ರಾಜ್ಯದಲ್ಲಿ ಲಾಕ್ಡೌನ್, ರಾತ್ರಿ ಕರ್ಫ್ಯೂ ಹೇರುವ ಉದ್ದೇಶವಿಲ್ಲ: ಸಿಎಂ ಯಡಿಯೂರಪ್ಪ
ಬೆಂಗಳೂರು, ಮಾ.17: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ರಾತ್ರಿ ಕರ್ಫ್ಯೂ ಬಗ್ಗೆ ಯಾವುದೆ ಸೂಚನೆ ಕೊಟ್ಟಿಲ್ಲ. ಆದುದರಿಂದ, ರಾಜ್ಯದಲ್ಲಿ ಲಾಕ್ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವ ಉದ್ದೇಶ ಸರಕಾರಕ್ಕಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಬೆಂಗಳೂರು ನಗರ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ಗಮನ ನೀಡುವಂತೆ ಪ್ರಧಾನಿ ಸಲಹೆ ನೀಡಿದ್ದು, ಅದರಂತೆ ಕ್ರಮ ವಹಿಸಲಾಗುವುದು. ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದ್ದಾರೆ. ಈಗಾಗಲೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಎರಡು ಮತ್ತು 3ನೇ ಹಂತದ ನಗರಗಳು ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ. ಹಳ್ಳಿಗಳಿಗೆ ಹಬ್ಬದಂತೆ ಎಚ್ಚರ ವಹಿಸಿ. ಸಣ್ಣ ಪಟ್ಟಣಗಳಲ್ಲಿ ರೆಫರಲ್ ವ್ಯವಸ್ಥೆ ಮತ್ತು ಆಂಬ್ಯುಲೆನ್ಸ್ ವ್ಯವಸ್ಥೆಗಳನ್ನು ಬಲಪಡಿಸಲು ಪ್ರಧಾನಿ ಸೂಚಿಸಿದ್ದು, ಲಸಿಕೆಗಳು ವ್ಯರ್ಥವಾಗುವ ಪ್ರಮಾಣ ಕಡಿಮೆಗೊಳಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ಸಭೆಯಲ್ಲಿ ಕೋವಿನ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡ ರಾಜ್ಯದ 2042 ಆಸ್ಪತ್ರೆಗಳಲ್ಲಿ 1439 ಆಸ್ಪತ್ರೆಗಳು ಇನ್ನೂ ಲಸಿಕೆ ಅಭಿಯಾನ ಪ್ರಾರಂಭಿಸಿಲ್ಲ. ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಚಿಕಿತ್ಸಾ ನಿರ್ವಹಣೆಯ ಮಾರ್ಗಸೂಚಿಗಳ ಪಾಲನೆ, ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, (ಟೆಸ್ಟ್, ಟ್ರಾಕ್, ಟ್ರೀಟ್) ಮಾದರಿಯನ್ನು ತೀವ್ರಗೊಳಿಸುವಂತೆ ತಿಳಿಸಿದ್ದಾರೆ. ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದ್ದು, ಪ್ರಧಾನಿ ಮಾರ್ಗದರ್ಶನದಂತೆ ಕ್ರಮ ವಹಿಸಲಾಗುವುದು. ಈ ಸಂದರ್ಭದಲ್ಲಿ ಪ್ರಧಾನಿಯವರು ಭಾರತದಲ್ಲಿ ಲಸಿಕೆ ತಯಾರಿಕೆಗೆ ಲಭ್ಯವಿರುವ ಎಲ್ಲ ಅವಕಾಶಗಳ ಸದುಪಯೋಗಪಡಿಸಿಕೊಳ್ಳಲು ಕೇಂದ್ರ ಸರಕಾರ ಸಿದ್ಧವಿದೆ, ರಾಜ್ಯ ಸರಕಾರಗಳು ಇದರಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದೇ ಹೊರತು ವಾತಾವರಣದಲ್ಲಿನ ವೈರಸ್ ನಿರ್ನಾಮ ಆಗುವುದಿಲ್ಲ. ಆದುದರಿಂದ, ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅನುಸರಿಸುತ್ತಿರುವ ಮಾರ್ಗಗಳ ಬಗ್ಗೆ ಪ್ರಧಾನಿ ಗಮನಕ್ಕೆ ತರಲಾಗಿದೆ. ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿರುವ 3500 ಕ್ಕೂ ಹೆಚ್ಚಿನ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗುವುದು. ಪ್ರತಿ ದಿನ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದಲ್ಲಿ ಆರ್ಟಿಪಿಸಿಆರ್ ಪರೀಕ್ಷೆಗಳನ್ನು ಶೇ.93ರ ಗುರಿ ಸಾಧಿಸಿರುವುದಕ್ಕೆ ಕೇಂದ್ರ ಸರಕಾರವು ಅಭಿನಂದಿಸಿದೆ. ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಿದೆ. ಜೊತೆಗೆ, ಮೈಕ್ರೋ ಕಂಟೈನ್ಮೆಂಟ್ ಝೋನ್ಗಳ ಕಡೆಯೂ ಗಮನ ಹರಿಸುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದು ಅವರು ಹೇಳಿದರು.
ಮಾಸ್ಕ್, ಸುರಕ್ಷಿತ ಅಂತರ ಹಾಗೂ ಒಳಾಂಗಣ ಕಾರ್ಯಕ್ರಮಗಳ ಬಗ್ಗೆ ಎಚ್ಚರ ಇರಲಿ ಎಂದು ಕೇಂದ್ರ ಸರಕಾರ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಯಾವುದೆ ಅಡ್ಡಿ ಇಲ್ಲ. ಆದರೆ, ಮದುವೆ ಸೇರಿದಂತೆ ಒಳಾಂಗಣ ಕಾರ್ಯಕ್ರಮಗಳಿಗೆ ಮಾತ್ರ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ನಿಗದಿಪಡಿಸಿ, ಕಡಿಮೆ ಜನ ಭಾಗವಹಿಸಲು ಅನುಮತಿ ನೀಡಲಾಗುವುದು. ಚಲನಚಿತ್ರ ಮಂದಿರಗಳಲ್ಲಿ ಈಗಿರುವ ಮಾರ್ಗಸೂಚಿಗಳನ್ನೆ ಅನುಸರಿಸಲು ಸೂಚನೆ ನೀಡಲಾಗುವುದು.
-ಬಿ.ಎಸ್.ಯಡಿಯೂರಪ್ಪ, ಸಿಎಂ