×
Ad

ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು: ಡಿ.ಕೆ.ಶಿವಕುಮಾರ್

Update: 2021-03-12 22:09 IST

ಬೆಂಗಳೂರು, ಮಾ. 12: ‘ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ಆಕಾಶದಿಂದ ಹನಿಯಾಗಿ ಬಿದ್ದ ಮಳೆನೀರು, ಹೊಳೆ, ನದಿಯಾಗಿ ಸಾಗರ ಸೇರಬೇಕು. ಅದೇ ರೀತಿ ಹುಟ್ಟಿನಿಂದಲೇ ರಕ್ತಗತ ಕಾಂಗ್ರೆಸ್ಸಿಗರಾಗಿರುವ ಮಧು ಬಂಗಾರಪ್ಪ ಅವರು ಕಾಂಗ್ರೆಸ್‍ಗೆ ಮರಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿನ ಸದಾಶಿವನಗರದಲ್ಲಿನ ತಮ್ಮ ನಿವಾಸಕ್ಕೆ ಆಗಮಿಸಿದ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜಕಾರಣದ ಆರಂಭದ ದಿನಗಳಲ್ಲಿ ನನ್ನನ್ನು ಗುರುತಿಸಿ, ಬೆಳೆಸಿದ ಬಂಗಾರಪ್ಪನವರನ್ನು ನಾನಿಂದು ಸ್ಮರಿಸುತ್ತೇನೆ. ಚಿಕ್ಕ ವಯಸ್ಸಿನಲ್ಲೇ, ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ, ನಾನು ಸೇರಿದಂತೆ ಬಹಳ ಯುವಕರನ್ನು ಅವರು ಆಕರ್ಷಿಸಿದ್ದರು. ಅವರ ರಾಜಕಾರಣದ ಗರಡಿಯಲ್ಲಿ ಬೆಳೆದವನು ನಾನು. ಇಲ್ಲಿವರೆಗೂ ಬಂದಿದ್ದೇನೆ ಎಂದರು.

ಇಂದು ಅವರ ಸುಪುತ್ರ ಮಧುಬಂಗಾರಪ್ಪ ಅವರು ನನ್ನನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳಿಂದ ನಾನು ಅವರಿಗೆ ಗಾಳ ಹಾಕಿಕೊಂಡೇ ಬಂದಿದ್ದೆ. ಅವರ ತಂದೆ ನಮ್ಮ ಪಕ್ಷದ ಸಂಘಟನೆಗೆ ದೊಡ್ಡಶಕ್ತಿ ಕೊಟ್ಟಿದ್ದರು. ರಾಜ್ಯದಲ್ಲಿ ಅನೇಕ ನಾಯಕರನ್ನು ಬೆಳೆಸಿ, ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಇವೆಲ್ಲವೂ ಶಾಶ್ವತವಾಗಿ ಉಳಿದಿವೆ ಎಂದು ಶಿವಕುಮಾರ್ ನೆನಪು ಮಾಡಿಕೊಂಡರು.

ಭಿನ್ನಾಭಿಪ್ರಾಯಗಳಿಂದ ಅವರು ನಮ್ಮ ಪಕ್ಷ ತೊರೆದಿದ್ದರು. ಅದರ ಬಗ್ಗೆ ಈಗ ಚರ್ಚೆ ಬೇಡ. ಆಕಾಶದಿಂದ ಹನಿಯಾಗಿ ಬಿದ್ದ ನೀರು ನದಿ ಮೂಲಕ ಸಮುದ್ರ ಸೇರಲೇಬೇಕು. ಕಾಂಗ್ರೆಸ್ ಪಕ್ಷ ಸಾಗರ ಇದ್ದಂತೆ. ನಮ್ಮ ವರಿಷ್ಠರು ನಮಗೆ ಕರೆ ಮಾಡಿ, ಮಧು ಬಂಗಾರಪ್ಪ ನಿಮ್ಮನ್ನು ಬಂದು ಭೇಟಿ ಮಾಡಲಿದ್ದಾರೆಂದು ಸೂಚಿಸಿದ್ದರು. ವರಿಷ್ಠರು ಮಧು ಬಂಗಾರಪ್ಪರನ್ನು ದಿಲ್ಲಿಗೆ ಕರೆಸಿಕೊಂಡು ಮಾತನಾಡಿದ್ದಾರೆ. ಅವರೂ ಘಳಿಗೆ, ಮುಹೂರ್ತದ ಬಗ್ಗೆ ಯೋಚಿಸುತ್ತಿದ್ದರು.

ಇವರ ಜತೆ ರಾಜ್ಯದ ಉದ್ದಗಲಕ್ಕೂ ಅನೇಕ ಬೆಂಬಲಿಗರು, ಜೊತೆಯಲ್ಲಿ ಕೆಲಸ ಮಾಡಿದವರು ಇದ್ದಾರೆ. 10 ವರ್ಷಗಳ ಕಾಲ ಪಕ್ಷದಲ್ಲಿ ದುಡಿದಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಮಧು ಅವರು ಹುಟ್ಟಿನಿಂದಲೇ, ರಕ್ತಗತವಾಗಿ ಕಾಂಗ್ರೆಸಿಗರಾಗಿದ್ದಾರೆ. ಅವರ ಎಲ್ಲ ಆಚಾರ-ವಿಚಾರಗಳು ಕಾಂಗ್ರೆಸ್ ತತ್ವ-ಸಿದ್ಧಾಂತ ಆಧಾರದ ಮೇಲೆ ನಿಂತಿವೆ. ಹೀಗಾಗಿ ಕಾಂಗ್ರೆಸ್ ಅವರಿಗೆ ಹೊಸದಲ್ಲ. ಯಾವಾಗ ಪಕ್ಷ ಸೇರುತ್ತಾರೆ ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರ ಜತೆ ಮಾತನಾಡಬೇಕಿದೆ ಎಂದರು.

ಇವರು ವಿರೋಧ ಪಕ್ಷದ ನಾಯಕರನ್ನೂ ನಿನ್ನೆ ಭೇಟಿ ಮಾಡಿದ್ದಾರೆ. ಕಾಗೋಡು ತಿಮ್ಮಪ್ಪ, ವೀರಪ್ಪ ಮೊಯ್ಲಿ, ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಜಾರ್ಜ್ ಅವರು ಸೇರಿದಂತೆ ಅನೇಕ ಹಿರಿಯ ನಾಯಕರು ಬಂಗಾರಪ್ಪ ಅವರ ಜತೆ ಕೆಲಸ ಮಾಡಿದ್ದರು. ಅವರ ಆಶೀರ್ವಾದವೂ ಇವರಿಗೆ ಇದೆ. ಇವರನ್ನು ಪ್ರೀತಿಯಿಂದ ಬರ ಮಾಡಿಕೊಳ್ಳಲು ಎದುರು ನೋಡುತ್ತಿದ್ದಾರೆ. ಹೀಗಾಗಿ ಸೇರ್ಪಡೆ ದಿನದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ತಿಳಿಸುತ್ತೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News