ಕೊರೋನ ನಿಯಂತ್ರಣಕ್ಕಾಗಿ ಹೆಚ್ಚು ಲಸಿಕೆ ಪೂರೈಸಿ: ಕೇಂದ್ರ ಸರಕಾರಕ್ಕೆ ಸಚಿವ ಡಾ.ಕೆ.ಸುಧಾಕರ್ ಮನವಿ

Update: 2021-04-06 18:38 GMT

ಬೆಂಗಳೂರು, ಎ.6: ರಾಜ್ಯದಲ್ಲಿ ಕೋವಿಡ್ ತಡೆಗಟ್ಟಲು ಹೆಚ್ಚು ಲಸಿಕೆ ಪೂರೈಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಕರ್ನಾಟಕ ಸೇರಿ 11 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡ ಸಚಿವರು, ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ವಿವರಿಸಿದರು. ಸೋಂಕು ಹರಡುವಿಕೆ ತಡೆಗಟ್ಟಲು ಕೈಗೊಂಡ ಕ್ರಮ, ಪರೀಕ್ಷೆ ಹೆಚ್ಚಳ ಸೇರಿದಂತೆ ಕೋವಿಡ್ 2ನೆ ಅಲೆ ತಡೆಯಲು ಕೈಗೊಂಡ ಕ್ರಮಗಳ ಕುರಿತು ಸಚಿವರು ಸಭೆಗೆ ವಿವರಿಸಿದರು.

ಕೆಲ ಸಂದರ್ಭಗಳಲ್ಲಿ ಕಡಿಮೆ ಲಸಿಕೆಯಿಂದಾಗಿ ಕೋವಿಡ್ ಲಸಿಕೆ ಅಭಿಯಾನವನ್ನು ನಿಧಾನ ಮಾಡಬೇಕಾಯಿತು. ಹೀಗಾಗಿ, ಕೇಂದ್ರದಿಂದ ಹೆಚ್ಚು ಲಸಿಕೆ ಲಭ್ಯವಾಗಿಸಬೇಕು. ಕೊರೋನ ನಿಯಂತ್ರಣಕ್ಕೆ ಪೂರಕವಾಗಿ ಆಕ್ಸಿಜನ್ ಹೆಚ್ಚು ಉತ್ಪಾದನೆಯಾಗುವಂತೆ ಕ್ರಮ ವಹಿಸಬೇಕು. ಚಿತ್ರಮಂದಿರ, ಅಂತರರಾಜ್ಯ ಪ್ರಯಾಣ, ಸಮಾರಂಭಗಳಲ್ಲಿ ಜನಸಂಖ್ಯೆ ಮಿತಿ ಮೊದಲಾದವುಗಳಲ್ಲಿ ದೇಶಾದ್ಯಂತ ಒಂದೇ ಮಾರ್ಗಸೂಚಿ ನೀಡಬೇಕು. ಇದರಿಂದಾಗಿ ಯಾವುದೇ ಗೊಂದಲ ಉಂಟಾಗುವುದಿಲ್ಲ. ನಿಯಮಗಳಲ್ಲಿ ದೇಶಾದ್ಯಂತ ಏಕರೂಪತೆ ಇಲ್ಲದಿದ್ದರೆ ಸಮಸ್ಯೆಯಾಗುತ್ತದೆ. ಹೀಗಾಗಿ, ಎಲ್ಲ ಕೋವಿಡ್ ಪೀಡಿತ ರಾಜ್ಯಗಳಿಗೆ ಒಂದೇ ರೀತಿಯ ನಿಯಮ ರೂಪಿಸಬೇಕು. ಇದರಿಂದಾಗಿ ಜನತೆಗೆ ಕೋವಿಡ್ ನ ಗಂಭೀರ ಸ್ವರೂಪದ ಬಗ್ಗೆ ಅರಿವು ಬರಲಿದೆ ಎಂದು ಸಚಿವರು ಕೋರಿದರು.

