×
Ad

ಸರಕಾರದ ಆಡಳಿತದಲ್ಲಿ ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ: ಸಚಿವ ಎಸ್‌.ಟಿ.ಸೋಮಶೇಖರ್

Update: 2021-04-05 12:22 IST

ಮೈಸೂರು, ಎ.5: ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿಯ ಕುಟುಂಬದವರ ಹಸ್ತಕ್ಷೇಪವಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ‌. ಸೋಮಶೇಖರ್ ಹೇಳಿದ್ದಾರೆ‌.

ಸೋಮವಾರ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಮಾಜಿ ಉಪ ಪ್ರಧಾನ ಮಂತ್ರಿಗಳಾದ ದಿವಂಗತ ಡಾ.ಬಾಬು ಜಗಜೀವನರಾಂ ಅವರ ಜನ್ಮದಿನೋತ್ಸವದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಚಿವರು ಮಾತನಾಡುತ್ತಿದ್ದರು.

ಕೆಲವರು ಮುಖ್ಯಮಂತ್ರಿ ಅವರ ಪುತ್ರ ವಿಜಯೇಂದ್ರರ ಹೆಸರು ಹೇಳಿ ರಾಜಕೀಯ ಬೇಳೆ ಬೆಯಿಸಿಕೊಳ್ಳುತ್ತಿದ್ದಾರೆ. ಸರ್ಕಾರದಲ್ಲಿ ಮಂತ್ರಿಗಳಿದ್ದೀವಿ, ಜಿಲ್ಲಾಡಳಿತ ಇದೆ, ಶಾಸಕರಿದ್ದಾರೆ, ಆಡಳಿತ ನಡೆಸುವವರಿದ್ದಾರೆ‌. ಆದರೆ ಪದೇ ಪದೇ ಮುಖ್ಯಮಂತ್ರಿ ಅವರ ಕುಟುಂಬದವರನ್ನು ಎಳೆದು ತರುವುದು ಸರಿಯಲ್ಲ ಎಂದರು.

ಮುಖ್ಯಮಂತ್ರಿ ಮಾಡುವ ಒಳ್ಳೆಯ ಕೆಲಸಗಳನ್ನು ವಿರೋಧ ಪಕ್ಷದವರಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿಯ ಆರೋಪ ಮಾಡುತ್ತಿದ್ದಾರೆ‌. ನಮ್ಮ ಸಹಕಾರ ಇಲಾಖೆಗೂ ಯಾರೂ ಹಸ್ತಕ್ಷೇಪ ಮಾಡಿಲ್ಲ. ಮೈಸೂರು ಉಸ್ತುವಾರಿ ಆಡಳಿತವನ್ನು ಸ್ವತಂತ್ರವಾಗಿ ನಡೆಸಲು ಮುಕ್ತ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದರು.

ವಿಜಯೇಂದ್ರ ಅವರು ಪಕ್ಷದಲ್ಲಿ ಉಪಾಧ್ಯಕ್ಷರಾಗಿದ್ದಾರೆ. ಅವರ ಸಲಹೆ ಪಕ್ಷಕ್ಕೆ ಮಾತ್ರ ಸೀಮಿತ. ಸರ್ಕಾರ ನಡೆಸಲು ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ‌. ನಾಲ್ಕು ಭಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಅವರಿಗೆ ಎಲ್ಲಾ ರೀತಿಯ ನಿರ್ಧಾರ ಕೈಗೊಳ್ಳುವ ಪರಮಾಧಿಕಾರವಿದೆ ಎಂದು ತಿಳಿಸಿದರು.

ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಎಂಬುದು ವಿರೋಧ ಪಕ್ಷದವರಿಂದ ಮಾತ್ರ ಇದೆ. ರಾಜ್ಯದಲ್ಲಿ ಯಾವಾವ ಮುಖ್ಯಮಂತ್ರಿಗಳ ಕಾಲದಲ್ಲಿ ಯಾರಾರು ಅಧಿಕಾರ ನಡೆಸಿದ್ದಾರೆ ಎಂಬುದು ಕರ್ನಾಟಕದ ಜನತೆಗೂ ಗೊತ್ತಿದೆ. ಸೂಕ್ತ ಸಮಯ ಬಂದಾಗ ನಾವೂ ಕೂಡ ಅದನ್ನೆಲ್ಲ ತಿಳಿಸಲಾಗುವುದು ಎಂದು ಹೇಳಿದರು.

ವಿಧಾನ ಸಭೆ ನಡೆಯುವ ಸಂದರ್ಭದಲ್ಲಿ ಯಾವತ್ತಾದರೂ ಒಂದು ದಿವಸ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿ ವಿಚಾರವಾಗಿ ಚರ್ಚಿಸಲಿಲ್ಲ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಲಿಲ್ಲ. ಸಿಡಿ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಲಾಹರಣ ಮಾಡಿದರು. ವಿಧಾನ ಸಭೆಯಲ್ಲಿ ನಡೆಯುವ ಚರ್ಚೆಯನ್ನು ರಾಜ್ಯದ ಜನರೆಲ್ಲಾ ವೀಕ್ಷಿಸುತ್ತಿರುತ್ತಾರೆ. ಜನರ ಕಷ್ಟ ಸುಖದ ಬಗ್ಗೆ ಮಾತನಾಡದೆ ಪ್ರತಿಭಟನೆ ನಡೆಸಿದರು ಎಂದರು‌.

ಕಾಂಗ್ರೆಸ್ ಶಾಸಕರ ಕ್ಷೇತ್ರಗಳು ಅನುದಾನ ಕೊರತೆ ಮಾಡಲಾಗುತ್ತಿದೆ ಎಂಬ ವಿಷಯ ಕುರಿತು ಮಾತನಾಡಿದ ಸಚಿವರು, ಈ ಆರೋಪದಲ್ಲಿ ಹುರುಳಿಲ್ಲ. ಮುಖ್ಯಮಂತ್ರಿಗಳಿಗೆ ರಾಜ್ಯದ 224 ಕ್ಷೇತ್ರಗಳು ಕೂಡ ಒಂದೆ. ಇದರಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಂದು ತಾರತಮ್ಯ ಮಾಡುತ್ತಿಲ್ಲ. ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದಾರೆ ಎಂದರು.

ಸಿಡಿ ಪ್ರಕರಣದ ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡದಲ್ಲಿ ಸಮರ್ಥ ಅಧಿಕಾರಿಗಳಿದ್ದಾರೆ. ಮುಖ್ಯಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲೀ ಯಾರೂ ಕೂಡ ಹಸ್ತಕ್ಷೇಪ ಮಾಡುತ್ತಿಲ್ಲ. ಅಧಿಕಾರಿಗಳು ಯಾರ ಹಸ್ತಕ್ಷೇಪಕ್ಕೆ ಒಳಗಾಗದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News