ಕಬ್ಬಿನಾಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ; 119 ಅರ್ಜಿ ವಿಲೇವಾರಿ

Update: 2021-03-20 13:59 GMT

ಕಬ್ಬಿನಾಲೆ (ಹೆಬ್ರಿ), ಮಾ.20: ಶನಿವಾರ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 119 ಅರ್ಜಿಗಳನ್ನು ಸ್ವೀಕರಿಸಲಾಯಿತು.

ಕಬ್ಬಿನಾಲೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ನಡೆಯುತ್ತಿರುವ 3 ನೇ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಇದಾಗಿದೆ. ಜಿಲ್ಲಾ ಕೇಂದ್ರದಿಂದ ಅತ್ಯಂತ ದೂರದಲ್ಲಿದ್ದು, ವಿವಿಧ ಸರ್ಕಾರಿ ಸೌಲ್ಯಗಳಿಗಾಗಿ ಜಿಲ್ಲಾ ಮತ್ತು ತಾಲೂಕು ಕಚೇರಿಗಳಿಗೆ ಬರಲು ಕಷ್ಟವಾಗುವ ಗ್ರಾಮಸ್ಥರ ಸಮಸ್ಯೆಗಳನ್ನು ಸ್ಥಳಕ್ಕೆ ಬಂದು ಬಗೆಹರಿಸಲಾಗುತ್ತಿದ್ದು, ಸ್ಥಳೀಯ ಸಮಸ್ಯೆಗಳನ್ನು ಇಲ್ಲಿಯೇ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಹುಲಿ ಯೋಜನೆ ಭೀತಿ: ಕಬ್ಬಿನಾಲೆ, ನಾಡ್ಪಾಲು ಸೇರಿದಂತೆ ಹೆಬ್ರಿ ಮತ್ತು ಕಾರ್ಕಳ ತಾಲೂಕಿನ 11 ಗ್ರಾಮಗಳಲ್ಲಿ ಹುಲಿ ಯೋಜನೆ ಮತ್ತು ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತಂತೆ ಸಾರ್ವಜನಿಕರಿಗೆ ಒಕ್ಕಲೆಬ್ಬಿಸುವ ಭಯವಿದೆ. ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದ ವಸತಿ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಮಸ್ಯೆಯಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುವಂತೆ ಜಿಪಂನ ಮಾಜಿ ಸದಸ್ಯ ಮಂಜುನಾಥ ಪೂಜಾರಿ ಕೋರಿದರು.ಹುಲಿ ಯೋಜನೆ ಕುರಿತಂತೆ ಜಿಲ್ಲಾಡಳಿತದ ಮೂಲಕ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದರು.

ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡುವುದಿಲ್ಲ ಎಂದು ರಾಜ್ಯದ ಕ್ಯಾಬಿನೆಟ್‌ನಲ್ಲಿ ನಿರ್ಧಾರ ಆಗಿದೆ. ಇಲ್ಲಿನ ವಿವಿಧ ಸಮಸ್ಯೆಗಳ ಕುರಿ ತಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಡೀಮ್ಡ್ ಪಾರೆಸ್ಟ್ ಯೋಜನೆಯ ಕುರಿತಂತೆ ಕೆಲವು ಸರ್ವೇ ನಂಬರ್‌ಗಳನ್ನು ವಿನಾಯತಿ ಮಾಡುವಂತೆ ಈಗಾಗಲೇ ರಾಜ್ಯ ಸರಕಾರದಿಂದ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಅನುಮತಿ ನೀಡಿದ ನಂತರ ಆ ಸರ್ವೇ ನಂಬರ್‌ಗಳಿಗೆ ಸಂಬಂಧಿಸಿದಂತೆ ಹಕ್ಕುಪತ್ರ ವಿತರಣೆ, ನಿವೇಶನ ನಿರ್ಮಾಣಕ್ಕೆ ಅನುಮತಿ ನೀಡಲು ಸಾಧ್ಯವಾಗಲಿದೆ ಎಂದು ಡಿಸಿ ನುಡಿದರು.

ಕೊಂಕಣಾರಬೆಟ್ಟು ಶಾಲೆಯ ಕಾಂಪೌಂಡ್ ಕುಸಿತದ ಬಗ್ಗೆ ಸಲ್ಲಿಸಿದ ಅರ್ಜಿ ಕುರಿತಂತೆ ಮಾತನಾಡಿದ ಡಿಸಿ, ಜಿಲ್ಲೆಯ ಎಲ್ಲಾ ಶಾಲೆ, ಅಂಗನ ವಾಡಿಗಳ ದುರಸ್ತಿಗೆ 2 ಲಕ್ಷ ರೂ. ಪ್ರಾಕೃತಿಕ ವಿಕೋಪ ನಿಧಿಯಡಿ ಬಿಡುಗಡೆಗೊಳಿಸಲಾಗುತ್ತಿದ್ದು, ಕಾಂಪೌಂಡ್ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಅಗತ್ಯವಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಪಿಆರ್‌ಇಡಿ ಇಂಜಿನಿಯರ್‌ಗೆ ಸೂಚಿಸಿದರು.

ನೆಟ್‌ವರ್ಕ್ ಸಮಸ್ಯೆ: ಕಬ್ಬಿನಾಲೆಯಿಂದ ಮುನಿಯಾಲುಗೆ ಹೋಗುವ ರಸ್ತೆ ಕಿರಿದಾಗಿದ್ದು, ಬಸ್ ಸಂಚರಿಸಲು ಕಷ್ಟವಾಗಿದೆ. ರಸ್ತೆ ಅಗಲೀಕರಣ ಮಾಡಲು ಹಾಗೂ ಈ ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಅಧಿಕವಾಗಿದ್ದು, ಜಿಯೋ ಸಂಸ್ಥೆಯವರು ಕೇಬಲ್ ಅಳವಡಿಸಲು, ವಿದ್ಯುತ್ ಕಂಬಗಳನ್ನು ಅಳವಡಿಸಲು ಅರಣ್ಯ ಇಲಾಖೆಯ ಆಕ್ಷೇಪಗಳಿದ್ದು, ಇದನ್ನು ಬಗೆಹರಿಸುವಂತೆ ಸಾರ್ವಜನಿಕರು ಕೋರಿದರು.

