×
Ad

ಸಾಮಾಜಿಕ, ಶೈಕ್ಷಣಿಕ ಸಮಾನತೆಗಾಗಿ ಅಂಬೇಡ್ಕರ್‌ರನ್ನು ಪ್ರತಿ ದಿನ ಸ್ಮರಿಸಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Update: 2021-04-14 20:44 IST

ಉಡುಪಿ, ಎ.14: ಸಂವಿಧಾನದ ಮೂಲಕ ದೇಶದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮಾನತೆ ಮೂಡಿಸುವ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಇಂಥ ಹಲವು ವಿಷಯಗಳನ್ನು ಸಂವಿಧಾನದಲ್ಲಿ ಅಳವಡಿಸುವುದರ ಜೊತೆಗೆ ಪ್ರಜಾಪ್ರುತ್ವದ ಬಲವರ್ಧನೆಗೆ ನೀಡಿರುವ ಕೊಡುಗೆಗಳ ಕಾರಣಕ್ಕಾಗಿ ದೇಶದ ಜನತೆ ಅಂಬೇಡ್ಕರ್ ಅವರನ್ನು ಪ್ರತೀ ದಿನ ನೆನೆಯಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

 ಬುಧವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜಕಲ್ಯಾಣ ಇಲಾಖೆ ಹಾಗೂ ಜಿಲ್ಲೆಯ ಪ.ಜಾತಿ ಮತ್ತು ಪ.ವರ್ಗಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ನಡೆದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಅರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತಿದ್ದರು. ಪ್ರಜಾಪ್ರುತ್ವದ ಬಲವರ್ಧನೆಗೆ ಸಂವಿಧಾನದ ಮೂಲಕ ಅಂಬೇಡ್ಕರ್ ನೀಡಿರುವ ಪ್ರತಿಯೊಂದು ಸಲಹೆಗಳೂ ಅತ್ಯಮೂಲ್ಯವಾಗಿದ್ದು, ಭಾರತದ ಸಂವಿಧಾನವು ದೇಶದ ಎಲ್ಲಾ ವರ್ಗದ ನಾಗರಿಕರ ಶ್ರೇಯೋಭಿವೃದ್ದಿಯ ಉದ್ದೇಶ ಹೊಂದಿದೆ. ವೈವಿಧ್ಯಮಯ ಸಂಸ್ಕೃತಿ ಹೊಂದಿರುವ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯಯುತ ಹಕ್ಕುಗಳನ್ನು ನೀಡಲಾಗಿದೆ. ಸಂವಿಧಾನ ರಚನೆ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳಿಂದ ರೂಪಿತವಾದ ಕಾನೂನುಗಳನ್ನು ಸಮಾಜ ನೆನೆಯಬೇಕು ಎಂದವರು ತಿಳಿಸಿದರು.

  ಶಾಸಕಾಂಗ ಮತ್ತು ಕಾರ್ಯಾಂಗಗಳು ತಮಗೆ ನೀಡಿರುವ ಅಧಿಕಾರವನ್ನು ಸಮರ್ಪಕ ವಾಗಿ ಬಳಿಸಿಕೊಂಡು ಸಮಾಜಮುಖಿ ಯೋಜನೆಗಳನ್ನು ರೂಪಿಸಿ, ಅವುಗಳನ್ನು ಎಲ್ಲಾ ವರ್ಗದ ಜನರಿಗೆ ತಲುಪುವಂತೆ ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಮೂಲಕ ಅಂಬೇಡ್ಕರ್ ಅವರ ಸಂವಿಧಾನ ರಚನೆ ಹಾಗೂ ಪ್ರಜಾಪ್ರಭುತ್ವದ ಉದ್ದೇಶವನ್ನು ಸಾರ್ಥಕ ಗೊಳಿಸಬೇಕು ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದರು.

  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ರಾಜ್ಯದಲ್ಲಿ ಪಿಟಿಸಿಲ್ ಕಾಯ್ದೆಯಲ್ಲಿ ಪರಿಶಿಷ್ಟ ವರ್ಗಕ್ಕೆ ನೀಡಲಾದ ಭೂಮಿಯಲ್ಲಿ ವಾಣಿಜ್ಯ ಚಟುವಟಿಕೆ ಕೈಗೊಳ್ಳಬಾರದು ಎಂಬ ನಿಯಮವಿದ್ದು, ಇದರಿಂದ ಪರಿಶಿಷ್ಟರು ಆರ್ಥಿಕವಾಗಿ ಸಬಲ ರಾಗಲು ತೊಂದರೆಯಾಗುತ್ತಿದೆ. ಈ ನ್ಯೂನತೆ ಕುರಿತಂತೆ ತಾನು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದು, ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಪರಿಹಾರ ದೊರೆಯಲಿದೆ ಎಂದರು.

  ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಎಂದು ಹೆಸರಿಡುವ ಕುರಿತಂತೆ ನಗರಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಗಿದೆ. ಮಣಿಪಾಲದ ರಜತಾದ್ರಿಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಸುತ್ತ ನಗರಸಭೆಯ ಸಾಮಾನ್ಯ ನಿಧಿಯ 50 ಲಕ್ಷ ರೂ. ವೆಚ್ಚದಲ್ಲಿ ಪಾರ್ಕ್ ನಿರ್ಮಿಸಲಾಗುತ್ತಿದೆ ಎಂದರು.

  ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಪ್ರದೀಪ್ ಕೆಂಚನೂರು ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸದಲ್ಲಿ ಅಂಬೇಡ್ಕರ್ ಅವರು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲ ಆಲೋಚನೆಗಳನ್ನು ಹೊಂದಿದ್ದರು. ಸಮಾಜದ ಪ್ರತಿಯೊಬ್ಬರೂ ಅವೈಜ್ಞಾನಿಕ ಮತ್ತು ಅವೈಚಾರಿಕತೆಗೆ ಒಳಗಾಗದೆ ಸಂವಿಧಾನದ ಆಶಯಗಳನ್ನು ದಿನನಿತ್ಯದ ಜೀವನದಲ್ಲಿ ಪಾಲಿಸಬೇಕು ಎಂದರು.

   ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಕರಾವಳಿ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತಾಪಂ ಅದ್ಯಕ್ಷೆ ಸಂಧ್ಯಾ ಕಾಮತ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಪಂ ಸದಸ್ಯೆ ಶಿಲ್ಪಾಸುವರ್ಣ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿವಿಷ್ಣುವರ್ಧನ್ , ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭೆ ಆಯುಕ್ತ ಡಾ. ಉದಯ ಶೆಟ್ಟಿ ಉಪಸ್ಥಿತರಿದ್ದರು.

ಸಮಾಜಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಕೊರಗ ಸಮುದಾಯದರಿಂದ ಡೋಲು ನೃತ್ಯ ಹಾಗೂ ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಅಂಬೇಡ್ಕರ್ ಗೀತೆಗಳ ಗಾಯನ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ವಿ ಮಡ್ಲೂರು ಸ್ವಾಗತಿಸಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ವಂದಿಸಿದರು.

ಸಮಾರಂಭಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬೌದ್ದ ಪ್ರಾರ್ಥನೆ ಆಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News