ಅಪಸ್ಮಾರ ಮತ್ತು ಅಪನಂಬಿಕೆಗಳು

Update: 2021-03-26 05:06 GMT

ಪ್ರತಿ ವರ್ಷ ವಿಶ್ವದಾದ್ಯಂತ ಮಾರ್ಚ್ 26ರಂದು ಅಂತರ್‌ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ಅಥವಾ ಪರ್ಪಲ್ ಡೇ ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತ್ತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದು, ಇದೊಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಒಂದು ಅಂಕಿ-ಅಂಶಗಳ ಪ್ರಕಾರ ವಿಶ್ವದ ಜನಸಂಖ್ಯೆಯ ಪ್ರತಿ ನೂರರಲ್ಲಿ ಒಬ್ಬರು ಅಪಸ್ಮಾರ ಬಾಧೆಯಿಂದ ಬಳಲುತ್ತಿದ್ದಾರೆ ಮತ್ತು ವಿಶ್ವಾದ್ಯಂತ 65 ಮಿಲಿಯನ್ ಮಂದಿ ಬಳಲುತ್ತಿದ್ದು, ಇವರಲ್ಲಿ ಶೇ. 50 ಮಂದಿಗೆ ಯಾವ ಕಾರಣದಿಂದ ಅಪಸ್ಮಾರ ಬಂದಿದೆ ಎನ್ನುವುದು ಗೊತ್ತಿಲ್ಲದಿರುವುದೇ ಸೋಜಿಗದ ಸಂಗತಿ. ಭಾರತದಲ್ಲಿ ಸುಮಾರು 12 ಮಿಲಿಯನ್ ಮಂದಿ ಈ ಅಪಸ್ಮಾರ ರೋಗದಿಂದ ಬಳಲುತ್ತಿದ್ದಾರೆ.

ಏನಿದು ಅಪಸ್ಮಾರ ಕಾಯಿಲೆ?

ಅಪಸ್ಮಾರ ಎಂದರೆ ಪದೇ ಪದೇ ಮೆದುಳಿನ ನರಕೋಶಗಳು ಅತ್ಯಧಿಕ ಪ್ರಮಾಣದಲ್ಲಿ ಹೊರಹಾಕುವ ವಿದ್ಯುತ್ ಪ್ರಚೋದನೆಯ ಫಲವಾಗಿ ಮೆದುಳಿನ ಕಾರ್ಯದಲ್ಲಿ ಉಂಟಾಗುವ ತಾತ್ಕಾಲಿಕ ನಿಲುಗಡೆ ಅಥವಾ ವ್ಯತ್ಯಯದ ಪರಿಣಾಮವಾಗಿ ಆ ವ್ಯಕ್ತಿ ಅನುಭವಿಸುವ ಸ್ಮತಿ ಸೆಳತ. ಇದನ್ನೇ ಮೂರ್ಛೆ ರೋಗ, ಪಿಟ್ಸ್, ಮಲರೋಗ ಮುಂತಾದ ಹೆಸರುಗಳಿಂದ ಕರೆಯುತ್ತಾರೆ. ಆಂಗ್ಲ ಭಾಷೆಯಲ್ಲಿ ಎಪಿಲೆಪ್ಸಿ (EPILEPSY) ಎಂದು ಕರೆಯುತ್ತಾರೆ. ಜನಸಾಮಾನ್ಯರು ಆಡುಭಾಷೆಯಲ್ಲಿ ‘ಪಿಟ್ಸ್’ ಎನ್ನುತ್ತಾರೆ.

