ಭಾರತದ ಔಷಧೋದ್ಯಮ 3 ವರ್ಷದಲ್ಲಿ ಸ್ವಾವಲಂಬಿ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

Update: 2021-02-27 17:34 GMT

ಬೆಂಗಳೂರು, ಫೆ.27: ಎಲ್ಲ ನಮೂನೆಯ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿ ಮುಂದಿನ 3 ವರ್ಷಗಳಲ್ಲಿ ದೇಶವನ್ನು ಸಂಪೂರ್ಣ ಸ್ವಾವಲಂಬಿ ಮಾಡಬೇಕು ಎಂಬ ಗುರಿಯೊಂದಿಗೆ ಕೇಂದ್ರ ಸರಕಾರವು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಶನಿವಾರ ನಗರದ ಆರ್.ಆರ್.ಇನ್ಸಿಟಿಟ್ಯೂಟ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತವು ಜನರಿಕ್ ಮೆಡಿಸಿನ್ ಉತ್ಪಾದನೆಯಲ್ಲಿ ಜಾಗತಿಕವಾಗಿ ಮೂರನೇ ಸ್ಥಾನವನ್ನು ಹೊಂದಿದೆ. ಕೋವಿಡ್ ಸಂದರ್ಭದಲ್ಲಿ ಜಗತ್ತಿನ 120 ದೇಶಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್, ಪ್ಯಾರಾಸಟಮಾಲ್ ಮುಂತಾದ ಮಾತ್ರೆಗಳನ್ನು ಪೂರೈಸಿದೆವು. ಆದರೆ, ಬಹುತೇಕ ಔಷಧ ಉತ್ಪಾದನೆಗೆ ಬೇಕಾಗುವ ಮೂಲ ರಾಸಾಯನಿಕಗಳಿಗಾಗಿ(ಎಪಿಐ, ಕೆಎಸ್‍ಎಂ ಮುಂತಾದವು) ನಾವು ಚೀನಾ ಮತ್ತಿತರ ದೇಶಗಳ ಮೇಲೆ ಅವಲಂಬಿತವಾಗಿದ್ದೇವೆ ಎಂದು ಅವರು ಹೇಳಿದರು.

ಇದರಲ್ಲಿ ಸ್ವಾವಲಂಬನೆ ಸಾಧಿಸಲು ದೇಶದ ಬೇರೆ ಬೇರೆ ಭಾಗಗಳಲ್ಲಿ ಮೂರು ಬಲ್ಕ್ ಡ್ರಗ್ ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುತ್ತಿದೆ. ಅದೇ ರೀತಿ ಶೇ.85ರಷ್ಟು ವೈದ್ಯಕೀಯ ಉಪಕರಣಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ದೇಶದಲ್ಲಿಯೇ ಇವನ್ನು ತಯಾರಿಸುವ ಉದ್ದೇಶದಿಂದ ನಾಲ್ಕು ಮೆಡಿಕಲ್ ಡಿವೈಸ್ ಪಾರ್ಕುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇವೆಲ್ಲ ಪೂರ್ಣಪ್ರಮಾಣದಲ್ಲಿ ಫಲ ನೀಡಲು ಇನ್ನೂ ಮೂರು ವರ್ಷ ಬೇಕು ಎಂದು ಅವರು ಹೇಳಿದರು.

ಈಚೆಗೆ ಮಂಡಿಸಿದ ಬಜೆಟ್ ನಲ್ಲಿ ವಿವಿಧ ವಲಯಗಳ ಉತ್ತೇಜನಕ್ಕಾಗಿ 1.9 ಲಕ್ಷ ಕೋಟಿ ರೂಪಾಯಿ ಒದಗಿಸಲಾಗಿದೆ. ಇದರಲ್ಲಿ ತಾವು ನಿರ್ವಹಿಸುವ ಔಷಧ ಇಲಾಖೆಗೆ 50 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಸದಾನಂದಗೌಡ ತಿಳಿಸಿದರು.

ಪ್ರತಿಯೊಬ್ಬ ಬಡವರಿಗೂ ಕೈಗೆಟಕುವ ದರದಲ್ಲಿ ಔಷಧೋಪಚಾರ ದೊರೆಯುವಂತೆ ಮಾಡಲು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಹಾಗೂ ಆಯುಷ್ಮಾನ್ ಭಾರತದಂತಹ ಯೋಜನೆಗಳನ್ನು ರೂಪಿಲಾಯಿತು. ಜನೌಷಧಿ ಮೆಡಿಸಿನ್ ಬಾಸ್ಕೆಟ್‍ನಲ್ಲಿ 1439 ನಮೂನೆಯ ಔಷಧಗಳು ಹಾಗೂ 235 ಬಗೆಯ ವೈದ್ಯಕೀಯ ಉಪಕರಣಗಳು ಲಭ್ಯವಿವೆ. ಇದುವರೆಗೆ ದೇಶದ 734 ಜಿಲ್ಲೆಗಳಲ್ಲಿ 7500 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಹಾಗೆಯೇ ದೇಶದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲೂ ಬಡವರ ಅನುಕೂಲಕ್ಕಾಗಿ ಜನೌಷಧಿ ಕೆಂದ್ರಗಳು ಇರಬೇಕು ಎಂಬುದು ಕೇಂದ್ರ ಸರಕಾರದ ಇಚ್ಛೆಯಾಗಿದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲೂ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ಸ್ಥಳಾವಕಾಶ ಕಲ್ಪಿಸಬೇಕು ಎಂದು ಕೋರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಸದಾನಂದ ಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ಆರ್.ಆರ್.ಕಾಲೇಜು ಕಂಪ್ಯೂಟರ್ ವಿಭಾಗದವರು ಅಭಿವೃದ್ಧಿಪಡಿಸಿರುವ “ಬ್ಲಡ್ ಡೋನರ್ಸ್” ಆ್ಯಪ್ ಬಿಡುಗಡೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ರಾಜಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದಾಸರಹಳ್ಳಿ ಮಾಜಿ ಶಾಸಕ ಎಸ್.ಮುನಿರಾಜು, ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ರಾಘವೇಂದ್ರ, ಅಧಿಕಾರಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News