ಎಲ್‍ಡಿಎಫ್, ಯುಡಿಎಫ್ ಬಗ್ಗೆ ಬೇಸತ್ತ ಕೇರಳದಲ್ಲಿ ಬಿಜೆಪಿಯತ್ತ ಒಲವು: ಡಿಸಿಎಂ ಡಾ.ಅಶ್ವತ್ಥ ನಾರಾಯಣ

Update: 2021-02-28 12:24 GMT

ಬೆಂಗಳೂರು, ಫೆ. 28: ‘ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷಗಳ ನೇತೃತ್ವದ ಎಲ್‍ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ. ಆ ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆ' ಎಂದು ಕೇರಳ ರಾಜ್ಯದ ಬಿಜೆಪಿ ಸಹ ಪ್ರಭಾರಿ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕೇರಳದಲ್ಲಿ ಇವೆರಡೂ ರಾಜಕೀಯ ಒಕ್ಕೂಟಗಳು ಸಂಪೂರ್ಣ ವಿಫಲವಾಗಿವೆ. ಕೇವಲ ವೋಟ್‍ಬ್ಯಾಂಕ್ ಪಾಲಿಟಿಕ್ಸ್ ಮಾಡಿಕೊಂಡು ಎಪ್ಪತ್ತು ವರ್ಷಗಳಿಂದ ಆ ರಾಜ್ಯವನ್ನು ಕತ್ತಲೆಯಲ್ಲೇ ಇಟ್ಟಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಈಗಿನ ಎಲ್‍ಡಿಎಫ್ ಸರಕಾರವಂತೂ ರಾಜಕೀಯ ಕಿರುಕುಳ ನೀಡುವುದು, ರಾಜಕೀಯ ಕೊಲೆಗಳು ಹಾಗೂ ಸೇಡಿನ ರಾಜಕೀಯದಲ್ಲಿ ನಿರತವಾಗಿದೆ ಎಂದು ಆರೋಪಿಸಿದ ಡಾ.ಅಶ್ವತ್ಥ ನಾರಾಯಣ, ಈ ಎರಡೂ ರಾಜಕೀಯ ಒಕ್ಕೂಟಗಳು ಎಲ್ಲ ಜನರಿಗೂ ಸಲ್ಲುವ ಪಕ್ಷಗಳಲ್ಲ. ಕೇವಲ ಜಾತಿ-ಜಾತಿಗಳ ನಡುವೆ ವೈಷಮ್ಯ ಭಿತ್ತಿ ಆ ಮೂಲಕ ರಾಜಕೀಯ ಲಾಭ ಪಡೆಯುತ್ತಿವೆ' ಎಂದು ಟೀಕಿಸಿದರು.

‘ಭಾರತೀಯ ಸಂಸ್ಕೃತಿ, ಆಚಾರ ವಿಚಾರಕ್ಕೆ ವಿರುದ್ಧವಾಗಿರುವ ಎಲ್‍ಡಿಎಫ್‍ನಿಂದ ಕೇರಳ ರಾಜ್ಯಕ್ಕೆ ತುಂಬಾ ಹಾನಿಯಾಗಿದೆ. ಕಮ್ಯುನಿಸ್ಟ್ ಪಕ್ಷಗಳು ನಮ್ಮ ದೇಶದಲ್ಲಿ ಅಪ್ರಸ್ತುತವಾಗಿವೆ. ಎಲ್ಲ ಕಡೆ ಅಧಿಕಾರ ಕಳೆದುಕೊಂಡು ಈ ಕೇರಳದಲ್ಲೂ ನಿರ್ನಾಮದ ಹಂತದಲ್ಲಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷವೂ ದೇಶಾದ್ಯಂತ ಹೇಳ ಹೆಸರಿಲ್ಲದೆ ಹೋಗುತ್ತಿದೆ' ಎಂದು ಡಾ.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದರು.

‘ಬಿಜೆಪಿ ಬಗ್ಗೆ ಕೇರಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅನೇಕ ಪಕ್ಷಗಳಿಗೆ ಅಲ್ಲಿ ನಾಯಕತ್ವವೇ ಇಲ್ಲ. ಆ ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಇದ್ದಾರೆ. ಈ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ' ಎಂದು ಡಾ.ಅಶ್ವತ್ಥ ನಾರಾಯಣ ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News