ನಮ್ಮ ಮೆದುಳು ಎನ್ನುವುದು ಒಂದು ಸಂಕೀರ್ಣವಾದ ನರಮಂಡಲ. ಅದರಲ್ಲಿ ನರಕೋಶಗಳ ಮಧ್ಯೆ ವಿದ್ಯುತ್ ಪ್ರಸರಣ ನಿಯಮಿತವಾಗಿ ನಡೆಯುತ್ತಿರುತ್ತದೆ. ಇದು ಅತೀ ಚಿಕ್ಕ ಪ್ರದೇಶಕ್ಕೆ ಸೀಮಿತವಾಗಿರುತ್ತದೆ. ಆದರೆ ದೊಡ್ಡ ಸೆಳವು ಬಂದಾಗ ನರಕೋಶಗಳ (Neurons) ದೊಡ್ಡ ಗುಂಪು ಪದೇ ಪದೇ ಸೆಳತಕ್ಕೊಳಗಾಗಿ ಅವೇಶಗೊಂಡು, ಚುರುಕುಗೊಂಡು ತುಂಬಾ ವ್ಯಾಪಕ ಪ್ರಮಾಣದಲ್ಲಿ ವಿದ್ಯುತ್ ಚೇತನವನ್ನು ಹೊರಹಾಕುತ್ತದೆ. ಅದನ್ನು ತಡೆಯುವ ಶಕ್ತಿ ನರಕೋಶಗಳ ಮಧ್ಯೆ ಕುಗ್ಗಿ ಹೋಗಿರುತ್ತದೆ. ಪ್ರತಿಯೊಬ್ಬ ಮನುಷ್ಯನಲ್ಲಿ ಸೆಳವಿನ ಕಾರ್ಯವ್ಯಾಪ್ತಿಗೊಂದು ಮಿತಿಯಿರುತ್ತದೆ. ಅಪಸ್ಮಾರ ರೋಗಿಗಳಲ್ಲಿ ಈ ಮಿತಿ ತುಂಬ ತಳಹಂತದಲ್ಲಿದ್ದು, ಅವರು ಬೇರೆ ಬೇರೆ ಕಾರಣದಿಂದಾಗಿ ದೊರೆಯುವ ಅನೇಕ ಬಗೆಯ ಪ್ರಚೋದನೆಗಳಿಗೆ ಸೆಳವನ್ನು ತೋರ್ಪಡಿಸುತ್ತಾರೆ. ಅಸಹಜವಾಗಿರುವ ಅವರ ನರಮಂಡಲದ ನರಕೋಶಗಳು ಬಹಳ ಬೇಗನೆ ಪ್ರಚೋದನೆಗೊಳಗಾಗುತ್ತವೆ. ಅಪಸ್ಮಾರದ ಸೆಳವಿನ ಕಾರ್ಯಬಾಹುಳ್ಯ ಮೆದುಳಿನ ಒಂದು ಭಾಗಕ್ಕೆ ಮಾತ್ರ ಸೀಮಿತವಾಗಿರಬಹುದು ಅಥವಾ ಅದು ವ್ಯಾಪಕವಾಗಿ ಹರಡಿ ಅತಿಯಾದ ಮಾರಕವಾದ, ವಿಪರೀತ ಸೆಳವನ್ನು ತೋರ್ಪಡಿಸಬಹುದು. ಮೆದುಳಿನ ನರಕೋಶಗಳ ಈ ಚಟುವಟಿಕೆಗಳನ್ನು ಮೆದುಳಿನ ವಿದ್ಯುತ್‌ಮಾಪನ (EEG )ದಲ್ಲಿ ನಿಖರವಾಗಿ ದಾಖಲಿಸಬಹುದಾಗಿದೆ. ಅದೇ ರೀತಿ ನರಮಂಡಲದ ನರಕೋಶಗಳ ತುದಿಯಲ್ಲಿನ ಚಿಕ್ಕ ಚಿಕ್ಕ ಕೋಣೆಗಳಲ್ಲಿ ನರಕೋಶಗಳನ್ನು ಪ್ರಚೋದಿಸುವ ರಸವಾಹಕವಾದ ಅಸೆಟೈಲ್ ಕೋಲಿನ್ ಮತ್ತು ಪ್ರಚೋದನೆಯನ್ನು ಕಡಿಮೆಯಾಗಿಸುವ ಗಾಮಾ ಅಮಿನೋ ಬ್ಯುಟರಿಕ್ ಆ್ಯಸಿಡ್ ಎಂಬ ರಸವಾಹಕಗಳಲ್ಲಿ ಸಾಮಾನ್ಯವಾಗಿ ಸಮತೋಲನವಿರುತ್ತದೆ. ಆದರೆ ಅಪಸ್ಮಾರವಿರುವ ರೋಗಿಗಳಲ್ಲಿ ಈ ಸಮತೋಲನ ಕಂಡು ಬರುವುದಿಲ್ಲ ಮತ್ತು ಅದೇ ಕಾರಣಕ್ಕಾಗಿ ವ್ಯಕ್ತಿ, ಪದೇ ಪದೇ ನರಮಂಡಲದ ನರಕೋಶಗಳ ವಿಪರೀತ ಸೆಳೆತಕ್ಕೊಳಗಾಗಿ ಅಪಸ್ಮಾರಕ್ಕೆ ತುತ್ತಾಗುತ್ತಾರೆ.

 ಅಪಸ್ಮಾರ ಉಂಟಾಗಲು ಕಾರಣಗಳೇನು?

