ಮಾ.24 : ಪೌಷ್ಠಿಕತೆ ಕುರಿತ ಜಾಗೃತಿ ಕಾರ್ಯಕ್ರಮ
ಮಂಗಳೂರು, ಮಾ.22: ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆಯುಷ್ ಇಲಾಖೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಗಳ ಸಹಯೋಗದೊಂದಿಗೆ ‘ಪೋಷಣ್ ಪಕ್ವಾಡ-2021’ ಯೋಗಾಸನ ಶಿಬಿರ ಹಾಗೂ ಪೌಷ್ಠಿಕತೆ ಹೆಚ್ಚಿಸುವ ಆಯುಷ್ ಪುಡಿ, ಔಷಧ, ಬೀಜಗಳ ಜಾಗೃತಿ ಕಾರ್ಯಕ್ರಮವು ಮಾ.24ರಂದು ಬೆಳಗ್ಗೆ 10:30ಕ್ಕೆ ನಗರದ ತುಳು ಭವನ ಕಟ್ಟಡದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್. ಅಂಗಾರ ಘನ ಉಪಸ್ಥಿತಿತರಿರುವರು. ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಮತ್ತಿತರರು ಭಾಗವಹಿಸಲಿದ್ದಾರೆ. ಪತಂಜಲಿ ಪೀಠ ಹರಿದ್ವಾರದ ಯೋಗ ಶಿಕ್ಷಕಿ ಸರಸ್ವತಿ ಪಿ., ಜಿಲ್ಲಾ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ. ಶೋಭಾ ರಾಣಿ ಮತ್ತು ಡಾ.ಸಹನಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.