×
Ad

ಲಾಕ್‍ಡೌನ್ ಬೇಡವಾದರೆ ಮಾರ್ಗಸೂಚಿ ಪಾಲಿಸಿ: ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ

Update: 2021-03-15 21:03 IST

ಬೆಂಗಳೂರು, ಮಾ. 15: ‘ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಎರಡನೇ ಅಲೆ ಮುನ್ಸೂಚನೆ ಎಂದು ತಜ್ಞರ ಸಮಿತಿ ಎಚ್ಚರಿಸಿದೆ. ಮತ್ತೊಮ್ಮೆ ‘ಲಾಕ್‍ಡೌನ್' ಘೋಷಣೆ ಮಾಡಬಾರದು ಎಂದರೆ ಜನರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದ್ದಾರೆ.

ಸೋಮವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿ ಸಮಿತಿ ಕೊಠಡಿಯಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಂಪುಟ ಸಹೋದ್ಯೋಗಿಗಳು ಹಾಗೂ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಹದಿನಾಲ್ಕು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮತ್ತೊಂದು ಕಡೆ ಮರಣದ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು.

ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಉಡುಪಿ, ತುಮಕೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಹೆಚ್ಚಾಗಿದ್ದು, ಇದು ಕೋವಿಡ್-19ರ ಎರಡನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೆಚ್ಚು ಸೋಂಕಿತರು ಇರುವ ಜಿಲ್ಲೆಗಳಲ್ಲಿ ‘ಲಸಿಕೆ' ಹಾಕುವ ಪ್ರಮಾಣ ಹೆಚ್ಚಿಸಬೇಕಾಗಿದೆ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.

ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಆದರೆ, ಇತರ ಮುಂಚೂಣಿಯ ಸಿಬ್ಬಂದಿಯಲ್ಲಿ ಶೇ.58ರಷ್ಟು ಮಾತ್ರ ಲಸಿಕೆ ಪಡೆದಿದ್ದಾರೆ. ದೊಡ್ಡ ಅಪಾರ್ಟ್‍ಮೆಂಟ್‍ಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸುವಂತೆ ಸೂಚಿಸಿದರು. ಮತದಾರರ ಪಟ್ಟಿಯನ್ನು ಆಧರಿಸಿ, ಹಿರಿಯ ನಾಗರಿಕರನ್ನು ಗುರುತಿಸಿ, ಲಸಿಕೆ ಹಾಕುವುದು. ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಮುನ್ನಚ್ಚರಿಕೆ: ಜನರು ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಮಾರ್ಗಸೂಚಿ ಉಲ್ಲಂಘನೆಗೆ ಕಟ್ಟುನಿಟ್ಟಾಗಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ ಬಿಎಸ್‍ವೈ, ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ನಿಯಂತ್ರಿಸಲು ಸೂಚಿಸಿದರು.

ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ವಿಶೇಷವಾಗಿ ರೋಗ ಲಕ್ಷಣ ಇರುವವರು, ಅಂಗಡಿ ಮಾಲಕರು, ಬಸ್ ನಿರ್ವಾಹಕರು ಮತ್ತಿತರರಿಗೆ ಪರೀಕ್ಷೆ ನಡೆಸುವುದು. ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸುವುದು. ಕೋವಿಡ್ ಆಸ್ಪತ್ರೆಗಳು, ಆಕ್ಸಿಜನ್ ಪೂರೈಕೆ ಇರುವ ಹಾಸಿಗೆಗಳು, ಐಸಿಯು ಲಭ್ಯತೆ ಹಾಗೂ ಕೋವಿಡ್ ಕೇರ್ ಸೆಂಟರುಗಳ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವುದು ಎಂದು ಅವರು ಹೇಳಿದರು.

ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆ ನಡೆಸಿ, ಹಿಂದಿನಂತೆ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವುದು. ಹಿರಿಯ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯವನ್ನು ಚುರುಕುಗೊಳಿಸುವುದು. ವಿಶೇಷವಾಗಿ ಗ್ರಾಮೀಣ ಪ್ರದೇಶ ಹಾಗೂ ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು. ಎಲ್ಲ ಇಲಾಖೆಗಳು ಹಾಗೂ ರೋಟರಿ, ಲಯನ್ಸ್ ಕ್ಲಬ್‍ಗಳಂತಹ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವುದು. ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ನಿಗದಿತ ಸಂಖ್ಯೆ ಮೀರಿ ಪ್ರಯಾಣಿಕರನ್ನು ಕರೆದೊಯ್ಯಬಾರದು ಎಂದು ಅವರು ತಿಳಿಸಿದರು.

ಮೇಲ್ಕಂಡ ಎಲ್ಲ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್, ಡಾ. ಸುದರ್ಶನ್, ಡಾ.ರವಿ, ಪ್ರೊ.ಗಿರಿಧರಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ತಮ್ಮ ಅಭಿಪ್ರಾಯ ಮಂಡಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

‘ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮತ್ತೆ ಲಾಕ್‍ಡೌನ್ ಮಾಡಬೇಕು. ಲಾಕ್‍ಡೌನ್ ಮಾಡಿದರೆ ಒಳ್ಳೆಯದಾಗಲಿದೆ. ರಾಜ್ಯದಲ್ಲಿ ಇದೀಗ ಸೋಂಕಿತರ ಸಂಖ್ಯೆ ಸಾವಿರದ ಗಡಿಗೆ ಬಂದು ನಿಂತಿದೆ. ಹೀಗಾಗಿ ಲಾಕ್‍ಡೌನ್ ಮಾಡುವ ಪರಿಸ್ಥಿತಿ ಬಂದರೂ ಬರಬಹುದು. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು'

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

‘ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯಿಂದ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಸರಕಾರ ಸೋಂಕು ನಿಯಂತ್ರಣ ದೃಷ್ಟಿಯಿಂದ ಕೆಲ ಕಟ್ಟುನಿಟ್ಟಿನ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಮತ್ತೊಮ್ಮೆ ಲಾಕ್‍ಡೌನ್ ಸ್ಥಿತಿ ನಿರ್ಮಾಣವಾದರೆ ಪರಿಸ್ಥಿತಿ ಕಷ್ಟ. ಹೀಗಾಗಿ ಸರಕಾರ ಹೊರಗಿನಿಂದ ಬರುವವರ ಮೇಲೆ ನಿಗಾ ವಹಿಸಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News