1. ಆನುವಂಶಿಕ ಕಾರಣಗಳು.

2. ಹೆರಿಗೆಯ ಸಮಯದಲ್ಲಿ ಉಂಟಾಗುವ ಮೆದುಳಿಗೆ ಆಗುವ ಹಾನಿಯಿಂದಾಗಿ, ಅಪಸ್ಮಾರ ಕಾಯಿಲೆ ಬರಬಹುದು. ಹೆರಿಗೆಯ ಸಮಯದಲ್ಲಿ ಮಗುವಿನ ತಲೆಯನ್ನು ಹೊರತೆಗೆಯುವ ಇಕ್ಕುಳದೊತ್ತಡದಿಂದಾಗಿ ಮೆದುಳಿಗೆ ಆಗುವ ಹಾನಿ ಅಥವಾ ಗರ್ಭಾಶಯದಲ್ಲಿರುವಾಗಲೇ ಉಂಟಾಗುವ ಅಮ್ಲಜನಕದ ಕೊರತೆಯಿಂದಾಗಿಯೂ, ಬಾಲ್ಯದಲ್ಲಿ ಅಪಸ್ಮಾರ ಬರುವ ಸಾಧ್ಯತೆ ಇದೆ.

3. ಬಾಲ್ಯದಲ್ಲಿ ತಲೆಗೆ ಬಿದ್ದ ಪೆಟ್ಟು ನಂತರದ ದಿನಗಳಲ್ಲಿ ಅಥವಾ ಅನೇಕ ತಿಂಗಳು ಅಥವಾ ವರ್ಷಗಳ ಬಳಿಕ ಸೆಳವಿನ ರೂಪದಲ್ಲಿ ಕಾಣಿಸಿಕೊಳ್ಳಬಹುದು.

4. ವಿಪರೀತವಾದ ಜ್ವರದಿಂದಲೂ ಕೆಲವೊಮ್ಮೆ ಅಪಸ್ಮಾರ ಬರುವ ಸಾಧ್ಯತೆ ಇದೆ. 5. ಕೆಲವೊಂದು ಮೆದುಳಿನ ಶಸ್ತ್ರ ಚಿಕಿತ್ಸೆಯ ಬಳಿಕ, ಮೆದುಳಿಗೆ ಉಂಟಾದ ಗಾಯದಿಂದಾಗಿ ಅಪಸ್ಮಾರ ಬರಬಹುದು.

6. ಮೆದುಳಿಗೆ ರಕ್ತ ಸಂಚಾರ ಅಥವಾ ಆಮ್ಲಜನಕ ಕೊರತೆ ಉಂಟಾದಾಗ ಕೂಡಾ ಅಪಸ್ಮಾರ ಬರಬಹುದು. ನಮ್ಮ ಹೃದಯದಿಂದ ಹೊರಹಾಕುವ ರಕ್ತದಲ್ಲಿ 50 ಶೇಕಡಾ ಪ್ರಮಾಣ, ಮೆದುಳಿಗೆ ಸರಬರಾಜಾಗುತ್ತದೆ. ಸಾಮಾನ್ಯವಾಗಿ ವ್ಯಕ್ತಿಯ ಮೆದುಳು 1ರಿಂದ 1.5 ಕೆಜಿ ತೂಕ ಹೊಂದಿರುತ್ತದೆ ಮತ್ತು ಪ್ರತಿ 100 ಗ್ರಾಮ್ ಮೆದುಳಿಗೆ ಕನಿಷ್ಠ 30 ಮಿ.ಲೀ. ರಕ್ತದ ಅವಶ್ಯಕತೆ ಪ್ರತಿನಿಮಿಷಕ್ಕೆ ಇರುತ್ತದೆ. ಮೂರು ನಿಮಿಷಕ್ಕಿಂತ ಜಾಸ್ತಿ ಮೆದುಳಿಗೆ ರಕ್ತ ಸಂಚಾರ ವ್ಯತ್ಯಯವಾದಲ್ಲಿ, ಶಾಶ್ವತವಾಗಿ ಮೆದುಳಿನ ಜೀವಕೋಶಗಳಿಗೆ ಹಾನಿಯಾಗಬಹುದು. ಒಟ್ಟಿನಲ್ಲಿ ಮೆದುಳು ನಮ್ಮ ದೇಹದ ಅತ್ಯಂತ ಕ್ರೀಯಾಶೀಲವಾದ ಅಂಗವಾಗಿದ್ದು ಆಮ್ಲಜನಕದ ಕೊರತೆಯಿಂದ ಬಹಳ ಬೇಗ ಹಾನಿಗೊಳಗಾಗುವ ಸಾಧ್ಯತೆ ಇರುತ್ತದೆ. ರಕ್ತದ ಕೊರತೆ ಕಾಣಿಸಿದ ಕೂಡಲೇ ಅಪಸ್ಮಾರದ ರೂಪದಲ್ಲಿ ಮೆದುಳು ತನ್ನ ಅಕ್ರೋಶ ಮತ್ತು ಅಸಹಕಾರವನ್ನು ಹೊರಹಾಕುತ್ತದೆ ಎಂದರೂ ತಪ್ಪಲ್ಲ.