ರಾಜ್ಯದಲ್ಲಿ ಪ್ರತಿ ದಿನ ಸರಾಸರಿ 1.15 ಲಕ್ಷದಿಂದ 1.25 ಲಕ್ಷದಷ್ಟು ಜನರಿಗೆ ಕೊರೋನ ಪರೀಕ್ಷೆ ಮಾಡಲಾಗುತ್ತಿದೆ. ಎಪ್ರಿಲ್ 5ಗೆ ಅಂತ್ಯಗೊಂಡಂತೆ, 2,19,87,431 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 1,77,66,796 (ಶೇ.95) ಆರ್‍ಟಿಪಿಸಿಆರ್ ಪರೀಕ್ಷೆಯಾಗಿದೆ ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.24ರಷ್ಟಿದೆ. ಮಾರ್ಚ್ 1 ರಿಂದ ಈ ದರ ಶೇ.0.47ರಷ್ಟಿದೆ. ಬೆಂಗಳೂರಿನಲ್ಲಿ ಶೇ.1.03ದರವಿದ್ದು, ಮಾರ್ಚ್ 1 ರಿಂದ ಶೇ.0.42ರಷ್ಟಿದೆ ಎಂದರು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೋವಿಡ್ ನಡವಳಿಕೆಗಳನ್ನು ಜಾರಿ ಮಾಡಲಾಗಿದೆ. ಮಾಸ್ಕ್ ಧರಿಸುವುದು, ಭೌತಿಕ ಅಂತರದ ನಿಯಮ ಪಾಲಿಸಲಾಗುತ್ತಿದೆ. ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುವವರಿಗೆ 250 ರೂ. ದಂಡ ವಿಧಿಸಲಾಗುತ್ತಿದೆ. ಎರಡನೇ ಅಲೆ ತಡೆಗಟ್ಟಲು ಸೂಕ್ಷ್ಮ ಕಂಟೇನ್ಮೆಂಟ್ ವಲಯ ಗುರುತಿಸಲಾಗಿದೆ. 5ಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದ ಕಟ್ಟಡಗಳನ್ನು ಸೂಕ್ಷ್ಮ ಎಂದು ಘೋಷಿಸಲಾಗುತ್ತಿದೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಿಗೆ ಸೂಚನೆ: ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಟ್ಟು ಕ್ರಮ ವಹಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಶೇ.20 ರಷ್ಟು ಹಾಸಿಗೆಗಳನ್ನು ಕೋವಿಡ್‍ಗೆ ಮೀಸಲಿಡಲು ಸೂಚಿಸಲಾಗಿದೆ. ಅಗತ್ಯ ಬಂದರೆ ಶೇ.50 ರಷ್ಟು ಮೀಸಲಿಡಬೇಕೆಂದೂ ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ಜನರ ಮಿತಿಯನ್ನು 500ಕ್ಕೆ ಹಾಗೂ ಮುಚ್ಚಿದ ಪ್ರದೇಶಗಳಲ್ಲಿ 200ಕ್ಕೆ ಸೀಮಿತಗೊಳಿಸಲಾಗಿದೆ. 9ನೇ ತರಗತಿಗೆ ಶಾಲೆ ನಡೆಸುವುದು ನಿಬರ್ಂಧಿಸಿದ್ದು, 10 ಹಾಗೂ ಪಿಯುಸಿಗೆ ತರಗತಿ ನಡೆಸುವ ಆಯ್ಕೆ ಮಾತ್ರ ನೀಡಲಾಗಿದೆ. ಬೋಡಿರ್ಂಗ್ ಶಾಲೆ, ಹಾಸ್ಟೆಲ್‍ಗಳನ್ನು ಬಂದ್ ಮಾಡಲಾಗಿದೆ. ಉನ್ನತ ವ್ಯಾಸಂಗದ ತರಗತಿಗಳನ್ನು ಕೂಡ ನಿಬರ್ಂಧಿಸಲಾಗಿದೆ ಎಂದು ವಿವರಿಸಿದರು.

ಅಪಾರ್ಟ್‍ಮೆಂಟ್‍ಗಳಲ್ಲಿ ಜಿಮ್, ಈಜುಕೊಳ ಬಳಕೆ ನಿರ್ಬಂಧಿಸಲಾಗಿದೆ. ಜಿಮ್‍ಗಳಲ್ಲಿ ಶೇ.50 ರಷ್ಟು ಮಂದಿ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಗುಂಪುಗೂಡುವುದನ್ನು ತಡೆಯಲು ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ. ಚಿತ್ರಮಂದಿರಗಳಲ್ಲಿ ಶೇ.50 ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ. ಎಂಟು ಜಿಲ್ಲೆಗಳಲ್ಲಿ ಬಾರ್, ಪಬ್‍ಗಳಲ್ಲಿ ಶೇ.50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಪರೀಕ್ಷೆ ಕುರಿತು ಮೆಚ್ಚುಗೆ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಹೆಚ್ಚಿದ್ದು, ಕೊರೋನ ವೇಗವಾಗಿ ಹರಡುತ್ತಿದೆ. ಇದರಿಂದಾಗಿ ಸಾವಿನ ಪ್ರಮಾಣವೂ ಹೆಚ್ಚಬಹುದು. ಹಿಂದಿನ ವರ್ಷ ಮರಣ ಪ್ರಮಾಣ ಶೇ.1.24 ಪ್ರಮಾಣವಿದ್ದು, ಈಗ ಶೇ.0.6ರಷ್ಟು ಆಗಿದೆ. ಎ.5ರಂದು 32 ಜನರು ಸಾವನ್ನಪ್ಪಿದ್ದಾರೆ. ಎ.6ರಂದು 38 ಸಾವುಗಳಾಗಿವೆ. ಆದರೆ ರಾಜ್ಯದಲ್ಲಿ 2 ಕೋಟಿಗೂ ಅಧಿಕ ಜನರಿಗೆ ಪರೀಕ್ಷೆ ಮಾಡಿರುವುದಕ್ಕೆ ಕೇಂದ್ರ ಸಚಿವರು ಶ್ಲಾಘಿಸಿದ್ದಾರೆ. ಅಲ್ಲದೇ ಇದರಲ್ಲಿ ಶೇ.95 ರಷ್ಟು ಆರ್ ಟಿಪಿಸಿಆರ್ ಮಾಡಲಾಗಿದೆ. ಬೇರೆ ಯಾವ ರಾಜ್ಯವೂ ಇಷ್ಟೊಂದು ಪರೀಕ್ಷೆ ಮಾಡಿಲ್ಲ. ಹೆಚ್ಚು ಪರೀಕ್ಷೆ ಮಾಡಿ, ಸಂಪರ್ಕಿತರನ್ನು ಪತ್ತೆ ಮಾಡಿದರೆ ಸಾವಿನ ಸಂಖ್ಯೆ ಇಳಿಸಬಹುದು ಎಂದರು.

