ಗಣಿಗಾರಿಕೆ ಉದ್ಯಮಿಗಳಿಗೆ ಪರವಾನಿಗೆ ನೀಡಲು ಆಫ್‍ಲೈನ್-ಆನ್‍ಲೈನ್ ವ್ಯವಸ್ಥೆ: ಮುರುಗೇಶ್ ನಿರಾಣಿ

Update: 2021-03-12 17:21 GMT

ಧಾರವಾಡ, ಮಾ.12: ಗಣಿಗಾರಿಕೆ ನಡೆಸುವ ಉದ್ಯಮಿಗಳಿಗೆ ಶೀಘ್ರದಲ್ಲಿ ಲೈಸೆನ್ಸ್(ಪರವಾನಿಗೆ) ನೀಡಲು ಅನುಕೂಲವಾಗುವಂತೆ ಆನ್‍ಲೈನ್ ಮತ್ತು ಆಫ್‍ಲೈನ್ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಶುಕ್ರವಾರ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಫ್‍ಲೈನ್, ಆನ್‍ಲೈನ್ ಜಾರಿ ಮಾಡಿದರೆ 30 ದಿನದಲ್ಲಿ ಗಣಿಗಾರಿಕೆ ಲೈಸೆನ್ಸ್ ಪಡೆಯಬಹುದು. ಇನ್ನು 30 ದಿನದೊಳಗೆ ಈ ಎರಡೂ ವ್ಯವಸ್ಥೆಯನ್ನು ಇಲಾಖೆ ಜಾರಿಗೆ ತರಲಿದೆ. ಈಗಾಗಲೇ ಕರಡು ನೀತಿ ಸಿದ್ದವಾಗಿದ್ದು, ಗಣಿಗಾರಿಕೆ ಅನುಮತಿ ಪಡೆಯುವವರೆಗೆ ತೊಂದರೆಯಾಗದಂತೆ ಸರಳೀಕರಣ ಮಾಡುವುದು ಇದರ ಮುಖ್ಯ ಉದ್ದೇಶ ಎಂದು ಹೇಳಿದರು.

ಅದಿರನ್ನು ಹೊರಗಿನಿಂದ ಆಮದು ಮಾಡಿಕೊಳ್ಳುವುದಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿನ ಅದಿರನ್ನು ಬಳಕೆ ಮಾಡಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಜಿಂದಾಲ್, ಬಲ್ಡೋಟಾ, ಕಿರ್ಲೋಸ್ಕರ್ ಸೇರಿದಂತೆ ದೊಡ್ಡ ದೊಡ್ಡ ಕಂಪನಿಗಳ ಜೊತೆ ಸಭೆ ನಡೆಸಲಾಗಿದೆ. ಹೊರಗಡೆಯಿಂದ ಅದಿರು ಆಮದು ಮಾಡಿಕೊಂಡರೆ ಉಂಟಾಗಬಹುದಾದ ಆರ್ಥಿಕ ಹೊರೆಯನ್ನು ತಗ್ಗಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಚರ್ಚೆ ನಡೆಸಲಾಗಿದೆ. ಅವರು ಸ್ಥಳೀಯ ಸಂಪನ್ಮೂಲವನ್ನು ಬಳಸಿಕೊಳ್ಳಲು ಸೂಚನೆ ಕೊಟ್ಟಿದ್ದಾರೆ. ಸದ್ಯದಲ್ಲೇ ಮತ್ತೊಮ್ಮೆ ಅಧಿಕಾರಿಗಳ ಸಭೆ ಕರೆದು ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುರುಗೇಶ್ ನಿರಾಣಿ ತಿಳಿಸಿದರು.