 7. ಅತಿಯಾದ ಮದ್ಯಪಾನ, ಅತಿಯಾದ ಔಷಧಿ ಸೇವನೆ, ಖಿನ್ನತೆ ಹೊಗಲಾಡಿಸುವ ಔಷಧಿಗಳ ದುರ್ಬಳಕೆ ಕೂಡಾ ಅಪಸ್ಮಾರಕ್ಕೆ ಕಾರಣವಾಗ ಬಹುದು. ನಿಯಮಿತವಾಗಿ ನಿರಂತರವಾಗಿ, ಮದ್ಯಪಾನ ಮಾಡುವ ಮದ್ಯವ್ಯಸನಿಗಳು ಮದ್ಯಪಾನವನ್ನು ಏಕಾಏಕಿ ಬಿಟ್ಟಾಗ ಕೂಡಾ ವ್ಯಕ್ತಿಯಲ್ಲಿ ಅಪಸ್ಮಾರ ಗೋಚರಿಸಬಹುದು. ಅದೇ ರೀತಿ ನಿದ್ರಾಹೀನತೆಗೆ ಉಪಯೋಗಿಸುವ ಗಾರ್ಡಿನಾಲ್ ಸೋಡಿಯಂ ಎಂಬ ಫಿನೋಬಾರ್ಬಿಟೋನ್ ಅಥವಾ ಬೆನ್ಜೊಡಯಜಪಿನ್ ಔಷಧಿ ಸೇವನೆ ನಿಲ್ಲಿಸಿದಾಗಲೂ ಅಪಸ್ಮಾರ ಕಾಣಿಸಿಕೊಳ್ಳಬಹುದು.


 8. ಮೆದುಳಿನ ಉರಿಯೂತ (Meningitis) ಮೆದುಳಿನ ಪೊರೆ ಉರಿಯೂತ, ಮೆದುಳಿನ ಕೀವುಗಳು, ಮೆದುಳಿನ ಹೊರಮೈಯಲ್ಲಿನ ಪೊರೆಯಲ್ಲಿ ರಕ್ತ ಶೇಖರಣೆ (Sub Dural Hematoma), ಮೆದುಳಿಗೆ ಗಾಯವಾಗಿ ಊದಿಕೊಂಡಾಗ, (ಅಪಘಾತಗಳಲ್ಲಿ) ಮೆದುಳಿನ ಒಳಗಿನ ಒತ್ತಡ ಜಾಸ್ತಿಯಾದಾಗ ಅಪಸ್ಮಾರ ಕಾಣಿಸಿಕೊಳ್ಳಬಹುದು.

9. ರಕ್ತದಲ್ಲಿ ಗ್ಲೂಕೋಸ್, ಕ್ಯಾಲ್ಸಿಯಂ, ಸೋಡಿಯಂ ಪ್ರಮಾಣ ಕಡಿಮೆಯಾದಾಗ ರಕ್ತದಲ್ಲಿ ಕಲ್ಮಶಗಳು ಜಾಸ್ತಿಯಾದಾಗ ಯೂರಿಕ್ ಆ್ಯಸಿಡ್ ಮುಂತಾದ ಕಲ್ಮಶಗಳು, ಕಿಡ್ನಿ ವೈಫಲ್ಯದಿಂದಾಗಿ ರಕ್ತದಲ್ಲಿ ಏರಿಕೆಯಾಗಿ, ಅಪಸ್ಮಾರ ಕಾಣಿಸಬಹುದು. 10. ವಿಪರೀತ ಮದ್ಯ ಸೇವನೆಯಿಂದಾಗಿ ಲೀವರ್ (ಯಕೃತ್ತು) ನಾಶಗೊಂಡು ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡಾಗ ರಕ್ತದಲ್ಲಿ ಕಲ್ಮಶಗಳು ಅಥವಾ ಔಷಧಗಳು ಶೇಖರಣೆಗೊಂಡು ಅಪಸ್ಮಾರ ಉಂಟಾಗುವ ಸಾಧ್ಯತೆ ಇರುತ್ತದೆ.

