ಮಹಾರಾಷ್ಟ್ರ-ಕೇರಳಕ್ಕೆ ಹೋಗಿ ಬರುವವರಿಗೆ 15 ದಿನಕ್ಕೊಮ್ಮೆ ಕಡ್ಡಾಯ ಕೋವಿಡ್ ಪರೀಕ್ಷೆ: ಉಡುಪಿ ಜಿಲ್ಲಾಧಿಕಾರಿ

Update: 2021-03-08 15:21 GMT

ಉಡುಪಿ, ಮಾ.8: ಜಿಲ್ಲೆಗೆ ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರುವವರು 72 ಗಂಟೆಗಳ ಅವಧಿಯ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ. ಅಲ್ಲದೇ ವ್ಯಾವಹಾರಿಕ ಕಾರಣಗಳಿಗಾಗಿ ಎರಡೂ ರಾಜ್ಯಗಳಿಗೆ ನಿರಂತರವಾಗಿ ಓಡಾಡುವವರು 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲೇಬೇಕು. ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತಿ ದ್ದರು. ಸಾರ್ವಜನಿಕರು ತಮ್ಮ ಮನೆಯ ಸಮೀಪ ನೆಗೆಟಿವ್ ವರದಿ ಇಲ್ಲದೇ ಮಹಾರಾಷ್ಟ್ರ ಮತ್ತು ಕೇರಳದಿಂದ ಬಂದವರ ಬಗ್ಗೆ ಮಾಹಿತಿ ದೊರೆತಲ್ಲಿ ಕೂಡಲೇ ಇಲಾಖೆ ಇಲ್ಲವೇ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಜಿ.ಜಗದೀಶ್ ಮನವಿ ಮಾಡಿದರು.

ಜಿಲ್ಲೆಯಲ್ಲಿ ಸೋಮವಾರದಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ 74 ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್‌ಗಿರುವ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುತ್ತದೆ. ಅಲ್ಲದೇ ಜಿಲ್ಲೆಯ ಒಟ್ಟು 20 ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ದರ (ಪ್ರತಿ ಡೋಸ್‌ಗೆ 250ರೂ.) ಪಾವತಿಸಿ ಲಸಿಕೆಯನ್ನು ಪಡೆಯಬಹುದು ಎಂದರು.

ಇಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45ರಿಂದ 59 ವಯೋಮಿತಿಯೊಳಗಿನ ರಕ್ತದೊತ್ತಡ, ಮಧುಮೇಹ, ಹೃದಯ ಕಾಯಿಲೆ ಹಾಗೂ ಇತರ ಕಾಯಿಲೆ ಇರುವವರಿಗೆ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸರಕಾರಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 250 ರೂ ಪ್ರತೀ ಡೋಸ್‌ಗೆ ನೀಡಿ ಲಸಿಕೆ ಪಡೆಯಬಹುದಾಗಿದೆ. ಫಲಾನುವಿಗಳು ಲಸಿಕೆ ಪಡೆಯಲು ಯಾವುದೇ ಆಸ್ಪತ್ರೆಗಳಲ್ಲಿ ಆನ್‌ಲೈನ್ ಮೂಲಕ ಯಾವುದೆ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳಬಹುದು. ಲಸಿಕೆ ಪಡೆಯಲು ವೆಬ್‌ಸೈಟ್ ವಿಳಾಸ: https://selfregistration.cowin.gov.in ಅಥವಾ-aarogyasetu app ನಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಲಭ್ಯ ಇಲ್ಲದವರು ಹಾಗೂ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದವರು ತಮ್ಮ ಭಾವಚಿತ್ರವಿರುವ ಯಾವುದೇ ಗುರುತಿನ ಚೀಟಿಯೊಂದಿಗೆ ನೇರವಾಗಿ ಲಸಿಕಾ ಕೆಂದ್ರಕ್ಕೆ ಬಂದು ಸ್ಥಳದಲ್ಲೇ ಹೆಸರು ನೊಂದಾಯಿಸಿ ಕೊಂಡು ಅದೇ ದಿನ ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಮತ್ತು 45ರಿಂದ 59 ವಯಸ್ಸಿನ ಒಟ್ಟು 1,51,557 ಮಂದಿಯನ್ನು ಮೂರನೇ ಹಂತದ ಲಸಿಕೆ ನೀಡಲು ಗುರಿ ನಿಗದಿಪಡಿಸಲಾಗಿದೆ. ಜಿಲ್ಲೆಗೆ 82,100 ಡೋಸ್ ಕೋವಿಶೀಲ್ಡ್ ಲಸಿಕೆ ಸರಬರಾಜಾಗಿದ್ದು, ಇದರಲ್ಲಿ 49,200 ಡೋಸ್ ಹಿರಿಯ ನಾಗರೀಕರಿಗೆ ಮೀಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ವಿವರಿಸಿದರು.

ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮತ್ತು ಜಿಲ್ಲಾಸ್ಪತ್ರೆಯಲ್ಲಿ ರವಿವಾರ ಮತ್ತು ಸರಕಾರಿ ರಜಾದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಲಸಿಕೆಯನ್ನು ಪಡೆಯ ಬಹುದು. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೆಂದ್ರಗಳಲ್ಲಿ ಮಂಗಳವಾರ ಮತ್ತು ಗುರುವಾರ ಹೊರತುಪಡಿಸಿ ಎಲ್ಲಾ ಕೆಲಸದ ದಿನಗಳಂದು (ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ) ಲಸಿಕೆ ಪಡೆಯಬಹುದು.

ಹಿರಿಯ ನಾಗರಿಕರು ಮತ್ತು ಇತರೇ ಕಾಯಿಲೆಗಳಿಂದ ಬಳಲುತ್ತಿರುವವರು ಕೋವಿಡ್ ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರಾಗುತ್ತಿದ್ದು, ಇವರುಗಳು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಕೋವಿಡ್ ಹಿಮ್ಮೆಟ್ಟಿಸಲು ಇದರಿಂದ ಸಾಧ್ಯವಾಗಲಿದೆ ಎಂದರು.

ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆದ ನಂತರ ಮೂವರಿಗೆ ಮಾತ್ರ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ಅದು ಕೂಡ ಲಸಿಕೆಯಿಂದ ಅಲ್ಲ ಎಂದು ದೃಡಪಟ್ಟಿದೆ. ಆ ಮೂರು ಮಂದಿಯೂ ಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಸಾರ್ವಜನಿಕರು ಲಸಿಕೆ ಕುರಿತ ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೇ ಲಸಿಕೆ ಪಡೆಯುವಂತೆ ಜಿ.ಜಗದೀಶ್ ಹೇಳಿದರು.

ಕೋವಿಡ್ ಇನ್ನೂ ಸಂಪೂರ್ಣವಾಗಿ ನಾಶವಾಗಿಲ್ಲ. ಆದರೆ ಸಾರ್ವಜನಿಕರು ಕೋವಿಡ್ ಇಲ್ಲ ಎಂಬ ಭಾವನೆಯಿಂದ ಕೋವಿಡ್ ಸುರಕ್ಷಾ ಕ್ರಮಗಳನ್ನು ಉಲ್ಲಂಘಿಸುತ್ತಿರುವುದು ಎಲ್ಲಾ ಕಡೆಗಳಲ್ಲಿ ಕಂಡುಬರುತ್ತಿದೆ. ಇದು ಕೂಡದು ಸಾರ್ವಜನಿಕರು ಈ ಹಿಂದಿನಂತೆ ಕಡ್ಡಾಯವಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದನ್ನು ಪಾಲಿಸುವಂತೆ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಡಿಹೆಚ್‌ಓ ಡಾ.ಸುಧೀರ್ ‌ಚಂದ್ರ ಸೂಡಾ, ಕೋವಿಡ್ ಲಸಿಕಾ ಅಧಿಕಾರಿ ಡಾ. ಎಂ.ಜಿ.ರಾಮ , ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಡಾ.ಪ್ರೇಮಾನಂದ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News