ಮದುವೆ ಸಮಾರಂಭಗಳಲ್ಲಿ ಮಾರ್ಗಸೂಚಿ ಪಾಲಿಸದಿದ್ದರೆ ದಂಡ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಮಾ. 22: ಕೋವಿಡ್-19 ಸೋಂಕಿನ ಎರಡನೇ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಆದರೆ, ಸೆಮಿ ಲಾಕ್ಡೌನ್ ಅಥವಾ ಲಾಕ್ಡೌನ್ ಇಂದಿನ ಪರಿಸ್ಥಿತಿಗೆ ಯಾವುದೇ ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಸೋಮವಾರ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ, ಕೇರಳ ಗಡಿಭಾಗಗಳಿಂದ ಬರುವ ಜನರ ಮೇಲೆ ತೀವ್ರ ನಿಗಾ ಇರಿಸುವುದು. ಆರ್ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆ ರಾಜ್ಯಕ್ಕೆ ಬಿಡದಿರುವುದು ಅಥವಾ ಅಲ್ಲೇ ಪರೀಕ್ಷೆ ಮಾಡುವುದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದು, ಜನರಲ್ಲಿ ಹೆಚ್ಚು ಅರಿವು ಮೂಡಿಸುವುದು ಎನ್ನುವ ವಿಷಯಗಳ ಬಗ್ಗೆ ಆರೋಗ್ಯ ಇಲಾಖೆಯ ಸಭೆಯಲ್ಲಿ ಚರ್ಚೆಯಾಗಿದೆ. ಜನರು ಆದಷ್ಟು ಬೇಗ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಲಸಿಕೆ ಪಡೆಯುವಂತೆ ಮಾಡಬೇಕಿದೆ ಎಂದು ಹೇಳಿದರು.
ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲು ಗೃಹ ಇಲಾಖೆಯ ಸಹಯೋಗ ಬೇಕಿದೆ. ಇದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈಗಾಗಲೇ ಸಭೆ ನಡೆಸಿದ್ದಾರೆ. ಸೆಮಿ ಲಾಕ್ಡೌನ್, ಲಾಕ್ಡೌನ್ ಎಲ್ಲ ಇಂದಿನ ಪರಿಸ್ಥಿತಿಗೆ ಅನ್ವಯವಾಗಲ್ಲ. ಹಿಂದಿನ ತಪ್ಪುಗಳನ್ನು ನೋಡಿಕೊಂಡು ಈಗ ಸರಿಪಡಿಸಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು.
ಮಾರ್ಗಸೂಚಿ ಪಾಲಿಸದಿದ್ದರೆ ದಂಡ: ಮದುವೆ ಸಮಾರಂಭಗಳಲ್ಲಿ ನಿಗದಿಪಡಿಸಿದ ಮಿತಿ, ಸುರಕ್ಷಿತ ಅಂತರ, ಮಾಸ್ಕ್ ಧರಿಸುವ ಕ್ರಮ ಅನುಸರಿಸಬೇಕು. ಇಲ್ಲದಿದ್ದರೆ ಮಾಲಕರ ಮೇಲೆ, ಆಯೋಜಕರ ಮೇಲೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಭೌತಿಕ ಅಂತರ ಕಾಯ್ದುಕೊಳ್ಳಬೇಕೆಂದು ಸೂಚಿಸಲಾಗಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿ, ಸೋಂಕಿತರ ಪ್ರಮಾಣ ಹೆಚ್ಚಿದ್ದರೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ, ಕ್ರಮ ವಹಿಸಲಾಗುವುದು ಎಂದ ಅವರು, ಬೆಂಗಳೂರಿನಲ್ಲಿ ಈ ವಾರದಿಂದಲೇ ಮೂರು ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು. ಇವೆಲ್ಲ ಕ್ರಮಗಳಿಂದ ಕೋವಿಡ್ ನಿಯಂತ್ರಣಕ್ಕೆ ಬರಲಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.