ಅಪಸ್ಮಾರ ಬಂದಾಗ ಏನು ಮಾಡಬೇಕು?

ಅಪಸ್ಮಾರ ಬಂದಾಗ ತಕ್ಷಣ ಮಾಡಬೇಕಾದ ತುರ್ತು ಕೆಲಸವೆಂದರೆ, ರೋಗಿಯ ದೇಹದ ಭಾಗಕ್ಕೆ ಯಾವುದೇ ರೀತಿಯ ಅಪಾಯ ಆಗದಂತೆ ಆತನನ್ನು ನೋಡಿಕೊಳ್ಳಬೇಕು. ಚೂಪಾದ ವಸ್ತುಗಳು, ಕಲ್ಲು, ನೀರು, ಬೆಂಕಿ, ಇತ್ಯಾದಿಗಳಿಂದ ದೂರವಿರಿಸಬೇಕು. ಬಿಗಿಯಾದ ಉಡುಪನ್ನು ಸಡಿಲಿಸಬೇಕು. ಆತನು ಉಸಿರಾಡಲು ಅನುಕೂಲವಾಗುವಂತೆ, ಉಸಿರು ಸರಾಗವಾಗಿ ಚಲನೆ ಉಂಟಾಗಲು ಪೂರಕವಾಗುವಂತೆ ತಲೆಯನ್ನು ಒಂದು ಕಡೆ ವಾಲಿಸಿ ಹಿಡಿಯಬೇಕು. ನಾಲಗೆ ಕಚ್ಚಿಕೊಳ್ಳದಂತೆ ತಡೆಯಲು, ಹಲ್ಲುಗಳ ನಡುವೆ ಕರವಸ್ತ್ರ ಅಥವಾ ಬಟ್ಟೆಯನ್ನು ಇಡಬಹುದು. ನಾಲಗೆ ಕಡಿಯದಂತೆ ತಡೆಯಲು ಮರದ ತುಂಡು, ನಾಲಗೆ ಇಕ್ಕುಳ ಮತ್ತು ದೇಹದ ಚಲನೆ ನಿರ್ಬಂಧಿಸುವ ಸಾಧನಗಳಿಂದ ಉಪಕಾರಕ್ಕಿಂತ ಹೆಚ್ಚು ಅಪಾಯವಾಗುವ ಸಾಧ್ಯತೆ ಇರುತ್ತದೆ.

ಸೆಳವಿನ ಕಾಲದಲ್ಲಿ ಸುರಿಯುವ ವಿಪರೀತ ಜೊಲ್ಲುರಸ, ಗಂಟಲಿಗೆ ಹೋಗಿ ಉಸಿರಾಟಕ್ಕೆ ತೊಂದರೆಯಾಗಬಹುದು. ನಿಯಮಿತವಾಗಿ ಒರೆಸಿ, ಗಾಳಿಯ ಸರಾಗ ಚಲನೆಗೆ ಅನುವು ಮಾಡಿಕೊಡಬೇಕು. ಎತ್ತರದ ಜಾಗದಲ್ಲಿ ವ್ಯಕ್ತಿ ಬಿದ್ದಿದ್ದರೆ, ವ್ಯಕ್ತಿಯನ್ನು ಸಮತಟ್ಟಾದ ನೆಲದಲ್ಲಿ ಮಲಗಿಸಿ ದೇಹಕ್ಕೆ ಯಾವುದೇ ಏಟಾಗದಂತೆ ತಡೆಯಬೇಕು. ಅಪಸ್ಮಾರದಿಂದ ಹೊರಳಾಡುತ್ತಿರುವ ವ್ಯಕ್ತಿಯ ಕೈಗೆ ಚೂಪಾದ ಕಬ್ಬಿಣದ ಸರಳನ್ನು ನೀಡಿ ಸೆಳತ ನಿಲ್ಲಿಸಲು ಪ್ರಯತ್ನಿಸುವುದು ಮೂರ್ಖತನದ ಪರಾಮಾವಧಿಯಾಗಿರುತ್ತದೆ. ಅದೇ ರೀತಿ ಮುಖದ ಮೇಲೆ ನೀರು ಸುರಿಯುವುದರಿಂದ ಉಸಿರಾಟಕ್ಕೆ ಮತ್ತಷ್ಟು ತೊಂದರೆಯಾಗಬಹುದು. ಅಪಸ್ಮಾರ ಬಂದು ವ್ಯಕ್ತಿ ಕಂಪಿಸುತ್ತಿರುವಾಗ ವ್ಯಕ್ತಿಯನ್ನು ಕುಳ್ಳಿರಿಸಲು ಪ್ರಯತ್ನಿಸ ಬಾರದು. ನೆಲದ ಮೇಲೆ ಮಲಗಿಸಿ ಅಪಸ್ಮಾರ ನಿಲ್ಲುವವರೆಗೆ ವ್ಯಕ್ತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಅಪಸ್ಮಾರದ ತೀವ್ರತೆ ಕಡಿಮೆಯಾದ ಬಳಿಕ ಆಸ್ಪತ್ರೆಗೆ ಸೇರಿಸಿ ಕೂಲಂಕಷವಾಗಿ ಅಪಸ್ಮಾರಕ್ಕೆ ಕಾರಣವಾದ ಸ್ಥಿತಿ ಮತ್ತು ಕಾರಣಗಳನ್ನು ತಿಳಿದು ಚಿಕ್ಸಿತೆ ನೀಡಬೇಕಾಗುತ್ತದೆ.

