ಕಾಗ್ನಿಜೆಂಟ್ ಸಂಸ್ಥೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ನವೀನ್ ರಾವ್ ಮಾತನಾಡಿ, ‘ಕಾಲೇಜು ಶಿಕ್ಷಣ ಇಲಾಖೆಯ ಈ ನಿರ್ಣಾಯಕ ಉಪಕ್ರಮದ ಭಾಗವಾಗಿರುವುದಕ್ಕೆ ನಮಗೆ ಸಂತೋಷವಾಗಿದೆ. ಸರಕಾರಿ ಕಾಲೇಜುಗಳ ಮಕ್ಕಳ ಡಿಜಿಟಲ್ ಕಲಿಕೆಯನ್ನು ಉತ್ತೇಜಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾದದ್ದು' ಎಂದು ಶ್ಲಾಘಿಸಿದರು.

ಡಿಜಿಟಲ್ ವೇದಿಕೆಯಲ್ಲಿರುವ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಮೂಲಕ ಕಲಿಯುವ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಾಯ ಕಾರ್ಯಕ್ರಮ ಪೂರಕ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎಂದು ರೋಟರಿ ಕ್ಲಬ್ ಜಿಲ್ಲಾ ಗರ್ವನರ್ ನಾಗೇಂದ್ರ ಪ್ರಸಾದ್ ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪ್ರಭಾಕರ್ ಯೋಜನೆ ಕುರಿತು ಮಾಹಿತಿ ನೀಡಿದರು. ಕಾಗ್ನಿಜೆಂಟ್ ಸಂಸ್ಥೆಯ ನಿರ್ದೇಶಕ(ಸಿಎಸ್‍ಆರ್) ದೀಪಕ್ ಪ್ರಭು, ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಹರಿಸಿಂಗ್ ಸೇರಿದಂತೆ ಇನ್ನಿತರರು ಈ ವೇಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News