80 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ವಶ

Update: 2021-03-03 16:39 GMT

ಬೆಂಗಳೂರು, ಮಾ.3: ನಾಗರಭಾವಿಯಲ್ಲಿ ಬಿಡಿಎಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್‍ಗಳು, ಗ್ಯಾರೇಜ್‍ಗಳು ಮತ್ತು ಕಾಂಪೌಂಡ್‍ಗಳನ್ನು ಬುಧವಾರ ಬೆಳಗ್ಗೆ ಬಿಗಿ ಪೊಲೀಸ್ ಬಂದೋಬಸ್ತಿನೊಂದಿಗೆ ತೆರವುಗೊಳಿಸಿದ ಬಿಡಿಎ ಅಧಿಕಾರಿಗಳು ಸುಮಾರು 2 ಎಕರೆ 2 ಗುಂಟೆ ಜಾಗವನ್ನು ವಶಪಡಿಸಿಕೊಂಡಿದ್ದಾರೆ. ಈ ಜಾಗದ ಮೌಲ್ಯ ಸುಮಾರು 80 ಕೋಟಿ ರೂಪಾಯಿಯಾಗಿದೆ.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಮಹದೇವ್ ಮಾರ್ಗದರ್ಶನದಲ್ಲಿ ಬಿಡಿಎ ಪೊಲೀಸರು ಸ್ಥಳೀಯ ಠಾಣೆಗಳ ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಆರು ಜೆಸಿಬಿಗಳಿಂದ ಶೆಡ್‍ಗಳು, ಮೂರು ಆರ್‍ಸಿಸಿ ಕಟ್ಟಡಗಳು ಸೇರಿದಂತೆ ಕಾಂಪೌಂಡನ್ನು ತೆರವುಗೊಳಿಸಿದರು.

ನಾಗರಬಾವಿ ರಿಂಗ್ ರಸ್ತೆಯ ಸಮೀಪವಿರುವ ಸರ್ವೆ ನಂಬರ್ 30 ರಲ್ಲಿನ 3 ಎಕರೆ 5 ಗುಂಟೆ ಜಮೀನನ್ನು ವಶಕ್ಕೆ ತೆಗೆದುಕೊಳ್ಳುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿತ್ತು. ಈ ಪೈಕಿ ಈಗಾಗಲೇ 1 ಎಕರೆ 3 ಗುಂಟೆ ಜಾಗವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿಕೊಳ್ಳಲಾಗಿದೆ.

ಉಳಿದ 2 ಎಕರೆ 2 ಗುಂಟೆ ಜಾಗದ ವಿಚಾರದಲ್ಲಿ ಕಳೆದ ಹಲವಾರು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್ ಈ ಜಾಗವನ್ನು ವಶಕ್ಕೆ ತೆಗೆದುಕೊಂಡು ಬಿಡಿಎಗೆ ಹಸ್ತಾಂತರಿಸುವಂತೆ ಮತ್ತು ಈ ಜಾಗದಲ್ಲಿ ಉದ್ಯಾನವನ ಹಾಗೂ ಆಟದ ಮೈದಾನ ನಿರ್ಮಾಣ ಮಾಡುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಬುಧವಾರ ಬೆಳಗ್ಗೆ ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಾಗದಲ್ಲಿದ್ದ ನಿರ್ಮಿಸಲಾಗಿದ್ದ ಶೆಡ್‍ಗಳು ಮತ್ತು ಗುಡಿಸಲುಗಳನ್ನು ತೆರವುಗೊಳಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಡಿಎಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳು ಒತ್ತುವರಿಯಾಗಿವೆ. ಇಂತಹ ಅನೇಕ ಜಾಗಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದು ಕೇವಲ ಆರಂಭವಷ್ಟೇ. ನಗರದ ಪ್ರತಿಷ್ಠಿತ ಬಡಾವಣೆಗಳಾದ ಜಯನಗರ, ಕೋರಮಂಗಲ, ಪೀಣ್ಯ, ವಿಜಯನಗರ, ಚಂದ್ರಾ ಬಡಾವಣೆ ಸೇರಿದಂತೆ ಇನ್ನಿತರೆ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಜಾಗಗಳನ್ನು ಗುರುತಿಸಿ ಕಾನೂನು ಪ್ರಕಾರ ವಶಕ್ಕೆ ಪಡೆಯಲಾಗುತ್ತದೆ ಎಂದು ತಿಳಿಸಿದರು.

ಬಿಡಿಎ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅದಕ್ಕೆ ಜಗ್ಗುವುದಿಲ್ಲ. ಇಂತಹ ಜಾಗಗಳನ್ನು ವಶಪಡಿಸಿಕೊಂಡು ಮುಂದಿನ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತದೆ. ಈಗಾಗಲೇ ಪ್ರತಿಷ್ಠಿತ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ನೂರಾರು ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಗುರುತಿಸಲಾಗಿದೆ. ಇವುಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಕಾನೂನು ವಿಭಾಗದ ಸಲಹೆಗಳನ್ನು ಪಡೆಯಲಾಗುತ್ತಿದೆ. ಸಲಹೆಗಳನ್ನು ಪಡೆದ ನಂತರ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ನಗರದ ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ನೂರಾರು ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ನನ್ನ ಗಮನಕ್ಕೆ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ನಂತರ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ.

-ಎಸ್.ಆರ್.ವಿಶ್ವನಾಥ್, ಬಿಡಿಎ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News