ಸಹಕಾರಿ ಬ್ಯಾಂಕುಗಳಲ್ಲಿ ಖಾಲಿ ಇರುವ 5 ಸಾವಿರ ಹುದ್ದೆ ಭರ್ತಿಗೆ ಕ್ರಮ: ಎಸ್.ಟಿ.ಸೋಮಶೇಖರ್
ಬೆಂಗಳೂರು, ಮಾ.2: ಸಹಕಾರಿ ಇಲಾಖೆ ವ್ಯಾಪ್ತಿಗೆ ಒಳಪಡುವ ಬ್ಯಾಂಕುಗಳಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಮಂಗಳವಾರ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ವಿಭಾಗ ಮಟ್ಟದಲ್ಲಿ ಸಮೂಹ ಮಾಧ್ಯಮಗಳ ಪ್ರತಿನಿಧಿಗಳಿಗೆ ಸಹಕಾರ ಜಾಗೃತಿ ಚಿಂತನ-ಮಂಥನ ಕುರಿತು ಏರ್ಪಡಿಸಿದ್ದ ಒಂದು ದಿನದ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯ 4 ಕಂದಾಯ ವಿಭಾಗಗಳಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸುಮಾರು 39 ಸಾವಿರ ಕೋಟಿ ರೂ.ಗಳನ್ನು ಸಹಕಾರಿ ಇಲಾಖೆ ಮೂಲಕ ನೀಡಲಾಗಿದೆ. ವಸತಿ ಸೇರಿದಂತೆ ಹಲವು ಯೋಜನೆಗಳು ಸಹಕಾರಿ ರಂಗದಲ್ಲಿದ್ದು, ಇದರ ಪ್ರಯೋಜನ ಪಡೆಯಬೇಕು, ಎಲ್ಲ ಕ್ಷೇತ್ರಗಳಲ್ಲೂ ಸಹಕಾರಿ ರಂಗ ಮುಂಚೂಣಿಯಲ್ಲಿದೆ. ಇಲಾಖೆ ವತಿಯಿಂದ ದೊರೆಯುವ ತರಬೇತಿ ಪಡೆದು ಸಹಕಾರಿ ಬ್ಯಾಂಕ್, ಸಂಘ-ಸಂಸ್ಥೆ ಸ್ಥಾಪನೆ ಮಾಡಬಹುದಾಗಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಪತ್ರಕರ್ತರಿಗೆ ಮೂಡಾ ವತಿಯಿಂದ ವಸತಿ ಸಮುಚ್ಚಯ ನಿರ್ಮಿಸಲಾಗುತ್ತದೆ ಹೇಳಿದರು. ಕೋವಿಡ್ ಮತ್ತು ಲಾಕ್ಡೌನ್ ಸಂದರ್ಭದಲ್ಲಿ ಆರೋಗ್ಯವನ್ನು ಲೆಕ್ಕಿಸದೆ ಕೆಲಸ ಮಾಡಿ ಜನರಿಗೆ ಸೂಕ್ತ ಮಾಹಿತಿಯನ್ನು ನೀಡಿದ್ದೀರಿ. ಪತ್ರಕರ್ತರು ಕೂಡಾ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಸಾಕಷ್ಟು ನೋವು ಅನುಭವಿಸಿದರೂ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲದ ಆಡಳಿತಾಧಿಕಾರಿ ವೈ.ಎಚ್.ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಎನ್.ಎಸ್.ಅರುಣ್ ಕುಮಾರ್, ಕಾರ್ಯದರ್ಶಿ ಲಕ್ಷ್ಮೀಪತಯ್ಯ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಕೆ.ವಿಜಯಕುಮಾರ್ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್.ರಾಜೇಂದ್ರಕುಮಾರ್, ಉಪಾಧ್ಯಕ್ಷ ಎಸ್.ಲಕ್ಷ್ಮೀನಾರಾಯಣ್, ನಿರ್ದೇಶಕ ಮೋಹನ್ ಉಪಸ್ಥಿತರಿದ್ದರು.