ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ
ಉಡುಪಿ, ಮಾ.17: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಸೂಚಿಸಿರುವ ಎಲ್ಲಾ ಕ್ರಮ ಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಬುಧವಾರ ಸಂಜೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕರೆಯಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಮಾಸ್ಕ್ ಧರಿಸದವರ ವಿರುದ್ಧ ನಿಗದಿತ ದಂಡ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರ ಸ್ಥಳಿಯ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ದಂಡ ವಿಧಿಸುವ ಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜನೆ ಮಾಡಿದ್ದು, ದಂಡ ವಿಧಿಸದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.
ನೋಡೆಲ್ ಅಧಿಕಾರಿ ನೇಮಕ: ಈಗಾಗಲೇ ಸುತ್ತೋಲೆಯಲ್ಲಿ ತಿಳಿಸಿರುವಂತೆ ಸಭೆ, ಸಮಾರಂಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದಲ್ಲಿ ಸಂಬಂಧಪಟ್ಟವರ ವಿರುದ್ದ ದಂಡ ವಿಧಿಸುವಂತೆ ಸೂಚಿಸಿದ ಅವರು , ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಕುರಿತು ಪರಿಶೀಲಿಸಲು ನೋಡೆಲ್ ಅಧಿಕಾರಿಯನ್ನು ನೇಮಕ ಮಾಡಲಾಗುವುದು ಎಂದರು.
ಎಲ್ಲಾ ಅಂಗಡಿ, ಮಾಲ್ಗಳಲ್ಲಿ ಸಂಸ್ಥೆಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಗ್ರಾಹಕರಿಗೂ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಮಾಸ್ಕ್ ಧರಿಸದೇ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದು ಸೇರಿ ದಂತೆ ಎಪಿಡಮಿಕ್ ಕಾಯ್ದೆಯನುಸಾರ ಸಹ ಕ್ರಮ ಕೈಗೊಳ್ಳಲಾಗುವುದು. ಅಂಗಡಿ ಮತ್ತು ಮಾಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡುವ ಕುರಿತಂತೆ, ನಗರಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು ಮನೆಗಳಲ್ಲಿರುವ ಹಿರಿಯ ನಾಗರಿಕರು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಹೇಳಿದರು.
ಈ ಹಿಂದೆ ಕೋವಿಡ್ ಸಮಯದಲ್ಲಿ ರಚಿಸಲಾಗಿದ್ದ ಎಲ್ಲಾ ತಂಡಗಳು ತಮಗೆ ವಹಿಸಲಾಗಿದ್ದ ಕರ್ತವ್ಯಗಳನ್ನು ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚುವಿಕೆ, ಹೋಮ್ ಕ್ವಾರಂಟೈನ್ಗೆ ಭೇಟಿ, ಕ್ವಾರಂಟೈನ್ ಆ್ಯಪ್ ನಿರ್ವಹಣೆಯನ್ನು ಪರಿಶೀಲಿಸಬೇಕು. ಗ್ರಾಮೀಣ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆಗಳು ತಕ್ಷಣ ಸಭೆ ಸೇರಿ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಾರ್ವಜನಿಕರಿಗೆ ಕೋವಿಡ್ ಸುರಕ್ಷತಾ ನಿಯಮಗಳ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಲು ಪ್ರತೀ ಮನೆ ಮನೆಗೆ ಕರಪತ್ರಗಳ ಹಂಚಿಕೆ, ಜಿಂಗಲ್ಸ್ಗಳ ಬಳಕೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.
