ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ: ಸಚಿವ ಡಾ. ಕೆ.ಸಿ.ನಾರಾಯಣ ಗೌಡ
ಉಡುಪಿ, ಫೆ.26: ರಾಜ್ಯದಲ್ಲಿ 2 ಕೋಟಿಗೂ ಅಧಿಕ ಯುವಕರಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿರುವ ಯುವಪ್ರತಿಭೆಗಳನ್ನು ಗುರುತಿಸಿ, ಅವರ ಪ್ರತಿಭೆಯನ್ನು ದೇಶ- ವಿದೇಶಗಳಲ್ಲಿ ಬೆರಗು ಮೂಡಿಸುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಯುವಜನತೆಯನ್ನು ಪ್ರೋತ್ಸಾಹಿಸುವ ಯೋಜನೆ ಗಳನ್ನು ಜಾರಿಗೆ ತರಲಾಗುವುದು ಎಂದು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಹೇಳಿದ್ದಾರೆ.
ಕಾಪು ವಿಧಾನಸಭಾ ಕ್ಷೇತ್ರದ ಮಟ್ಟಾರುನಲ್ಲಿ ಶುಕ್ರವಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುವ 3.29 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು.
ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರುವ ಯುವಕರಿಗೆ ಅಗತ್ಯ ತರಬೇತಿ, ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು. ಯುವಕರ ಹೊಸ ಪ್ರತಿಭೆಯನ್ನು ಅನಾವರಣಗೊಳಿಸಲು ಸುಸಜ್ಜಿತ ವೇದಿಕೆ ಕಲ್ಪಿಸಲಾಗುವುದು. ಕರಾವಳಿ ಭಾಗದ ಜನತೆ ಕಲೆ, ಶಿಕ್ಷಣ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದಿದ್ದಾರೆ ಎಂದು ಸಚಿವರು ನುಡಿದರು. ಕೋವಿಡ್ ಎರಡನೇ ಅಲೆ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಾಣಿಸಿಕೊ ಳ್ಳುತ್ತಿದ್ದು ಅದರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಸಭೆ, ಸಮಾರಂಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಚಿವ ಡಾ. ಗೌಡ ಹೇಳಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲಾಗುವ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನವನ್ನು ಆದಷ್ಟು ಶೀಘ್ರದಲ್ಲಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಅಗತ್ಯ ಮೂಲೂತ ಸೌಲ್ಯಗಳ ಪ್ರಯೋಜನ ಒದಗಿಸಲಾಗುವುದು ಹಾಗೂ ಸ್ಥಳೀಯ ಜನರ ಸಮಸ್ಯೆಗಳಿಗೆ ಅನುಗುಣವಾಗಿ ಯೋಜನೆಗಳನ್ನು ಗುರುತಿಸಿ, ಪ್ರಾಥಮಿಕ ಸರ್ವೇ, ವರದಿ ಮತ್ತು ಸಮಗ್ರ ಯೋಜನಾ ವರದಿಗಳನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದರು.
ಮುಖ್ಯಅತಿಥಿಯಾಗಿ ಮಾತನಾಡಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ , ಪ್ರಾಧಿಕಾರದ ವತಿಯಿಂದ ಕರಾವಳಿ ಜಿಲ್ಲೆ ಗಳಲ್ಲಿ ಇದುವರೆಗೆ 4 ತೂಗು ಸೇತುವೆ, 117 ಕಾಲುಸಂಕ/ಕಿರು ಸೇತುವೆ, 35 ಸುಸಜ್ಜಿತ ಮೀನು ಮಾರುಕಟ್ಟೆ , 8 ಉದ್ಯಾನವನ, 90 ರಸ್ತೆ ಸೇರಿದಂತೆ ಹಲವು ಕಾಮಗಾರಿಗಳನ್ನು ಮುಕ್ತಾಯಗೊಳಿಸಿದ್ದು, ಪ್ರಸಕ್ತ ಬಜೆಟ್ನಲ್ಲಿ ಪ್ರಾಧಿಕಾರಕ್ಕೆ 100 ಕೋಟಿ ರೂ ಗಳ ಅನುದಾನವನ್ನು ಕೋರಲಾಗಿದೆ ಎಂದರು.
ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ತಾಪಂ ಅಧ್ಯಕ್ಷೆ ಶಶಿಪ್ರಬಾ ಶೆಟ್ಟಿ, ಸದಸ್ಯೆ ಗೀತಾ ವಾಗ್ಲೆ, ಶಿರ್ವ ಗ್ರಾಂಪಂ ಅಧ್ಯಕ್ಷೆ ಗ್ರೆಗೋರಿ ಕೊನ್ರಾಡ್ ಕಸ್ತಲಿನೋ, ಜಿಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾಸುವರ್ಣ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕರಾವಳಿ ಪ್ರಾಧಿಕಾರ ಕಾರ್ಯದರ್ಶಿ ಪ್ರದೀಪ್ ಡಿಸೋಜ ಸ್ವಾಗತಿಸಿದರು.