ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಡಿ.ಕೆ.ಶಿವಕುಮಾರ್ ಅದಕ್ಕೆ ಚಾಲಕ: ಸಚಿವ ಸೋಮಶೇಖರ್

Update: 2021-04-11 11:38 GMT

ಕಲಬುರಗಿ, ಎ. 11: ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಗೆ ಸಂಬಂಧಿಸಿದಂತೆ ಉಸ್ತುವಾರಿ ಅರುಣ್ ಸಿಂಗ್ ಅವರ ನಿರ್ಧಾರವೇ ಅಂತಿಮ. ಎಲ್ಲರ ಅಭಿಪ್ರಾಯ ಕ್ರೋಡೀಕರಿಸಿ ಅವರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರು ನಮ್ಮ ಸಹದ್ಯೋಗಿಯಾದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಪಕ್ಷದ ಚೌಕಟ್ಟು ಮೀರಿ ಮಾತನಾಡಿದಾಗ ಕ್ರಮ ಆಗುತ್ತದೆ. ಪಕ್ಷದ ಹಿತದೃಷ್ಟಿಯಿಂದ ಆಪರೇಷನ್ ಮಾಡಲಿ ನಮಗೇನು ಇಲ್ಲ. ಆದರೆ, ಸುಖಾ ಸುಮ್ಮನೆ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದ ಸೋಮಶೇಖರ್, `ಯಡಿಯೂರಪ್ಪ ಮುಳುಗುತ್ತಿರುವ ಹಡಗು' ಎಂಬ ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ. ಯಾರದ್ದು ಮುಳಗುತ್ತಿರುವ ಹಡಗು ಎಂದು ಗೊತ್ತಿದೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಡಿ.ಕೆ.ಶಿವಕುಮಾರ್ ಅದಕ್ಕೆ ಚಾಲಕ. ಇನ್ನು ಎರಡು ರಂಧ್ರ ಕೊರೆಯಲು ಸಿದ್ದರಾಮಯ್ಯ ಸಿದ್ಧವಾಗಿದ್ದಾರೆ. ಅವರ ಸಮಸ್ಯೆಗಳನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದು ಸಲಹೆ ಮಾಡಿದರು.

ಬಿಜೆಪಿಯವರು ಯಾರೂ ಕಾಂಗ್ರೆಸ್‍ಗೆ ರಂಧ್ರ ಕೊರೆಯಲು ಹೋಗುವುದಿಲ್ಲ. ಬದಲಿಗೆ ಆ ಪಕ್ಷದವರೇ ಇದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಕೆ.ಆರ್.ರಮೇಶ್ ಕುಮಾರ್ ಸೇರಿ ಹಲವರು ರಂಧ್ರ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಳುಗಿಸಲು ಕಾಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಹಡಗು ಮೇಲೆ ಏಳುವುದಿಲ್ಲ ಎಂದು ಸೋಮಶೇಖರ್ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News