ಮಣಿಪಾಲದಲ್ಲಿ ಪ್ರಕರಣ ಹೆಚ್ಚಳ: ಉಡುಪಿ ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಕಂಡುಬರುತ್ತಿರುವ ಪಾಸಿಟಿವ್ ಪ್ರಕರಣಗಳ ಹೆಚ್ಚಿನವು ಮಣಿಪಾಲದ ಎಂಐಟಿ ವ್ಯಾಪ್ತಿಯಲ್ಲಿ ಕಂಡುಬರುತ್ತಿದ್ದು, ನಿನ್ನೆಯ ಜಿಲ್ಲೆಯ ಒಟ್ಟು ಪ್ರಕರಣಗಳಲ್ಲಿ 27 ಎಂಐಟಿಯಲ್ಲೇ ಕಂಡುಬಂದಿದೆ. ಈ ಪ್ರದೇಶವನ್ನು ಕಂಟೈನ್ಮೆಂಟ್ ರೆನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಣಿಪಾಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಅವಧಿ ಮೀರಿ ಪಬ್ ಮತ್ತು ಬಾರ್ ಗಳು ತೆರೆದಿದ್ದು, ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಇಂತಹ ಪಬ್-ಬಾರ್ಗಳ ವಿರುದ್ದ ಅಬಕಾರಿ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳು ವಂತೆ ಜಿ.ಜಗದೀಶ್ ಸೂಚನೆ ನೀಡಿದರು.
ಜಿಲ್ಲೆಗೆ ಮಹಾರಾಷ್ಟ್ರ, ಮುಂಬೈ ಮತ್ತು ಕೇರಳದಿಂದ ಬರುವವರು 72 ಗಂಟೆಗಳ ಕೋವಿಡ್ ನೆಗೆಟಿವ್ ವರದಿ ಪಡೆಯುವುದು ಕಡ್ಡಾಯವಾಗಿದ್ದು, ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸುವವರ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಆರೋಗ್ಯ ಇಲಾಖೆಗೆ ಅಥವಾ ಸಂಬಂದಪಟ್ಟ ಗ್ರಾಪಂ ಅಥವಾ ತಹಶೀಲ್ದಾರ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಕೋವಿಡ್ ನಿಯಂತ್ರಿಸುವ ಕುರಿತಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಅಧಿಕಾರಗಳನ್ನು ನೀಡಲಾಗಿದ್ದು, ಅಧಿಕಾರಿಗಳು ತಮಗೆ ನೀಡಿರುವ ಅಧಿಕಾರವನ್ನು ಸಮರ್ಪಕವಾಗಿ ಬಳಿಸಿಕೊಂಡು, ಸರಕಾರ ಸೂಚಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಜಿಲ್ಲೆಯನ್ನು ಕೋವಿಡ್ 2ನೇ ಅಲೆಯಿಂದ ರಕ್ಷಿಸಲು ಕಾರ್ಯನಿರ್ವಹಿಸಿ, ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಿ. ಸಾರ್ವಜನಿಕರು ಸಹಾ ಜಿಲ್ಲಾಡಳಿತ ಸೂಚಿಸುವ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ ಜಿಲ್ಲೆಯನ್ನು ಕೋವಿಡ್ 2ನೇ ಅಲೆಯಿಂದ ರಕ್ಷಿಸಲು ಸಹಕಾರ ನೀಡುವಂತೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು ಕಡ್ಡಯವಾಗಿ ಮಾಸ್ಕ್ ಧರಿಸುವಂತೆ ಡಿಸಿ ತಿಳಿಸಿದರು. ಗ್ರಾಮೀಣ ಪ್ರಧೇಶದ ಹಿರಿಯ ನಾಗರಿಕರಿಗೆ ಅವರ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ಗ್ರಾಪಂವಾರು ದಿನಾಂಕ ನಿಗದಿಪಡಿಸಿ ಅಂದು ಅಲ್ಲಿನ ವ್ಯಾಪ್ತಿಯ ಹಿರಿಯ ನಾಗರಿಕರನ್ನು ಕರೆ ತಂದು ಲಸಿಕೆ ನೀಡಲು ಪಿಡಿಓಗಳು ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಇಓ ಡಾ.ನವೀನ್ ಭಟ್ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪ ವಿಬಾಗಾಧಿಕಾರಿ ರಾಜು, ಡಿಹೆಚ್ಓ ಡಾ.ಸುಧೀರ್ಚಂದ್ರ ಸೂಡಾ, ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.