ಅನುದಾನರಹಿತ ಶಿಕ್ಷಕರಿಗೆ ಟಿಬಿಎಫ್ ಅಜೀವ ಸದಸ್ಯತ್ವ: ಸಚಿವ ಸುರೇಶ್ ಕುಮಾರ್

Update: 2021-03-23 13:20 GMT

ಬೆಂಗಳೂರು, ಮಾ.23: ಖಾಸಗಿ ಅನುದಾನರಹಿತ ಶಾಲಾ ಕಾಲೇಜುಗಳ ಶಿಕ್ಷಕರನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ(ಟಿಬಿಎಫ್)ಯ ಅಜೀವ ಸದಸ್ಯರನ್ನಾಗಿ ನೇಮಕ  ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಮಂಗಳವಾರ ನಗರದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯ ಖಾಸಗಿ ಶಿಕ್ಷಣ  ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘ ಹಾಗೂ ವಿವಿಧ  ಶಿಕ್ಷಕ ಸಂಘಟನೆಗಳ ಹೋರಾಟ ಸಮನ್ವಯ ಸಮಿತಿಯ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೋನದಂತಹ ಸಂಕಷ್ಟ ಕಾಲದಲ್ಲಿ ಖಾಸಗಿ ಶಿಕ್ಷಕರು ತೀವ್ರ ಸಂಕಷ್ಟ ಅನುಭವಿಸಿದ್ದರಿಂದಾಗಿ ಎಲ್ಲ ಶಿಕ್ಷಕರಂತೆ ಕಷ್ಟಕಾಲದ ತತ್‍ಕ್ಷಣದ ನೆರವಿಗೆ ಶಿಕ್ಷಣ ನಿಧಿಯ ಸದಸ್ಯತ್ವ ನೀಡಿ ಆ ಮೂಲಕ ನಿಧಿಯಿಂದ ಸರಕಾರಿ ಹಾಗೂ ಅನುದಾನಿತ ಶಿಕ್ಷಕರಿಗೆ ದೊರೆಯುವ ಸೌಲಭ್ಯ ನೀಡಲು ನಿರ್ಧಾರ ಮಾಡಲಾಗಿದೆ ಎಂದರು. 

ಶಿಕ್ಷಕರೆಂದರೆ ಎಲ್ಲರೂ ಶಿಕ್ಷಕರೇ, ಎಲ್ಲರೂ ನಮ್ಮ ಮಕ್ಕಳ ಹಿತಕ್ಕೆ ದುಡಿಯುತ್ತಾರೆ. ಹೀಗಿರುವಾಗ ಶಿಕ್ಷಕರ ಕಲ್ಯಾಣ ನಿಧಿಗೆ ಖಾಸಗಿ ಅನುದಾನ ರಹಿತ ಸಂಸ್ಥೆಗಳ ಶಿಕ್ಷಕರನ್ನು ಯಾವ ರೀತಿಯಲ್ಲಿ ಹಾಗೆಯೇ ಯಾವ ಮಾನದಂಡದ ಮೂಲಕ ಸದಸ್ಯತ್ವ ನೀಡುವ ಕುರಿತು ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಇದು ಅಧಿಕೃತಗೊಳ್ಳಲಿದೆ. ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಸದಸ್ಯತ್ವ ನೀಡುವ ಕುರಿತು ರೂಪಿಸಿರುವ ನಿಯಮಗಳನ್ನು ವಿಸ್ತೃತವಾಗಿ ಅವಲೋಕಿಸಿ ಅಂತಿಮಗೊಳಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು. 

1995-2000ವರೆಗಿನ ಶಾಲೆಗಳಿಗೆ ಅನುದಾನ: ಖಾಸಗಿ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೊಳಪಡಿಸುವ ಕುರಿತು ಮುಖ್ಯಮಂತ್ರಿ ಜೊತೆ ಈಗಾಗಲೇ ಚರ್ಚಿಸಿದ್ದೇನೆ. ಬಜೆಟ್ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಸಿಎಂ ಅವರಿಗೆ ಪ್ರಮುಖವಾಗಿ ಇದನ್ನು ಪರಿಗಣಿಸಬೇಕೆಂದು ಕೋರಿದ್ದೆ. ಕೋವಿಡ್ ಸಂಕಷ್ಟದ ಸಮಯವಾದ್ದರಿಂದ ಬಜೆಟ್‍ನಲ್ಲಿ ಅದಕ್ಕೆ ಅನುದಾನ ಹಂಚಿಕೆಯಾಗಿಲ್ಲ ಎಂದು ಅವರು ಹೇಳಿದರು.

