ಅನಿಲ್ ದೇಶ್‌ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಪರಮ್ ವೀರ್ ಸಿಂಗ್

Update: 2021-03-25 17:42 GMT

 ಮುಂಬೈ, ಮಾ. 25: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೋರಿ ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್ ಗುರುವಾರ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಕ್ರಿಮಿನಲ್ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಿದ್ದಾರೆ.

‘ಆ್ಯಂಟಿಲಾ’ ಬಾಂಬ್ ಬೆದರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ವರ್ಗಾವಣೆಗೊಂಡಿರುವ ಪರಮ್ ವೀರ್ ಸಿಂಗ್ ತನ್ನನ್ನು ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ವರ್ಗಾಯಿಸಿ ನೀಡಿದ ಸರಕಾರದ ಆದೇಶವನ್ನು ಕೂಡ ಪ್ರಶ್ನಿಸಿದ್ದಾರೆ.

ಇದೇ ಮನವಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿತ್ತು ಹಾಗೂ ಬಾಂಬೆ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿತ್ತು. ಇದರಿಂದ ಪರಮ್ ವೀರ್ ಸಿಂಗ್ ಅವರಿಗೆ ತೀವ್ರ ಹಿನ್ನಡೆ ಉಂಟಾಗಿತ್ತು.

ಪರಮ್ ವೀರ್ ಸಿಂಗ್ ಹಾಗೂ ದೇಶ್‌ಮುಖ್ ಅವರ ನಡುವಿನ ಆರೋಪ ಹಾಗೂ ಪ್ರತ್ಯಾರೋಪ ಗಂಭೀರವಾದುದು. ಆದರೆ, ಈ ಪ್ರಕರಣದ ವಿಚಾರಣೆ ಉಚ್ಚ ನ್ಯಾಯಾಲಯದಲ್ಲಿ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಸಂಸದ ಮೋಹನ್ ದೇಲ್ಕರ್ ಸಾವಿನ ಪ್ರಕರಣದಲ್ಲಿ ಬಿಜೆಪಿಯ ನಿರ್ದಿಷ್ಟ ನಾಯಕರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಅವರನ್ನು ಅದೇ ಪ್ರಕರಣದಲ್ಲಿ ಹೇಗಾದರೂ ಸಿಲುಕಿಸುವಂತೆ ಮಹಾರಾಷ್ಟ್ರ ಗೃಹ ಸಚಿವ ಒತ್ತಡ ಹೇರಿದ್ದರು ಎಂದು ಕೂಡ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ.

ಗಂಭೀರ ದುಷ್ಕೃತ್ಯದಲ್ಲಿ ದೇಶ್‌ಮುಖ್ ಭಾಗಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಸಿಂಗ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರವನ್ನೂ ಬರೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News