ಈ ಕುರಿತು ಉತ್ತರಿಸಿದ ಅರಣ್ಯ ಇಲಾಖೆ ಅಧಿಕಾರಿ ಈ ಎಲ್ಲಾ ಕಾಮಗಾರಿಗಳಿಗೆ ಇಲಾಖೆಯಿಂದ ಅಡ್ಡಿಪಡಿಸುತ್ತಿಲ್ಲ, ಆದರೆ ಕಾಮಗಾರಿ ಮಾಡುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ, ಅನುಮತಿ ಪತ್ರ ಪಡೆಯುವಂತೆ ತಿಳಿಸಿದರು. ಈ ಭಾಗದ ನೆಟ್‌ವರ್ಕ್ ಸಮಸ್ಯೆ ಕುರಿತಂತೆ ಬಿಎಸ್‌ಎನ್‌ಎಲ್ ಹಾಗೂ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಪಡಿತರ ಸಮಸ್ಯೆ: ಪಡಿತರ ಅಂಗಡಿಯಲ್ಲಿ ಸ್ಥಳೀಯ ಕುಚ್ಚಿಗೆ ಅಕ್ಕಿ ನೀಡುವಂತೆ ಸಾರ್ವಜನಿಕರ ಮನವಿಗೆ ಉತ್ತರಿಸಿದ ಜಿಲ್ಲಾಧಿಕಾರಿ, ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತರೆಯಲಾಗುವ ಖರೀದಿ ಕೇಂದ್ರಗಳಿಗೆ ಜಿಲ್ಲೆಯ ರೈತರು ಭತ್ತವನ್ನು ನೀಡಿದರೆ ಸ್ಥಳೀಯ ಕುಚ್ಚಿಗೆ ಅಕ್ಕಿ ನೀಡಲು ಸಾಧ್ಯವಾಗಲಿದೆ. ಆದರೆ ಜಿಲ್ಲೆಯ ರೈತರು ಇದುವರೆಗೆ 1 ಕ್ವಿಂಟಾಲ್ ಸಹ ಭತ್ತವನ್ನು ಖರೀದಿ ಕೇಂದ್ರಗಳಿಗೆ ನೀಡಿಲ್ಲ. ಇದರಿಂದ ಸ್ಥಳೀಯ ಕುಚ್ಚಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಪಂಚಾಯತ್‌ರಾಜ್ ಇಲಾಖೆಗೆ ಸಂಬಂಧಿಸಿದ 29, ಕಂದಾಯ ಇಲಾಖೆಯ 27, ಮೆಸ್ಕಾಂನ 18, ಬಿಎಸ್‌ಎನ್‌ಎಲ್‌ನ 4 ಸೇರಿದಂತೆ ಒಟ್ಟು 119 ಅರ್ಜಿಗಳನ್ನು ಪರಿಶೀಲಿಸಲಾಯಿತು. ನಂತರ ಸಭೆಯಲ್ಲಿ ಹಲವು ಮಂದಿ ಸಾರ್ವಜನಿಕರು ಅಹವಾಲುಗಳನ್ನು ಜಿಲ್ಲಾಧಿ ಕಾರಿಗೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾಧಿಕಾರಿ ಸವಲತ್ತುಗಳನ್ನು ವಿತರಿಸಿದರು. ಸರಕಾರದಿಂದ ಬಗೆಹರಿಸ ಬಹುದಾದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಸಾರ್ವಜನಿಕರಿಗೆ ಅಗತ್ಯ ಸೌಲ್ಯಗಳನ್ನು ಒದಗಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರು, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಡಿವೈಎಸ್ಪಿ ಜೈ ಶಂಕರ್, ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ ಹರೀಶ್, ತಾ.ಪಂಚಾಯತ್ ಅಧ್ಯಕ್ಷ ರಮೇಶ್, ಮುದ್ರಾಡಿ ಗ್ರಾ.ಪಂ. ಅದ್ಯಕ್ಷ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು. ಹೆಬ್ರಿ ತಹಸೀಲ್ದಾರ್ ಪುರಂದರ ಸ್ವಾಗತಿಸಿ ವಂದಿಸಿದರು.

ಶಾಲೆಯಲ್ಲಿ ರಾತ್ರಿ ವಾಸ್ತವ್ಯ: ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮೊದಲು ದೇವರ ದರ್ಶನ ಪಡೆದು, ಸಾರ್ವಜನಿಕವಾಗಿ ಅಯೋಜಿಸಿದ್ದ ಉಪಹಾರ ಸ್ವೀಕರಿಸಿದರು. ಅಪರಾಹ್ನವೂ ಸಾರ್ವಜನಿಕ ಭೋಜನದಲ್ಲಿ ಜಿಲ್ಲಾಧಿಕಾರಿ ಭೋಜನ ಸೇವಿಸಿದರು. ಕೊಂಕಣಾರಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ ನಂತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮೇಶ್ವರ ಪೇಟೆ ನಾಡ್ಪಾಲು ಇಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ರಾತ್ರಿ ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಬಳಿಕ ಶಾಲೆಯಲ್ಲಿಯೇ ವಾಸ್ತವ್ಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News