×
Ad

ರಾಜ್ಯದಲ್ಲಿ ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ: ಮಾರ್ಗಸೂಚಿ ಪಾಲಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಂಪುಟ ತೀರ್ಮಾನ

Update: 2021-03-22 20:01 IST

ಬೆಂಗಳೂರು, ಮಾ. 22: ಕೋವಿಡ್-19 ಸೋಂಕಿನ ಎರಡನೇ ಅಲೆ ನಿಯಂತ್ರಿಸಲು ಮಾರ್ಗಸೂಚಿ ಪಾಲಿಸಲು ಜನ ಜಾಗೃತಿ ಹಾಗೂ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಕೊರೋನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣ ಸಂಬಂಧ ಚರ್ಚೆ ನಡೆಸಲಾಯಿತು. ಸಭೆ ಸಮಾರಂಭ, ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ನಡೆಸಬೇಕು. ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಮಿತಿ ಹೇರಬೇಕು. ವ್ಯಕ್ತಿಗತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಲಾಕ್‍ಡೌನ್ ಮತ್ತು ನೈಟ್‍ ಕರ್ಫ್ಯೂ ಹೇರುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಬದಲಿಗೆ ಕೋವಿಡ್-19 ಸೋಂಕಿನ ನಿಯಂತ್ರಣಕ್ಕೆ ಮಾರ್ಗಸೂಚಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸಭೆ-ಸಮಾರಂಭಗಳಲ್ಲಿ ಜನ ಸೇರುವಿಕೆ ನಿರ್ಬಂಧಿಸಲು ಬಿಗಿ ಕ್ರಮ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇತರೆ ತೀರ್ಮಾನಗಳು: 2020-21ನೆ ಸಾಲಿಗೆ ರಸಗೊಬ್ಬರ ಕಾಪು ದಾಸ್ತಾನು ಮಾಡಲು ರಾಜ್ಯ ಸಹಕಾರ ಮಹಾ ಮಂಡಳಿ ಹಾಗೂ ರಾಜ್ಯ ಬೀಜ ನಿಗಮ ನಿಯಮಿತವು 150 ಕೋಟಿ ರೂ.ಬ್ಯಾಂಕ್ ಸಾಲ ಪಡೆಯಲು ಸರಕಾರದ ಖಾತ್ರಿ, ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನ ಕ್ರಿಯಾ ಯೋಜನೆ-3ರಲ್ಲಿ ಅನುಮೋದಿತವಾಗಿರುವ ಹೊಸಪೇಟೆ ತಾಲೂಕಿನ ಸರಕಾರಿ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು 104 ಕೋಟಿ ರೂ.ಅಂದಾಜು ಮೊತ್ತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸುತ್ತಿರುವ ಹೊಸ 15 ಓಟಿ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ 39.98 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಒಪ್ಪಿಗೆ. ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ, ಅನೈತಿಕ ವ್ಯವಹಾರಗಳ ಅಪರಾಧ, ಕೊಳಚೆ ಪ್ರದೇಶಗಳನ್ನು ಆಕ್ರಮಿಸಿಕೊಳ್ಳುವ ಮತ್ತು ವಿಡಿಯೋ ಅಥವಾ ಆಡಿಯೋ ಪೈರೇಟ್ಸ್ ಚಟುವಟಿಕೆಗಳ(ತಿದ್ದುಪಡಿ) ವಿಧೇಯಕ-2021ಕ್ಕೆ ಅನುಮೋದನೆ ನೀಡಲಾಗಿದೆ.

ಕೈದಿಗಳ ಗುರುತಿನ(ಕರ್ನಾಟಕ ತಿದ್ದುಪಡಿ) ವಿಧೇಯಕ-2021, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ-2021ಕ್ಕೆ ಅನುಮೋದನೆ ನೀಡಲಾಗಿದೆ. ಸರಕಾರಿ ಮಾಲಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ನಿಗದಿಪಡಿಸಿರುವ ದರ ಪರಿಷ್ಕರಣೆಗೆ ಒಪ್ಪಿಗೆ. ಮೈಸೂರು-ಹುಣಸೂರು ರಸ್ತೆ ಹೊರ ವರ್ತುಲ ರಸ್ತೆ ಜಂಕ್ಷನ್‍ನಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ ಕಾಮಗಾರಿಯ 22.81 ಕೋಟಿ ರೂ.ಪರಿಷ್ಕೃತ ಅಂದಾಜು ಪಟ್ಟಿಗೆ ಸಂಪುಟ ಸಮ್ಮತಿ ನೀಡಿದೆ.

ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಆದೇಶದನ್ವಯ ರಾಜ್ಯದಲ್ಲಿ ಕಲುಷಿತಗೊಳ್ಳುತ್ತಿರುವ 17 ನದಿ ಪಾತ್ರದಲ್ಲಿ ಬರುವ ನಗರ ಪಟ್ಟಣಗಳ ಒಳಚರಂಡಿ ಕಾಮಕಾರಿಯ 400 ಕೋಟಿ ರೂ.ಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿಯ 2,794 ಕೋಟಿ ರೂ.ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

‘ಮೀಸಲಾತಿ' ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ: ಲಿಂಗಾಯತ ಪಂಚಮಸಾಲಿ 2ಎ, ಪರಿಶಿಷ್ಟ ಪಂಗಡ (ಎಸ್ಟಿ)ದ ಮೀಸಲಾತಿ ಪ್ರಮಾಣ ಹೆಚ್ಚಳ, ಕುರುಬ ಸಮುದಾಯ ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರ್ಪಡೆ ಸೇರಿದಂತೆ ಮೀಸಲಾತಿ ಬೇಡಿಕೆಗಳ ಸಂಬಂಧ ಮೀಸಲಾತಿ ಪ್ರಮಾಣದ ಮಿತಿಯನ್ನು ಹೆಚ್ಚಿಸುವ ಸಂಬಂಧ ಸುಪ್ರೀಂ ಕೋರ್ಟ್‍ಗೆ ‘ಪ್ರಮಾಣ ಪತ್ರ' ಸಲ್ಲಿಸಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News