ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಆರೋಪ: ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

Update: 2021-02-28 11:51 GMT

ಬೆಂಗಳೂರು, ಫೆ. 28: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೊಸದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ‘ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ' ಟ್ವೀಟ್ ಮಾಡಿದ್ದ ಆರೋಪ ಸಂಬಂಧ ತುಮಕೂರು ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನಟಿ ಕಂಗನಾ ರಣಾವತ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಹೈಕೋರ್ಟ್ ಗೆ ಕ್ರಿಮಿನಲ್ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಅರ್ಜಿಯಲ್ಲಿ ಕಂಗನಾ ವಿರುದ್ಧ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿರುವ ಖಾಸಗಿ ದೂರು ಹಾಗೂ ಕೋರ್ಟ್ ಆದೇಶದ ಮೇರೆಗೆ ದಾಖಲಿಸಿರುವ ಎಫ್‍ಐಆರ್ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿದ್ದಾರೆ. ಅರ್ಜಿಯಲ್ಲಿ ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ಹಾಗೂ ದೂರುದಾರ ವಕೀಲ ಎಲ್. ರಮೇಶ್ ನಾಯ್ಕ್ ಅವರನ್ನು ಪ್ರತಿವಾದಿಗಳಾಗಿ ನಮೂದಿಸಲಾಗಿದೆ.

ಏನಿದು ಪ್ರಕರಣ: ಹೊಸದಿಲ್ಲಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ನಟಿ ಕಂಗನಾ 2020 ಸೆ.21ರಂದು ಟ್ವೀಟ್ ಮಾಡಿ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ ಎಂದು ಆರೋಪಿಸಿದ್ದ ತುಮಕೂರಿನ ವಕೀಲ ಎಲ್ ರಮೇಶ್ ನಾಯಕ್ ಅವರು, ಈ ಸಂಬಂಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕೆಂದು ಕೋರಿ 2020 ಸೆ.25ರಂದು ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಸಿಆರ್‍ಪಿಸಿ 156(6) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಮುಂದಿನ ಕ್ರಮ ಜರುಗಿಸಲು ಕ್ಯಾತಸಂದ್ರ ಠಾಣೆ ಪೊಲೀಸರಿಗೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪಿಸಿಆರ್ ಮೇರೆಗೆ ಸ್ಥಳೀಯ ನ್ಯಾಯಾಲಯ ಹೊರಡಿಸಿರುವ ಆದೇಶ ಹಾಗೂ ಎಫ್‍ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ನಟಿ ಕಂಗನಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News