ಆ ನಂತರವೂ ನಾನು ಸಿಎಂ ಅವರೊಂದಿಗೆ ಚರ್ಚಿಸಿದ್ದು ಪೂರಕ ಬಜೆಟ್‍ನಲ್ಲಿ ಅನುದಾನ ಹಂಚಿಕೆ ಮಾಡಿ ಬಜೆಟ್ ಕುರಿತ ಚರ್ಚೆಯಲ್ಲಿ ಕನಿಷ್ಠ ಐದು ವರ್ಷದ ಅಂದರೆ  1995-2000ವರೆಗಿನ ಶಾಲೆಗಳಿಗೆ ಅನುದಾನ ನೀಡುವ ಘೋಷಣೆ ಮಾಡಬೇಕೆಂದು ಕೋರಿದ್ದೇನೆ.  ಈ ಕುರಿತು ಮತ್ತೊಮ್ಮೆ ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಈ ಕುರಿತು ಸ್ಪಷ್ಟವಾದ ಭರವಸೆ ಪಡೆಯುವೆ ಎಂದು ಸುರೇಶ್ ಕುಮಾರ್ ತಿಳಿಸಿದರು. 

1995 ರಿಂದ 2000 ವರೆಗಿನ 5 ವರ್ಷಗಳ ಅವಧಿಯಲ್ಲಿ 685 ಅನುದಾನ ರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳು ಮತ್ತು 211 ಅನುದಾನ ರಹಿತ ಕನ್ನಡ ಮಾಧ್ಯಮ ಪ್ರೌಢಶಾಲೆಗಳು ಇದ್ದು, ಅವುಗಳನ್ನು ಅನುದಾನಕ್ಕೊಳಡಪಡಿಸುವ ನಿಟ್ಟಿನಲ್ಲಿ 138.39 ಕೋಟಿ ರೂ.ಗಳ ಹಣದ ಅಗತ್ಯವಿರುವುದನ್ನು ಇಲಾಖೆ ಅಂದಾಜಿಸಿದೆ ಎಂದು ಅವರು ಹೇಳಿದರು.

ಜ್ಯೋತಿ ಸಂಜೀವಿನಿ ವಿಸ್ತರಣೆ: ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲಾ ಸಿಬ್ಬಂದಿಗೂ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ಜ್ಯೋತಿ ಸಂಜೀವಿನಿ ವ್ಯಾಪ್ತಿಗೆ ಒಳಪಡಿಸುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು. 

ಕೋವಿಡ್ ಸಂಕಷ್ಟದಲ್ಲಿ ಶಾಲೆಗಳು ತಡವಾಗಿ ಆರಂಭವಾಗಿರುವುದರಿಂದ ಮಕ್ಕಳು ಪರೀಕ್ಷೆಗೆ ಸಿದ್ಧವಾಗುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮತ್ತು ಮೌಲ್ಯಮಾಪನದಂತಹ ಸಮಯದಲ್ಲಿ ಯಾವುದೇ ಮುಷ್ಕರಗಳಿಗೆ ಎಡೆ ಮಾಡಬಾರದು ಎಂದು ಸಚಿವರು ಮಾಡಿದ ಮನವಿಗೆ ಸ್ಪಂದಿಸಿದ ಶಿಕ್ಷಕ ಸಂಘಟನೆಗಳ ಪ್ರತಿನಿಧಿಗಳು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಯಾವುದೇ ಪ್ರತಿಭಟನೆ ಮಾಡುವುದಿಲ್ಲ ಎಂಬ ಭರವಸೆ ನೀಡಿದರು. 

ಸಭೆಯ ಅಧ್ಯಕ್ಷತೆಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಇಲಾಖೆಯ ಅಧಿಕಾರಿಗಳಾದ ಕುಮಾರ ನಾಯಕ್, ವಿ.ಅನ್ಬುಕುಮಾರ್, ಸ್ನೇಹಲ್, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಿ.ಆರ್.ಭಟ್, ರೂಪ್ಸಾ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News