ಜನರು ಕೋವಿಡ್ ಸುರಕ್ಷತಾ ಕ್ರಮ ಪಾಲಿಸದಿದ್ದರೆ ಸೋಂಕು ಹೆಚ್ಚಾಗುತ್ತದೆ. ಆಗ ನೈತಿಕ ಹೊಣೆಯನ್ನು ಯಾರು ಹೊರಬೇಕೆಂದು ಪ್ರಶ್ನೆ ಬರುತ್ತದೆ ಎಂದು ಕೇಂದ್ರ ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.

ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಕೂಡ ಬರುವ ನಿರೀಕ್ಷೆ ಇದೆ. ಸೋಂಕು ಹೆಚ್ಚಾಗಿರುವುದರಿಂದ ನಿಖರ ಮಾರ್ಗಸೂಚಿ ನೀಡುವ ಕೆಲಸ ಮಾಡಲಿದ್ದಾರೆ. ಹೆಚ್ಚು ಲಸಿಕೆ ನೀಡಿರುವುದಕ್ಕೆ ಕೂಡ ಕೇಂದ್ರಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ. ಹೆಚ್ಚು ಆಕ್ಸಿಜನ್ ಘಟಕ ಅಳವಡಿಕೆ ಕೇಂದ್ರದ ಸಹಕಾರ ಕೋರಿದ್ದೇನೆ. ಅದಕ್ಕೆ ಪೂರಕವಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಹಾಸಿಗೆ ಲಭ್ಯತೆ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದರು.

ಮಹಾರಾಷ್ಟ್ರದ ಆರೋಗ್ಯ ಸಚಿವರು ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಅವರು ಕೇಂದ್ರಕ್ಕೆ ಕೋರಿದ್ದಾರೆ. ನಮ್ಮಲ್ಲಿ ಕೆಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.9ರಷ್ಟು ಆಗಿದೆ. ಹೀಗಾಗಿ ಕೆಲ ಕ್ರಮಗಳು ಬಹಳ ಅಗತ್ಯವಿದೆ ಎಂದರು.

ಈಗ ಮುಷ್ಕರ ನಡೆಸುವುದು ದುರದೃಷ್ಟ: ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಮುಷ್ಕರ ಮಾಡುವುದು ಆರೋಗ್ಯ ಹಿತದೃಷ್ಟಿಯಿಂದ ಒಪ್ಪಲು ಸಾಧ್ಯವಿಲ್ಲ. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಪ್ರತಿಯೊಬ್ಬರಿಗೂ ಪ್ರತಿಭಟನೆ ಹಕ್ಕು ಇದೆ. ಆದರೆ ಸಮಯ, ಸಂದರ್ಭ ನೋಡಬೇಕು. 9 ರಲ್ಲಿ 8 ಬೇಡಿಕೆಯನ್ನು ರಾಜ್ಯ ಸರಕಾರ ಈಡೇರಿಸಿದೆ. ಒಂದು ಬೇಡಿಕೆಗಾಗಿ ಯಾರದ್ದೋ ಕುಮ್ಮಕ್ಕಿನಿಂದ ಹೀಗೆ ಮಾಡಬಾರದು. ಅದನ್ನು ಚರ್ಚೆ ಮೂಲಕ ಬಗೆಹರಿಸಬಹುದು. ಮುಖ್ಯಮಂತ್ರಿಗಳು ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತಾರೆ. ಇದಕ್ಕೆ ತಾಳ್ಮೆ ಅಗತ್ಯ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News