ಖಾಸಗಿ ಆಸ್ಪತ್ರೆಗಳಿಗೂ ಹಾಸಿಗೆ ಮೀಸಲಿಡುವಂತೆ ಕಟ್ಟುನಿಟ್ಟಿನ ಸೂಚನೆ: ಡಾ.ಕೆ.ಸುಧಾಕರ್

Update: 2021-04-15 17:35 GMT

ಬೆಂಗಳೂರು, ಎ.15: ಬೆಂಗಳೂರಿನ ಸರಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹಾಸಿಗೆಗಳನ್ನು ಕೊರೋನ ರೋಗಿಗಳಿಗೆ ಮೀಸಲಿಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಸಿಗೆ ಮೀಸಲಿಡದಿದ್ದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 400ಕ್ಕೂ ಹೆಚ್ಚು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಗೆ ನೀಡಿದೆ. ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯನ್ನು ಸಾರಿ ಹಾಗೂ ಐಎಲ್‍ಐಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದರು.

ವಿಕ್ಟೋರಿಯಾದಲ್ಲಿ 300 ಹಾಸಿಗೆ ಕೋವಿಡ್ ರೋಗಿಗಳಿಗೆ ಮೀಸಲಿದ್ದು, ಎರಡು ದಿನದೊಳಗೆ 500ಕ್ಕೆ ಏರಿಸಲು ಸೂಚಿಸಲಾಗಿದೆ. ಬೌರಿಂಗ್‍ನಲ್ಲಿ 300 ಹಾಸಿಗೆ, ಚರಕ ಆಸ್ಪತ್ರೆಯಲ್ಲಿ ಎರಡು ದಿನದೊಳಗೆ 150 ಹಾಸಿಗೆ, ಘೋಷ್ ಆಸ್ಪತ್ರೆಯಲ್ಲಿ 100 ಹಾಸಿಗೆ, ಕೆ.ಸಿ.ಜನರಲ್‍ನಲ್ಲಿ 100 ಹಾಸಿಗೆ ಕೋವಿಡ್‍ಗೆ ಮೀಸಲಿಡಲು ಸೂಚಿಸಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಸೂಚನೆ: ಕೋವಿಡ್‍ಗೆ ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳಿಗೆ ಈಗಾಗಲೇ ಮನವಿ ಮಾಡಲಾಗಿದೆ. ಕಳೆದ 15 ದಿನಗಳಿಂದ ಕೋರುತ್ತಿದ್ದರೂ ಕೆಲವು ಆಸ್ಪತ್ರೆಗಳು ಶೇ.15 ರಿಂದ 20ರಷ್ಟು ಹಾಸಿಗೆ ಮಾತ್ರ ನೀಡಿವೆ. ಇನ್ನು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಅವರು ಹೇಳಿದರು.

ಖಾಸಗಿ ಆಸ್ಪತ್ರೆಗಳು ಎಚ್ಚೆತ್ತುಕೊಳ್ಳದಿದ್ದರೆ, ಕಳೆದ ವರ್ಷದಂತೆಯೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾನ್ ಕೋವಿಡ್ ರೋಗಿಗಳಲ್ಲಿ ತುರ್ತು ಇರುವವರಿಗೆ ಮಾತ್ರ ಚಿಕಿತ್ಸೆ ನೀಡಬೇಕು. ಕೋವಿಡ್ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ ಸರಕಾರ ಸುಮ್ಮನಿರಲು ಸಾಧ್ಯವಿಲ್ಲ. ಆದರೂ ಈಗ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಹೊಟೇಲ್‍ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಬೇಕು. ಕಾರ್ಪೋರೇಟ್ ಆಸ್ಪತ್ರೆಗಳು ಈ ವ್ಯವಸ್ಥೆ ಮಾಡಬೇಕು. ಗಂಭೀರ ರೋಗಿಗಳಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು ಎಂದು ಸೂಚಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ಸಿಎಂಗೆ ವರದಿ: ಕೋವಿಡ್ ಹೆಚ್ಚಳ ಅಂದಾಜು, ಕೈಗೊಳ್ಳಬೇಕಾದ ಕ್ರಮಗಳು ಮೊದಲಾದವುಗಳನ್ನೊಳಗೊಂಡಂತೆ ತಾಂತ್ರಿಕ ಸಲಹಾ ಸಮಿತಿಯು ವರದಿ ನೀಡಲಿದೆ. ಇದನ್ನು ಮುಖ್ಯಮಂತ್ರಿಗೆ ನೀಡಿದ ಬಳಿಕ ಚರ್ಚೆಯಾಗಲಿದೆ. ನಂತರ ಸರಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸುಧಾಕರ್ ತಿಳಿಸಿದರು.

ಚಿತಾಗಾರಗಳ ಸಮಸ್ಯೆ ಸಂಬಂಧ ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಿದ್ದೇನೆ. ನಿನ್ನೆ 14-15 ಸಾವು ಸಂಭವಿಸಿದೆ. ಅದು ಕೋವಿಡ್ ಸಾವಾಗಿರುವುದರಿಂದ ಒಂದೇ ಚಿತಾಗಾರಕ್ಕೆ ಕಳುಹಿಸಲಾಗಿದೆ. ಇದರಿಂದಾಗಿ ದಟ್ಟಣೆ ಉಂಟಾಗಿದೆ. ಬೇರೆ ಬೇರೆ ಕಡೆ ಕಳುಹಿಸಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪಿಜಿ ವ್ಯಾಸಂಗ ಮಾಡಿದವರು ಒಂದು ವರ್ಷ ಕಡ್ಡಾಯ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸಬೇಕೆಂದು ನಿಯಮ ಇದೆ. ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ಸರಕಾರ ವಿದ್ಯಾರ್ಥಿಗಳ ಪರವಾಗಿ ನಿರ್ಧಾರ ಕೈಗೊಂಡಿದೆ. ನೇಮಕ ಮಾಡುವವರೆಗೂ ಬೇರೆ ಕಡೆ ಕೆಲಸ ಮಾಡಲು ಅವಕಾಶ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಕಾನೂನು ಇಲಾಖೆಯಿಂದ ಸಮ್ಮತಿ ಪಡೆಯಲು ಸೂಚಿಸಲಾಗಿದೆ ಎಂದು ಸುಧಾಕರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News