ರಾಜ್ಯದಲ್ಲಿ  ಪದೇ ಪದೇ ಉಂಟಾಗುತ್ತಿರುವ ಅವಘಡಗಳನ್ನು ತಪ್ಪಿಸಲು ಇಲಾಖೆ ಗಂಭೀರ ಚಿಂತನೆ ನಡೆಸುತ್ತಿದೆ. ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದ ಘಟನೆ ನಂತರ ನಾವು ಹೊಸ ನಿಯಮಗಳನ್ನು ತಂದಿದ್ದೇವೆ ಎಂದು ಮಾಹಿತಿ ನೀಡಿದರು. ಸರಕಾರದಿಂದ ಅನುಮತಿ ಪಡೆದವರು ಮಾತ್ರ ಸ್ಫೋಟಕ ವಸ್ತುಗಳನ್ನು ಬಳಸಬೇಕು. ಬೇರೊಬ್ಬರು ಬಳಸದಂತೆ ಕಾನೂನು ಜಾರಿಗೆ ತರಲಾಗುತ್ತದೆ. ಯಾರಾದರೂ ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಇಟ್ಟುಕೊಂಡಿದ್ದರೆ ಕೂಡಲೇ ಹಿಂತಿರುಗಿಸಬೇಕೆಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಹೊಸದಾಗಿ ಸ್ಕೂಲ್ ಆಫ್ ಮೈನಿಂಗ್ ತೆರೆಯುವ ಉದ್ದೇಶವಿದೆ. ಗಣಿಗಾರಿಕೆ ನಡೆಸುವವರಿಗೆ ಇದರಿಂದ ಅನುಕೂಲವಾಗುತ್ತದೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಆರಂಭಿಸುವ ಉದ್ದೇಶ ಇದೆ. ಹೀಗಾಗಿ ಎಲ್ಲ ಕಡೆ ಅಧಿಕಾರಿಗಳಿಗೆ ತರಬೇತಿ ಹಮ್ಮಿಕೊಳ್ಳಲಾಗುವುದು. ಗಣಿಗಾರಿಕೆ ನಡೆಸುವವರಿಗೆ ಇಲಾಖೆ ವತಿಯಿಂದ ತರಬೇತಿ ನೀಡಲಾಗುವುದು ಎಂದು ಮುರುಗೇಶ್ ನಿರಾಣಿ ತಿಳಿಸಿದರು.

ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗದಲ್ಲಿ 12 ಸಾವಿರ ಕೋಟಿ ರೂ.ಹಣವನ್ನು ರಾಜಸ್ವ ಧನದ ಮೂಲಕ ಸಂಗ್ರಹಿಸಲಾಗಿದೆ. ಇದರ ಬಡ್ಡಿ ಸೇರಿಸಿ ಒಟ್ಟು 18 ಸಾವಿರ ಕೋಟಿ ರೂ.ಯಾಗಿದೆ. ಇದು ಮೂರು ತಿಂಗಳ ಒಳಗೆ ನಮ್ಮ ಕೈ ಸೇರಿದರೆ ಅಭಿವೃದ್ಧಿ ಕಾರ್ಯಗಳಿಗೆ ಕ್ರಿಯಾ ಯೋಜನೆ ರೂಪಿಸಲಿದ್ದೇವೆ ಅವರು ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರುವುದು ನಮ್ಮ ಉದ್ದೇಶವಾಗಿದೆ. ಜನರಿಗೆ ಸರಳವಾಗಿ ಮತ್ತು ಕಡಿಮೆ ದರದಲ್ಲಿ ಮರಳು ಸಿಗಬೇಕೆಂಬುದು ನಮ್ಮ ಉದ್ದೇಶ ಎಂದು ಮುರುಗೇಶ್ ನಿರಾಣಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ನಿತಿನ್ ಪಾಟೀಲ್, ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ್, ಗಣಿ ಮತ್ತು ಭೂ ವಿಜ್ಞಾನ, ಅರಣ್ಯ, ಪರಿಸರ ಇಲಾಖೆ ಅಧಿಕಾರಿಗಳು ಹಾಜರಿದ್ದರು.

‘ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆಯಂತಹವರು, ಹೆಲಿಕಾಪ್ಟರ್ ಗಳಲ್ಲಿ ತಿರುಗಾಡುವವರು ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ) ಮೀಸಲಾತಿ ಪಟ್ಟಿಯಲ್ಲಿದ್ದಾರೆ. ಎಲ್ಲ ಸಮಾಜದಲ್ಲಿ ಬಡವರಿದ್ದಾರೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಬೇಕು. ಸಮುದಾಯ ಕುರಿತು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಯನ ನಡೆಸಿ ವರದಿ ನೀಡಲು ಈಗಾಗಲೇ ಸೂಚಿಸಿದ್ದು, ವರದಿ ಬಂದ ಬಳಿಕ ಸರಕಾರ ಸೂಕ್ತ ತೀರ್ಮಾನ ಮಾಡಲಿದೆ'

-ಮುರುಗೇಶ್ ಆರ್.ನಿರಾಣಿ, ಗಣಿ ಮತ್ತು ಭೂವಿಜ್ಞಾನ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News