ಚಿಕಿತ್ಸೆ

ನಿರಂತರವಾಗಿ ಅಪಸ್ಮಾರ ರೋಗಕ್ಕೆ ತುತ್ತಾಗುವವರು, ವೈದ್ಯರ ಸೂಚನೆಯಂತೆ ನಿಯಮಿತವಾಗಿ ಔಷಧಿ ಸೇವಿಸಬೇಕು. ಔಷಧಿಯನ್ನು ಅನೇಕ ವರ್ಷಗಳ ಕಾಲ ದಿನ ಬಿಡದೆ ಸೇವಿಸಬೇಕಾದ ಅನಿವಾರ್ಯತೆ ಇರುತ್ತದೆ. ಔಷಧಿ ಸೇವನೆ ನಿಲ್ಲಿಸಿದ ಕೂಡಲೇ ಅಪಸ್ಮಾರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಪಸ್ಮಾರದ ರೋಗದ ಚಿಕ್ಸಿತೆ ದೀರ್ಘಕಾಲಿಕವಾಗಿದ್ದು ವೈದ್ಯ, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರ ನಡುವೆ ಹೊಂದಾಣಿಕೆ ಅತಿ ಅಗತ್ಯ. ಅಪಸ್ಮಾರ ರೋಗಿ ಒಬ್ಬರೇ ಈಜಾಡುವುದು, ಬೆಟ್ಟ ಹತ್ತುವುದು, ವಾಹನ ಚಾಲನೆ ಮಾಡುವುದು, ಎತ್ತರ ಪ್ರದೇಶದಲ್ಲಿ ಕೆಲಸ ಮಾಡುವುದು ಸಂಪೂರ್ಣವಾಗಿ ನಿಷಿದ್ಧವಾಗಿರುತ್ತದೆ. ಅಪಸ್ಮಾರ ರೋಗಿಗಳನ್ನು ಯಾವತ್ತೂ ಮನೆಯಲ್ಲಿ ಒಬ್ಬಂಟಿಯಾಗಿ ಬಿಡಬಾರದು. ಸ್ನಾನ ಗ್ರಹದಲ್ಲಿಯೂ ಬಾಗಿಲು ಚಿಲಕ ಹಾಕದೇ ಸ್ನಾನ ಮಾಡಬೇಕಾದ ಅನಿವಾರ್ಯತೆ ಇರುತ್ತದೆ. ಒಟ್ಟಿನಲ್ಲಿ ಅಪಸ್ಮಾರ ರೋಗಿಗಳು ತಮ್ಮ ಆರೋಗ್ಯದ ಹಿತದೃಷ್ಟಿಯಿಂದಾಗಿ ಯಾವತ್ತೂ ಕುಟುಂಬಿಕರ ಮತ್ತು ಸ್ನೇಹಿತರ ಕಣ್ಗಾವಲಿನಲ್ಲಿಯೇ ಇರಬೇಕಾದ ಅಗತ್ಯವಿದೆ.

Writer - ಡಾ. ಮುರಲೀಮೋಹನ್, ಚೂಂತಾರು

contributor

Editor - ಡಾ. ಮುರಲೀಮೋಹನ್, ಚೂಂತಾರು

contributor

Similar News