ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಎನ್ನೆಸ್ಸೆಸ್ ಘಟಕ ಕಡ್ಡಾಯ: ಸಚಿವ ಡಾ.ನಾರಾಯಣಗೌಡ
ಬೆಂಗಳೂರು, ಎ.1: ಪ್ರಸಕ್ತ ಸಾಲಿನಿಂದ ಎಲ್ಲ ಖಾಸಗಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಎನ್ನೆಸ್ಸೆಸ್ ಘಟಕವನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ ಹೇಳಿದರು.
ಗುರುವಾರ ವಿಕಾಸಸೌಧದಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್ನೆಸ್ಸೆಸ್) ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2021-22ನೆ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಈಗಿನಿಂದಲೆ ಸ್ವಾತಂತ್ರ್ಯ ಪೂರ್ವದ ಹೋರಾಟ, ಸ್ವಾತಂತ್ರ್ಯದ ನಂತರದ ಸಾಧನೆಗಳು, ಮುಂದಿನ ಗುರಿಯ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮದ ಕ್ರಿಯಾಯೋಜನೆ ರೂಪಿಸಿ ಆಕರ್ಷಕವಾಗಿ ಕಾರ್ಯಕ್ರಮ ನಡೆಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸರಕಾರದಿಂದ ಬರಬೇಕಾಗಿರುವ 13 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೂ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡಲಾಗುವುದು ಎಂದು ನಾರಾಯಣಗೌಡ ತಿಳಿಸಿದರು.
ಗಣರಾಜ್ಯೋತ್ಸವ ಪೂರ್ವಭಾವಿ ಪಥಸಂಚಲನದ ಆಯ್ಕೆ ಶಿಬಿರ ಮತ್ತು ಪಥಸಂಚಲನ ತರಬೇತಿ ಶಿಬಿರ ನಡೆಸುವ ಜವಾಬ್ದಾರಿಯನ್ನು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನೀಡಲಾಯಿತು. ಮಂಗಳೂರು ವಿವಿ, ಗುಲ್ಬರ್ಗ ವಿವಿ, ಬೆಂಗಳೂರಿನ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಶಿವಮೊಗ್ಗದ ಕುವೆಂಪು ವಿವಿ, ಧಾರವಾಡ ಕರ್ನಾಟಕ ವಿವಿ, ಹುಬ್ಬಳ್ಳಿಯ ರಾಜ್ಯ ಕಾನೂನು ವಿವಿ, ಬೀದರ್ ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಜ್ಞಾನಗಳ ವಿವಿ, ಬೆಂಗಳೂರು ಕೇಂದ್ರ ವಿವಿ, ಕೋಲಾರದಲ್ಲಿನ ಬೆಂಗಳೂರು ಉತ್ತರ ವಿವಿವಿ ಮತ್ತು ಮಂಡ್ಯ ವಿವಿಯಲ್ಲಿ ಭಾವೈಕ್ಯತಾ ಶಿಬಿರ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
2021-22ನೆ ಸಾಲಿನಲ್ಲಿ ಯುವಜನೋತ್ಸವ ನಡೆಸುವ ಜವಾಬ್ದಾರಿಯನ್ನು ಮೈಸೂರು ವಿಶ್ವವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನೀಡಲಾಯಿತು. ರಾಜ್ಯಮಟ್ಟದ ಎನ್ನೆಸ್ಸೆಸ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಲ್ಲಿ ನಡೆಸಲಾಗುವುದು ಎಂದು ನಾರಾಯಣಗೌಡ ತಿಳಿಸಿದರು.
10 ಲಕ್ಷ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ತರಬೇತಿ: 2021-22ನೆ ಸಾಲಿನಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ತರಬೇತಿ ನೀಡುವ ಗುರಿ ನೀಡಲಾಗಿದೆ. ಎನ್ನೆಸ್ಸೆಸ್ ಅಧಿಕಾರಿಗಳು ಈ ಜವಾಬ್ದಾರಿ ನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ ಸುಮಾರು ನಾಲ್ಕುವರೆ ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು, ಮುಂದಿನ ಸಾಲಿನಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ಇದು ವಿಸ್ತರಣೆ ಆಗಬೇಕು ಎಂದು ನಾರಾಯಣಗೌಡ ಹೇಳಿದರು.
ಕಳೆದ ವರ್ಷ ಕೊವಿಡ್ 19 ಸಂದರ್ಭದಲ್ಲಿ ಎನ್ನೆಸ್ಸೆಸ್ ಸ್ವಯಂ ಸೇವಕರು ಬಹಳ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಈಗ ಎರಡನೆ ಅಲೆ ಶುರುವಾಗಿದೆ. ಹೀಗಾಗಿ ಎನ್ನೆಸ್ಸೆಸ್ ಮತ್ತೊಮ್ಮೆ ಕೊರೋನ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಬೇಕು. ಪರಿಸರ ರಕ್ಷಣೆ, ಸಸಿ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರಗಳು, ವ್ಯಕ್ತಿತ್ವ ವಿಕಸನ ಶಿಬಿರಗಳು ನಡೆಯಬೇಕು. ಅದಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧವಾಗಿದೆ ಎಂದು ನಾರಾಯಣಗೌಡ ಹೇಳಿದರು.
ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಎನ್ನೆಸ್ಸೆಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಕೇಂದ್ರ ಸರಕಾರದ ಪ್ರಾದೇಶಿಕ ನಿರ್ದೇಶಕ ಖಾದ್ರಿ ನರಸಿಂಹಯ್ಯ, ವಾರ್ತಾ ಮತ್ತು ಪ್ರಚಾರ ಇಲಾಖೆ ನಿರ್ದೇಶಕ ಮುರಳೀಧರ್, ಎಲ್ಲ ವಿವಿಗಳ ಉಪಕುಲಪತಿಗಳು, ಎನ್ನೆಸ್ಸೆಸ್ ಸಂಯೋಜಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.