ಕಂಗನಾ ವಿರುದ್ಧ ಎಫ್‍ಐಆರ್ ದಾಖಲಿಸಲು ನೀಡಿದ್ದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್

Update: 2021-03-25 14:16 GMT

ಬೆಂಗಳೂರು, ಮಾ.25: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡಸುತ್ತಿದ್ದ ‘ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ’ ಟ್ವೀಟ್ ಮಾಡಿದ್ದ ಆರೋಪ ಸಂಬಂಧ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ತುಮಕೂರಿನ ಜೆಎಂಎಫ್‍ಸಿ ಕೋರ್ಟ್ ಪೊಲೀಸರಿಗೆ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇದೇ ವೇಳೆ ದೂರನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶಿಸಿದೆ. 

ತನ್ನ ವಿರುದ್ಧ ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ದಾಖಲಿಸಿರುವ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ನಟಿ ಕಂಗನಾ ರಣಾವತ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಖಾಸಗಿ ದೂರಿನ ವಿಚಾರಣೆ ನಡೆಸಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ ಯಾಂತ್ರಿಕವಾಗಿ ಎಫ್‍ಐಆರ್ ದಾಖಲಿಸಲು ಆದೇಶಿಸಿದೆ. ದೂರಿನಲ್ಲಿ ಏನು ಇದೆ, ಅದು ಅಪರಾಧವಾಗುತ್ತದೆಯೇ ಎಂಬುದನ್ನು ಪರೀಕ್ಷಿಸಿಲ್ಲ. ಹೀಗಾಗಿ ನ್ಯಾಯಾಲಯ ಖಾಸಗಿ ದೂರಿನಲ್ಲಿರುವ ಅಂಶಗಳು ಅಪರಾಧ ಎನ್ನಿಸಿಕೊಳ್ಳುತ್ತವೆಯೇ ಎಂಬುದನ್ನು ಪರಿಶೀಲಿಸಿ ಹೊಸದಾಗಿ ನಿರ್ಣಯಿಸಬೇಕು ಎಂದು ನಿರ್ದೇಶಿಸಿತು. ಜತೆಗೆ ಎಫ್‍ಐಆರ್ ದಾಖಲಿಸಲು ಮ್ಯಾಜಿಸ್ಟ್ರೇಟ್ ಹೊರಡಿಸಿದ್ದ ಆದೇಶ ರದ್ದುಪಡಿಸಿತು.

ಇದಕ್ಕೂ ಮುನ್ನ ನಟಿ ಕಂಗನಾ ಪರ ವಾದಿಸಿದ ವಕೀಲರು, ಅರ್ಜಿದಾರರ ಟ್ವೀಟ್‍ನಲ್ಲಿ ಯಾವುದೇ ದುರುದ್ದೇಶವಿರಲಿಲ್ಲ. ದ್ವೇಷ ಬಿತ್ತುವ ಉದ್ದೇಶವೂ ಇರಲಿಲ್ಲ. ತಮ್ಮ ಅಭಿಮಾನಿಗಳನ್ನು ಎಚ್ಚರಿಸುವ ಉದ್ದೇಶದಿಂದ, ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂಬ ನಿಟ್ಟಿನಲ್ಲಿ ಈ ರೀತಿಯಾಗಿ ಟ್ವೀಟ್ ಮಾಡಿದ್ದರು. ಆದರೆ, ಇದನ್ನೇ ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರೈತ ಕಾಯ್ದೆಗಳನ್ನು ವಿರೋಧಿಸುವವರು ಭಯೋತ್ಪಾದಕರು ಎಂದು ಟ್ವೀಟ್ ಮಾಡಲು ನಿಮಗೆ ಯಾರು ಅಧಿಕಾರ ಕೊಟ್ಟವರು. ಇದೇ ಮಾತನ್ನು ನಿಮ್ಮ ವಿರುದ್ಧ ಆಡಿದರೆ ಏನು ಮಾಡುತ್ತೀರಿ. ಸೆಲೆಬ್ರಿಟಿಗಳು ಹೇಳಿಕೆಗಳನ್ನು ನೀಡುವಾಗ ತಮ್ಮ ನಾಲಗೆ ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎಂದು ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿತು.

ಏನಿದು ಪ್ರಕರಣ: ಹೊಸದಿಲ್ಲಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ನಟಿ ಕಂಗನಾ ರಣಾವತ್ 2020 ಸೆ.21ರಂದು ಟ್ವೀಟ್ ಮಾಡಿ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ ಎಂದು ಆರೋಪಿಸಿದ್ದ ತುಮಕೂರಿನ ವಕೀಲ ಎಲ್ ರಮೇಶ್ ನಾಯಕ್ ಅವರು, ಈ ಸಂಬಂಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕೆಂದು ಕೋರಿ 2020 ಸೆ.25 ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಸಿಆರ್‍ಪಿಸಿ 156(6) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಮುಂದಿನ ಕ್ರಮ ಜರುಗಿಸಲು ಕ್ಯಾತಸಂದ್ರ ಠಾಣೆ ಪೊಲೀಸರಿಗೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪಿಸಿಆರ್ ಮೇರೆಗೆ ಸ್ಥಳೀಯ ನ್ಯಾಯಾಲಯ ಹೊರಡಿಸಿರುವ ಆದೇಶ ಹಾಗೂ ಎಫ್‍ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ನಟಿ ಕಂಗನಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News